ವಾಲ್ಮೀಕಿ ಜಯಂತಿಗೆ ಗೈರು: ಡಿಸಿಎಂ ಕ್ಷಮೆಯಾಚನೆ
ಬೆಂಗಳೂರು, ಅಕ್ಟೋಬರ್ 25: ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ತಾವು ಆ ಸಮುದಾಯದ ಕ್ಷಮೆಯಾಚಿಸುವುದಾಗಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಹೇಳಿದ್ದಾರೆ.
ರಾಜ್ಯ ಸರ್ಕಾರ ಬುಧವಾರ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಗೈರು ಹಾಜರಾದ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ ವಿರುದ್ಧ ವಿಧಾನಸೌಧದೆದುರು ನಾಯಕ ಸಮುದಾಯದ ಕೆಲ ಮುಖಂಡರು ಧರಣಿ ನಡೆಸಿದ ಹಿನ್ನೆಲೆಯಲ್ಲಿ ಗುರುವಾರ ಬೆಂಗಳೂರಿನಲ್ಲಿ ಅವರು ಪ್ರತಿಕ್ರಿಯೆ ನೀಡಿದರು.
ಪೂರ್ವ ನಿಗದಿ ಕಾರ್ಯಕ್ರಮದಂತೆ ಜಮಖಂಡಿ ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಬೇಕಿತ್ತು ಈ ಕಾರಣಕ್ಕಾಗಿ ಅನಿವಾರ್ಯವಾಗಿ ವಾಲ್ಮೀಕಿ ಜಯಂತಿಯಲ್ಲಿ ಪಾಲ್ಗೊಂಡಿರಲಿಲ್ಲ ಅದಕ್ಕಾಗಿ ವಿಷಾದಿಸುತ್ತೇನೆ ಎಂದ ಅವರು, ಜಮಖಂಡಿಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಅಲೆಯಿದ್ದು ನಮ್ಮ ಅಭ್ಯರ್ಥಿ ಆನಂದ್ ನ್ಯಾಮಗೌಡ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಳ್ಳಾರಿಯಲ್ಲಿ ಕೆಲವರು ಜಾತಿ ಹೆಸರಿನಲ್ಲಿ ಮತಯಾಚನೆ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ, ಯಾವುದೇ ಪಕ್ಷದ ಮುಖಂಡರು ಜಾತಿ ಹೆಸರಿನಲ್ಲಿ ಮತ ಯಾಚನೆ ಮಾಡಬಾರದು ಅಂತಹ ಪ್ರಯತ್ನವನ್ನು ಯಾವುದೇ ಸಮುದಾಯದವರು ಒಪ್ಪುವುದಿಲ್ಲ ಅದರಿಂದ ರಾಜಕೀಯ ಲಾಭ ಆಗಲಾರದು ಎಂದು ಹೇಳಿದರು.












Click it and Unblock the Notifications