ಕರ್ನಾಟಕದಲ್ಲಿ 'ಝೀರೊ ಕರೆಂಟ್ ಝೀರೋ ಬಿಲ್': ನವೆಂಬರ್ನಲ್ಲಿ ರಾಜ್ಯಕ್ಕೆ ಕತ್ತಲು: ಬೊಮ್ಮಾಯಿ ಭವಿಷ್ಯ
ಬೆಂಗಳೂರು, ಸೆಪ್ಟಂಬರ್ 08: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ. ವಿದ್ಯುತ್ ಉಚಿತ ಎಂದಿತ್ತು, ಈಗ ನೋಡಿದರೆ ವಿದ್ಯುತ್ ಸಿಗದಂತೆ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ರಾಜ್ಯ ಸರ್ಕಾರದ ವೈಫಲ್ಯಗಳ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ನಗರದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯದಲ್ಲಿ 200 ವಿದ್ಯುತ್ ಉಚಿತ ಕೊಡುವುದಾಗಿ ಹೇಳಿತ್ತು. ಈಗ ರಾಜ್ಯದಲ್ಲಿ ಕರೆಂಟ್ ಸಿಗದ ಪರಿಸ್ಥಿತಿ ನಿರ್ಮಾಣ ಆಗಿದೆ. 'ಝಿರೊ ಕರೆಂಟ್ ಝಿರೊ ಬಿಲ್ ಯೋಜನೆ' ಜಾರಿಗೆ ಬರುತ್ತದೆ. ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ನವೆಂಬರ್ ನಿಂದ ರಾಜ್ಯದಲ್ಲಿ ಕತ್ತಲೆ ಆವರಿಸುತ್ತದೆ ಎಂದು ಅವರು ಭವಿಷ್ಯ ನುಡಿದರು.

ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ ಅವರ ನೇತರತ್ವದಲ್ಲಿ ಸರ್ಕಾರದ ವಿರುದ್ದ ರಣಕಹಳೆ ಊದಿದ್ದೇವೆ. ಇದನ್ನು ಮುಂದಿನ ಒಂದುವರ್ಷ ರಾಜ್ಯದ ಎಲ್ಲ ಮನೆಗಳಿಗೆ ತಲುಪಿಸಿ ಮತ್ತೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಹೋರಾಟ ಆರಂಭಿಸಿದ್ದೇವೆ ಎಂದರು.
ಕಳೆದ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ನಾಯಕರು ಗ್ಯಾರೆಂಟಿಗಳ ಹೆಸರಿನಲ್ಲಿ ಸಹಿ ಮಾಡಿ ಕೊಟ್ಟರು, ಅದರೆ ಯಾವುದನ್ನು ಅವರು ಸಮರ್ಪಕ ಜಾರಿಮಾಡಿಲ್ಲ. ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಇವರು ಕೊಡುತ್ತಿರುವ ಐದು ಕೆಜಿ ಅಕ್ಕಿ ನರೇಂದ್ರ ಮೋದಿಯವರು ಕೊಡುತ್ತಿದ್ದಾರೆ. ಅಕ್ಕಿ ಬದಲು ಹಣ ಕೊಡುತ್ತೇವೆ ಎಂದು ಹೇಳಿ ಗ್ರಾಮೀಣ ಮಹಿಳೆಯ ಅರ್ಧ ದಿನದ ಕೂಲಿಯಷ್ಟು ಹಣ ಕೊಡುತ್ತಿಲ್ಲ. ಅನ್ನ ಭಾಗ್ಯದಲ್ಲಿ ದ್ರೋಹ ಮಾಡಿದ್ದಾರೆ ಎಂದು ಟೀಕಿಸಿದರು.
ಕೋಟಿಗೆ ಹುದ್ದೆಗಳು ಹರಾಜು?
ಕಾಂಗ್ರೆಸ್ ಸರ್ಕಾರ ಬಂದು ನೂರು ದಿನ ಕಳೆದಿದೆ, ಈ ಅವಧಿಯಲ್ಲಿಭ್ರಷ್ಟಾಚಾರ ಜೋರಾಗಿದ್ದು, ಅಧಿಕಾರಿಗಳ ಹುದ್ದೆ ಹರಾಜು ಆಗುತ್ತಿವೆ. ವಿಧಾನಸೌಧ, ಕುಮಾರಕೃಪಾದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಸ್ವತಃ ಕಾಂಗ್ರೆಸ್ ನಾಯಕರೇ ಹೇಳುತ್ತಿದ್ದಾರೆ.

ನಗರದ ಹೊರ ವಲಯದ ಅಧಿಕಾರಿ ವರ್ಗಾವಣೆಗೆ 8 ಕೋಟಿ ಕೊಟ್ಟವನು ಬಿಟ್ಟು ಹೋದ ಮೇಲೆ ಅದೇ ಹುದ್ದೆಯು 13 ಕೋಟಿ ರೂಪಾಯಿಗೆ ಹರಾಜಾಗಿದೆ ಎಂದು ಅವರು ಸರ್ಕಾರ ವಿರುದ್ಧ ಗಂಭೀರ ಆರೋಪ ಮಾಡಿದರು.
ರಾಜ್ಯದಲ್ಲಿ ಸಣ್ಣ ಪುಟ್ಟ ವಿಷಯಗಳಿಗೆ ಬಿಜೆಪಿ ಕಾರ್ಯಕರ್ತರಗೆ ಬಂಧನವಾಗುತ್ತಿದೆ. ಹಾಸನದ ಕಾರ್ಯಕರ್ತರನ್ನು ಬೆಂಗಳೂರಿನಲ್ಲಿ ವಿಚಾರಣೆ ಮಾಡಲಾಗುತ್ತಿದೆ. ಪೊಲಿಸ್ ಅಧಿಕಾರಿಗಳು ಕಾನೂನು ಪ್ರಕಾರ ಕೆಲಸ ಮಾಡಬೇಕು. ಮೂರು ತಿಂಗಳಲ್ಲಿ 172 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂತ್ರಿಗಳು ರೈತರು ಐದು ಲಕ್ಷ ಪರಿಹಾರಕ್ಕಾಗಿ ಸಾಯುತ್ತಾರೆ ಎಂದು ಹೇಳಿದ್ದಾರೆ. ಯಾರಾದರೂ ರೈತರು ಹಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರಾ? ಯಡಿಯೂರಪ್ಪ ಅವರ ಕಾಲದಲ್ಲಿ ರೈತರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು ಎಂದು ಅವರು ಟಾಂಗ್ ನೀಡಿದರು.
ಜನಪರ ಯೋಜನೆ ರದ್ದು ಮಾಡಿದ ಸರ್ಕಾರ
ಈ ಕಾಂಗ್ರೆಸ್ ಸರ್ಕಾರ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ನಮ್ಮ ರೈತರಿಗೆ ನೀಡಲಾಗುತ್ತಿದ್ದ 4000 ರೂ ನೀಡದೇ ಯೋಜನೆ ಸ್ಥಗಿತಗೊಳಿಸಿದೆ. ರೈತ ವಿದ್ಯಾನಿಧಿ ಯೋಜನೆ ಕತೆಯೂ ಹೀಗೆ ಆಗಿದೆ. ಮುಖ್ಯಮಂತ್ರಿಗಳು ಬಿಜೆಪಿಯವರು ನೀಚರು ಎನ್ನುತ್ತಾರೆ. ನೀವು ಒಂದು ಅಗಳು ಅಕ್ಕಿಯನ್ನು ನೀಡಿಲ್ಲ. ಜನರಿಗೆ ಅಕ್ಕಿ ಕೊಡುತ್ತಿರುವ ಮೋದಿಯವರು ನೀಚರಾ? ಒಂದು ಕಾಳು ಅಕ್ಕಿ ಕೊಡದ ನಿವು ನೀಚರಾ ಎಂದು ಅವರು ತಿರುಗೇಟು ನೀಡಿದರು.
ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದಗೌಡ , ಮಾಜಿ ಸಚಿವ ಆರ್ ಅಶೋಕ್, ಗೋಪಾಲಯ್ಯ, ಮುನಿರತ್ನ, ಬೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಮಾಜಿ ಸಚಿವರು, ಶಾಸಕರು ಉಪಸ್ಥರಿದ್ದರು.












Click it and Unblock the Notifications