ಇಟಲಿಯಲ್ಲಿರುವ ಕನ್ನಡಿಗರ ರಕ್ಷಣೆ ಪ್ರಕ್ರಿಯೆ ನಡೆಯುತ್ತಿದೆ: ಅಶ್ವತ್ಥ ನಾರಾಯಣ
ಬೆಂಗಳೂರು, ಮಾರ್ಚ್ 12: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಇಟಲಿ ಸೇರಿದಂತೆ ವಿವಿಧ ದೇಶಗಳಲ್ಲಿ ಕನ್ನಡಿಗರು ಸಿಲುಕಿಕೊಂಡಿದ್ದು ಭಾರತಕ್ಕೆ ಮರಳಲು ಕಷ್ಟಪಡುತ್ತಿದ್ದಾರೆ. ಈ ವಿಚಾರವಾಗಿ ಇಟಲಿಯಲ್ಲಿರುವ ಕನ್ನಡಿಗರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಆರೋಗ್ಯ ತಪಾಸಣೆಯ ಪ್ರಮಾಣಪತ್ರ ನೀಡದೆ ಇಟಲಿಯಿಂದ ಕಳುಹಿಸಲು ಸಾಧ್ಯವಿಲ್ಲ ಎಂದು ಅಲ್ಲಿನ ಆಡಳಿತ ಮಂಡಳಿ ಅವರನ್ನು ತಡೆದು ನಿಲ್ಲಿಸಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಕರ್ನಾಟಕ ಉಪ ಮುಖ್ಯಮಂತ್ರಿ ಡಾ ಅಶ್ವತ್ಥ ನಾರಾಯಣ ಪ್ರತಿಕ್ರಿಯೆ ನೀಡಿದ್ದು, 'ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್ ಕರೆತರಲು ಕೇಂದ್ರ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ' ಎಂದು ಹೇಳಿದ್ದಾರೆ.
ಫ್ರಾನ್ಸ್ನಿಂದ ಬಂದ ಮಹಿಳೆಗೆ ಕೊರೊನಾ ಶಂಕೆ, ಬೌರಿಂಗ್ ಆಸ್ಪತ್ರೆಗೆ ದಾಖಲು
ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಡಿಸಿಎಂ 'ಇಟಲಿ ಸೇರಿದಂತೆ ಕೊರೋನಾ ಪೀಡಿತ ಹೊರದೇಶಗಳಲ್ಲಿರುವ ಕನ್ನಡಿಗರನ್ನು ಕರೆತರಲು ನಮ್ಮ ಸರ್ಕಾರ ಕೇಂದ್ರದ ಶ್ರೀ ನರೇಂದ್ರ ಮೋದಿ ಸರಕಾರದ ಜೊತೆಗೆ ಸಹಕರಿಸಿ ಕಾರ್ಯೋನ್ಮುಖವಾಗಿದೆ. ತಜ್ಞ ವೈದ್ಯರನ್ನು ಕರೆದುಕೊಂಡು ಹೋಗಿ ಅಲ್ಲಿಯೇ ತೀವ್ರ ತಪಾಸಣೆಗೆ ಒಳಪಡಿಸಿ ಸುರಕ್ಷತೆಯಿಂದ ಅವರನ್ನು ಇಲ್ಲಿಗೆ ವಾಪಸ್ ಕರೆತರಲಾಗುವುದು'' ಎಂದು ಸ್ಪಷ್ಟನೆ ನೀಡಿದ್ದಾರೆ.
ಇಟಲಿಯಿಂದ ಭಾರತಕ್ಕೆ ಬಂದಿರುವ ಹಲವರಿಗೆ ಕೊರೊನಾ ಸೋಂಕು ಖಚಿತವಾಗಿದೆ. ಸಹಜವಾಗಿ ಇದು ಇಟಲಿಯಲ್ಲಿ ಸಿಲುಕಿಕೊಂಡಿರುವ ಕನ್ನಡಿಗರಿಗೆ ಆತಂಕ ಹೆಚ್ಚಿಸಿದೆ.
ಮತ್ತೊಂದೆಡೆ ಇಟಲಿಯಲ್ಲೂ ಕೊರೊನಾ ಕೇಸ್ಗಳ ಸಂಖ್ಯೆ ಗಂಟೆ ಗಂಟೆಯಿಂದ ಹೆಚ್ಚತ್ತಲೇ ಇದೆ. ಇದುವರೆಗೂ 12, 462ಕ್ಕೂ ಅಧಿಕ ಜನರಲ್ಲಿ ಕೊರೊನಾ ಪತ್ತೆಯಾಗಿದೆ. 827 ಜನರು ಈ ಸೋಂಕಿನಿಂದ ಸಾವನ್ನಪ್ಪಿದ್ದಾರೆ.