ಕೋವಿಡ್ನಿಂದ ಗುಣಮುಖ: ಸ್ವ-ಅನುಭವ ಹಂಚಿಕೊಂಡ ಡಿಸಿಎಂ
ಬೆಂಗಳೂರು, ಸೆ. 01: ಕೋವಿಡ್ ತಡೆಗಟ್ಟಲು ಮಾಸ್ಕ್ ರಾಮಬಾಣ. ಮಾರಕ ವೈರಸ್ ಜೊತೆಗಿನ ಹೋರಾಟದಲ್ಲಿ ಮಾಸ್ಕ್ ಅತ್ಯುತ್ತಮ ಅಸ್ತ್ರವಾಗಿದೆ. ವೈಜ್ಞಾನಿಕವಾಗಿಯೂ ಈ ಅಂಶ ಸಾಬೀತಾಗಿದ್ದು, ಸಾರ್ವಜನಿಕರು ಇದನ್ನು ಅರ್ಥ ಮಾಡಿಕೊಂಡು ಮಾಸ್ಕ್ನ್ನು ತಪ್ಪದೇ ಹಾಗೂ ಶುಚಿ ಮಾಡಿಕೊಂಡು ಬಳಸಬೇಕು ಎಂದು ಸ್ವತಃ ವೈದ್ಯರಾಗಿರುವ ಡಿಸಿಎಂ ಡಾ. ಸಿ.ಎನ್. ಅಶ್ವಥ್ ನಾರಾಯಣ ಹೇಳಿದರು.
ಕೋವಿಡ್ ಸೋಂಕಿಗೆ ತುತ್ತಾಗಿ ಹಲವಾರು ದಿನ ಮನೆಯಲ್ಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆದಿದ್ದ ಅವರು ಗುರುವಾರ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಗೆ ಹಾಜರಾಗಿದ್ದರು. ಈ ವೇಳೆ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿದೀಗಳೊಂದಿಗೆ ಮಾತನಾಡಿದರು.
ಕೋವಿಡ್ ಮೊದಲು ಹಾಗೂ ನಂತರ ಉನ್ನತ ಶಿಕ್ಷಣ ಇಲಾಖೆ ಹೇಗಿದೆ?
ಕೊರೊನಾ ವೈರಸ್ ಮತ್ತಷ್ಟು ಹರಡಲು ಬಿಡಬಾರದು. ಇದರಲ್ಲಿ ಪ್ರತಿಯೊಬ್ಬರ ಕರ್ತವ್ಯವೂ ಇದೆ. ಮಾಸ್ಕ್ ತೆಗೆದು ಮಾತನಾಡುವಂಥ ಕೆಲಸವನ್ನು ಯಾರು ಮಾಡಬಾರದು. ದಂಡ ವಿಧಿಸಲು ಸರಕಾರಕ್ಕೆ ಇಷ್ಟವಿಲ್ಲ. ಆದರೆ, ಜನರು ಈ ಬಗ್ಗೆ ಮೂಡಿಸಲಾಗಿರುವ ಜಾಗೃತಿಯ ಬಗ್ಗೆ ಗಮನ ಹರಿಸಬೇಕು ಎಂದು ಡಾ. ಅಶ್ವಥ್ ನಾರಾಯಣ ಮನವಿ ಮಾಡಿದರು.
ದಂಢ ವಿಧಿಸಲು ಸರ್ಕಾರ ನಿರ್ಧಾರ
ಮಾಸ್ಕ್ ಧರಿಸದಿದ್ದರೆ ನಗರ ಪ್ರದೇಶದಲ್ಲಿ 1000 ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸಲು ಸರಕಾರ ನಿರ್ಧರಿಸಿದೆ. ಆದರೆ, ಆ ದಂಡದ ಪ್ರಮಾಣ ಹೆಚ್ಚಾಗಿದೆ ಎಂದು ಜನರ ದೂರುತ್ತಿರುವ ಹಿನ್ನೆಲೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಇಲ್ಲಿ ದಂಡ ಜಾಸ್ತಿ, ಕಡಿಮೆ ಎನ್ನುವುದಕ್ಕಿಂತ ಜನರ ಆರೋಗ್ಯವೇ ಮುಖ್ಯ. ಕೋವಿಡ್ ಪೀಡೆ ಕೆಲದಿನ ಇದ್ದು ಹೋಗಿಬಿಡುತ್ತೆ ಎನ್ನುವ ನಂಬಿಕೆ ಇತ್ತು. ಅದು ಬಹಳ ಕಾಲ ಮುಂದುವರಿದಿದೆ. ಹೀಗಾಗಿ ಜನರ ಆರೋಗ್ಯವನ್ನು ರಕ್ಷಣೆ ಮಾಡುವುದು ಸರಕಾರದ ಕರ್ತವ್ಯ ಹಾಗೂ ಜನರು ಮಾಸ್ಕ್ ಅನ್ನು ತಪ್ಪದೇ ಧರಿಸಬೇಕು ಎಂದರು.
ವೈರಸ್ ಜತೆಯೇ ಜೀವನ
ಸದ್ಯದ ಪರಿಸ್ಥಿತಿಯಲ್ಲಿ ಜನರು ವೈರಸ್ ಜತೆಯೇ ಜೀವನ ನಡೆಸಬೇಕು. ಹೀಗಾಗಿ ಹೊರಗೆ ಬಂದಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಲ್ಲದಿದ್ದರೆ ಜೀವಕ್ಕೆ ಅಪಾಯ, ಜತೆಗೆ ವೈರಸ್ ಇನ್ನು ವ್ಯಾಪಕವಾಗಿ ಹರಡುತ್ತದೆ. ಆದರೂ ಜನರು ಮಾಸ್ಕ್ ಧರಿಸದೇ ಮುಕ್ತವಾಗಿ ಓಡಾಟ ನಡೆಸುತ್ತಿರುವುದು ಸರಿಯಲ್ಲ. ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಇತರರ ಆರೋಗ್ಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ದಂಡವನ್ನು ವಿಧಿಸಲಾಗುತ್ತಿದೆ ಎಂದು ಡಿಸಿಎಂ ಹೇಳಿದರು.
ನಾನು ಸೋಂಕಿತನಾಗಿದ್ದೆ
ಇದೇ ಸಂದರ್ಭದಲ್ಲಿ ತಾವು ಸೋಂಕಿತರಾಗಿದ್ದಾಗಿನ ಅನುಭವವನ್ನು ಡಾ. ಅಶ್ವಥ್ ನಾರಾಯಣ ಹಂಚಿಕೊಂಡರು. ಕೊರೊನಾ ವೈರಸ್ ನಾವಂದುಕೊಳ್ಳುವಷ್ಟು ಸಣ್ಣ ಕಾಯಿಲೆ ಅಲ್ಲ. ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದರಿಂದ ಸಂಪೂರ್ಣ ಗುಣಮುಖರಾಗುವವರೆ ಚಿಕಿತ್ಸೆ ಪಡೆದು ನಂತರ ಕ್ವಾರಂಟೈನ್ ಅವಧಿ ಮುಗಿಸಿ ಬಂದಿದ್ದೇನೆ.
ಸೋಂಕು ತಗುಲುವ ಮುನ್ನ, ಗುಣಮುಖನಾದ ನಂತರ ಹೇಗೆ ಆರೋಗ್ಯ ಇರುತ್ತದೆ ಎಂಬ ಅನುಭವ ಸ್ವತಃ ನನಗೇ ಆಗಿದೆ. ಕ್ವಾರಂಟೈನ್ ಆಗಿ ನಾನು ಎದುರಿಸಿದ ಕಷ್ಟದ ಪರಿಸ್ಥಿತಿಯನ್ನು ಬೇರಾರೂ ಎದುರಿಸುವುದು ಬೇಡ. ಹೀಗಾಗಿ ವೈರಸ್ ಕುರಿತು ಹಗುರವಾಗಿ ತೆಗೆದುಕೊಳ್ಳುವುದು ಬೇಡ ಎಂದು ತಮ್ಮ ಅನುಭವ ಹಂಚಿಕೊಂಡರು.
ಸಣ್ಣ ಕಾಯಿಲೆ ಅಲ್ಲ!
ಕೋವಿಡ್ ಹಗುರವಾಗಿ ತೆಗೆದುಕೊಳ್ಳುವ ಕಾಯಿಲೆ ಅಲ್ಲ. ಅದು ಖಂಡಿತಾ ಮಾರಕ ವೈರಸ್. ಸ್ವತಃ ನಾನೇ ಸೋಂಕಿತನಾಗಿ ಚಿಕಿತ್ಸೆ ಪಡೆದು ಗುಣಮುಖನಾಗಿ ಹೊರಗೆ ಬಂದಿದ್ದೇನೆ. ಎಲ್ಲರೂ ಸುರಕ್ಷಿತವಾಗಿರಬೇಕು ಎಂಬುದು ನನ್ನ ಕಾಳಜಿ ಎಂದು ಡಾ. ಅಶ್ವಥ್ ನಾರಾಯಣ ಹೇಳಿದರು.
Recommended Video