ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ವಿರುದ್ಧ ದಲಿತರಿಂದ ಪ್ರತಿಭಟನೆ
ಬೆಂಗಳೂರು ಆಗಸ್ಟ್ 08: ದಲಿತ ಕಾರ್ಮಿಕರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸುತ್ತಿರುವ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತ ಮಂಡಳಿ ಹಾಗೂ ಸುಳ್ಳು ದೂರು ದಾಖಲಿಸಿದ ಪೊಲೀಸ್ ಅಧಿಕಾರಿ ರವಿಕುಮಾರ್ ಅವರ ವಿರುದ್ದ ಅಟ್ರಾಸಿಟಿ ಕಾಯ್ದೆಯಡಿ ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಡಾ ಸಿ ಎಸ್ ರಘು ಅವರ ನೇತೃತ್ವದಲ್ಲಿ ನೂರಾರು ದಲಿತ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ತಮಿಳುನಾಡಿನ ಮೂಲದ ರಾಜ ರಾಜೇಶ್ವರಿ ಮೆಡಿಕಲ್ ಕಾಲೇಜು ಹಾಗೂ ಆಡಳಿತ ಮಂಡಳಿ ಇಲ್ಲಿನ ದಲಿತ ಕಾರ್ಮಿಕರು ಹಾಗೂ ಮಹಿಳೆಯರ ಮೇಲೆ ದೌರ್ಜನ್ಯ ವೆಸಗುತ್ತಿದೆ. ಈ ಬಗ್ಗೆ ಹಲವಾರು ದೂರುಗಳನ್ನು ನೀಡಿದ್ದರೂ ಕೂಡಾ ಯಾವುದೇ ಕ್ರಮಗಳನ್ನು ಕೈಗೊಳ್ಳಲಾಗಿಲ್ಲ.

ಕಾರ್ಮಿಕ ಕಾಯ್ದೆಗಳಂತೆ ನೀಡಬೇಕಾದ ಸವಲತ್ತುಗಳನ್ನು ನೀಡಿದೆ ವಂಚಿಸಿ ಕೆಲಸದಿಂದ ತಗೆದುಹಾಕಿದ್ದಾರೆ. ಈ ಬಗ್ಗೆ ದ.ಸಂ.ಸ ಹಂತಹಂತವಾಗಿ ಕಾರ್ಮಿಕ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದೆ.
ಆದರೆ ದಲಿತರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದ್ದ ಪೊಲೀಸ್ ಇಲಾಖೆ ಆಡಳಿತ ಮಂಡಳಿಯೊಂದಿಗೆ ಸೇರಿ ಸುಳ್ಳು ದೂರುಗಳನ್ನು ದಾಖಲಿಸಿಕೊಂಡು ಮಾನಸಿಕ ಚಿತ್ರಹಿಂಸೆ ನೀಡುತ್ತಿದ್ದಾರೆ.

ಕಾರ್ಮಿಕರ ಮೇಲೆ ದೌರ್ಜನ್ಯ ನಡೆದಾಗ ಆಡಳಿತ ಮಂಡಳಿಯ ವಿರುದ್ದ ದೂರು ನೀಡಲು ಕಾರ್ಮಿಕರು ಇಲ್ಲಿನ ಕುಂಬಳಗೋಡು ಪೊಲೀಸ್ ಠಾಣೆಗೆ ಹೋದರೆ ಪೊಲೀಸ್ ಇನ್ಸಪೆಕ್ಟರ್ ರವಿಕುಮಾರ್ ಅವರು ದೂರು ಪಡೆಯಲು ನಿರಾಕರಿಸಿ ಕಾನೂನು ಕ್ರಮ ತಗೆದುಕೊಳ್ಳದೆ ನಿರ್ಲಕ್ಷತೆ ತೋರಿಸಿದ್ದಾರೆ.
ರವಿಕುಮಾರ್ ಅವರ ಮೇಲೆ ಮೇಲೆ ಕ್ರಮ ಕೈಗೊಳ್ಳುವಂತೆ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದದಿಂದ ಹಿರಿಯ ಅಧಿಕಾರಿಗಳಿಗೆ ನಿರ್ದೇಶನವನ್ನೂ ನೀಡಲಾಗಿದೆ. ಆದರೂ ಕೂಡಾ ದಲಿತರನ್ನು ತುಳಿಯುವ ಕಾರ್ಯದಲ್ಲಿ ತೊಡಗಿರುವ ಈ ಆಡಳಿತ ಮಂಡಳಿ ಹಾಗೂ ಪೊಲೀಸ್ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ರಾಜರಾಜೇಶ್ವರಿ ಆಸ್ಪತ್ರೆ ಆಡಳಿತ ಮಂಡಳಿಯ ದೌರ್ಜನ್ಯಕೋರರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಈಗಾಗಲೇ ಆಡಳಿತ ಮಂಡಳಿಯಿಂದ ದೌರ್ಜನ್ಯಕ್ಕೊಳಗಾದ ದಲಿತರಿಗೆ ಪರಿಹಾರ ಒದಗಿಸಿಕೊಡಬೇಕು. ಅಲ್ಲದೆ, ದಲಿತರಿಗೆ ರಕ್ಷಣೆ ನೀಡುವಲ್ಲಿ ವಿಫಲರಾಗಿ ಕರ್ತವ್ಯಲೋಪವೆಸಗಿದ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಬೆಕು ಎಂದು ಒತ್ತಾಯಿಸಿದರು.
ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆಸಿದ ಧರಣಿಯಲ್ಲಿ ಆಸ್ಪತ್ರೆಯ ನೂರಾರು ಕಾರ್ಮಿಕರು ಭಾಗವಹಿಸಿದ್ದರು.












Click it and Unblock the Notifications