ಮೇಕೆದಾಟು ಅಣೆಕಟ್ಟಿಗೆ ತಮಿಳುನಾಡು ತಕರಾರು: ಶಾಸಕರು, ಅಧಿಕಾರಿಗಳೊಂದಿಗೆ ಡಿಕೆ ಶಿವಕುಮಾರ್ ಸಭೆ
ಬೆಂಗಳೂರು, ಜುಲೈ. 03: ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸೋಲಿಗೆ ಒಟ್ಟಾಗಿ ಪಣ ತೊಟ್ಟಿಬೆ. ಆದರೆ, ಕಾವೇರಿ ನದಿಗೆ ಮೇಕೆದಾಟಿನಲ್ಲಿ ಅಣೆಕಟ್ಟಯ ಕಟ್ಟುವ ವಿಚಾರದಲ್ಲಿ ಶತ್ರುಗಳಂತೆ ಆಡುತ್ತಿವೆ. ಅಣೆಕಟ್ಟು ಕಟ್ಟುವುದನ್ನು ಪ್ರತಿಷ್ಠೆಯ ಕಣವಾಗಿಸಿಕೊಂಡಿರುವ ಡಿಪಿ ಶಿವಕುಮಾರ್ ಅವರಿಗೆ ತಮಿಳುನಾಡು ಸರ್ಕಾರ ಅಡ್ಡಿಯಾಗಿದೆ.
ಕಳೆದೆರಡು ದಿನಗಳಿಂದ ತಮಿಳುನಾಡಿನ ಡಿಎಂಕೆ, ಎಐಡಿಎಂಕೆ ನಾಯಕರು ಈ ಬಗ್ಗೆ ಮಾತನಾಡುತ್ತಿದ್ದಾರೆ. ಅದಕ್ಕೆ ಕಾರಣ ಇತ್ತಿಚೆಗೆ ನಾನು ಸಚಿವನಾದ ಬಳಿಕ ದೆಹಲಿಗೆ ಅಧಿಕೃತ ಭೇಟಿ ನೀಡಿದ್ದು, ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದು. ಹೌದು, ಇದಾದ ನಂತರ ತಮಿಳುನಾಡಿನ ಪ್ರತಿಪಕ್ಷಗಳು ಸಿಎಂ ಎಂ.ಕೆ ಸ್ಟಾಲಿನ್ ವಿರುದ್ಧ ಸಮರಕ್ಕೆ ನಿಂತಿವೆ.

ಇದರ ಬೆನ್ನಲ್ಲೇ ಸೋಮವಾರ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬೆಂಗಳೂರಿನ ವಿಕಾಸ ಸೌಧದಲ್ಲಿ ಬೆಂಗಳೂರು ಗ್ರಾಮಾಂತರ ಭಾಗದ ವಿವಿಧ ನೀರಾವರಿ ಯೋಜನೆಗಳು ಮತ್ತು ಪ್ರಮುಖ ಕಾಮಗಾರಿಗಳ ವಿಚಾರವಾಗಿ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಶಾಸಕರು, ಸಂಸದರು ಮತ್ತು ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.
ಸಭೆಯಲ್ಲಿ ಮೇಕೆದಾಟು ಸಮತೋಲನ ಜಲಾಶಯ, ಕುಡಿಯುವ ನೀರು ಪೂರೈಕೆ ಯೋಜನೆ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಧಾನಸಭೆ ಕ್ಷೇತ್ರಗಳಲ್ಲಿ ಕುಡಿಯುವ ನೀರು, ಒಳಚರಂಡಿ ಹಾಗೂ ನೈರ್ಮಲ್ಯದ ವಿಚಾರವಾಗಿ ಸಚಿವರು, ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸಿದ್ದಾರೆ.
ಈ ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸಂಸದ ಡಿ ಕೆ ಸುರೇಶ್, ಶಾಸಕ ಬಾಲಕೃಷ್ಣ, ಶಿವಣ್ಣ, ಶರತ್ ಬಚ್ಚೇಗೌಡ, ಇಕ್ಬಾಲ್ ಹುಸೈನ್, ಡಾ. ರಂಗನಾಥ್, ಶ್ರೀನಿವಾಸ್, ಎಂಎಲ್ಸಿ ಎಸ್ ರವಿ, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್ ಮತ್ತಿತರರು ಭಾಗವಹಿಸಿದ್ದರು.

ಇತ್ತ, ಮೇಕೆದಾಟು ಪ್ರದೇಶದಲ್ಲಿ ಕಾವೇರಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಕರ್ನಾಟಕ ಸರ್ಕಾರಕ್ಕೆ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಸೋಮವಾರ ಹೇಳಿದ್ದಾರೆ. "ಅವರು ಏನು ಬೇಕಾದರೂ ಹೇಳಬಹುದು. ಅಣೆಕಟ್ಟು ಕಟ್ಟುತ್ತೇವೆ ಎಂದು ಹೇಳುತ್ತಾರೆ. ಯಾರೂ ತಡೆಯಲು ಸಾಧ್ಯವಿಲ್ಲ ಎನ್ನುತ್ತಾರೆ. ಇವೆಲ್ಲ ಕೇವಲ ರಾಜಕೀಯ ಮಾತುಗಳು. ನಾವು ಅದನ್ನು ಎಂದಿಗೂ ಅನುಮತಿಸುವುದಿಲ್ಲ ಮತ್ತು ಕಾನೂನಾತ್ಮಕವಾಗಿ ಅದನ್ನು ಮಾಡಲಾಗುವುದಿಲ್ಲ. ಇವು ಕೇವಲ ರಾಜಕೀಯ ಸ್ಟಂಟ್ಗಳು" ಎಂದು ತಿಳಿಸಿದ್ದಾರೆ.
ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗ್ಗೆ ಚರ್ಚೆ
ಬಿಎಮ್ಆರ್ಡಿಎ ಸಭೆ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಬೆಂಗಳೂರು ಟ್ರಾಫಿಕ್ ಸಮಸ್ಯೆ ನಿವಾರಣೆ, ಬೆಂಗಳೂರಿನಲ್ಲಿ ಸುರಂಗ ರಸ್ತೆ ಹಾಗೂ ಫ್ಲೈ ಓವರ್ ನಿರ್ಮಾಣ ವಿಚಾರವಾಗಿ ಅಂತಾರಾಷ್ಟ್ರೀಯ ಸಂಸ್ಥೆಯು ತಮ್ಮ ವಿಷಯ ಮಂಡಿಸಿದ್ದಾರೆ. ಇದರ ಬಗ್ಗೆ ಶಾಸಕರು, ಸಚಿವರ ಅಭಿಪ್ರಾಯ ಪಡೆಯಲಾಗಿದೆ. ಈ ವಿಚಾರವಾಗಿ ನಮ್ಮ ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.
ಬಿಬಿಎಂಪಿ ಚುನಾವಣೆ ವಿಚಾರವಾಗಿ ಮಾತನಾಡಿರುವ ಅವರು, "ಕಾನೂನು ಪ್ರಕಾರ, ನ್ಯಾಯಾಲಯ ನಿರ್ದೇಶನದಂತೆ ಬಿಬಿಎಂಪಿ ಚುನಾವಣೆ ಮಾಡಲಾಗುವುದು" ಎಂದು ತಿಳಿಸಿದ್ದಾರೆ. ಬಿಜೆಪಿಯ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿ, "ಅವರು ಬಹಳ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ. ಅವರು ಪ್ರತಿಭಟನೆ ಹೆಸರಿನಲ್ಲಿ ನಮಗೆ ಪ್ರಚಾರ ನೀಡುತ್ತಿದ್ದಾರೆ. ನಾವು ಹೇಗೆ ಜನಪರ ಯೋಜನೆ ಮಾಡುತ್ತಿದ್ದೇವೆ ಎಂದು ಜನರಿಗೆ ತಿಳಿಸುತ್ತಿದ್ದಾರೆ" ಎಂದು ವ್ಯಂಗ್ಯವಾಡಿದ್ದಾರೆ.












Click it and Unblock the Notifications