ಕಲಬುರಗಿ ಜಿಲ್ಲೆಗೆ ಪ್ರವೇಶಿಸುವ ಅಕ್ರಮ ವಲಸಿಗರ ಮೇಲೆ ನಿಗಾ ವಹಿಸಿ
ಬೆಂಗಳೂರು, ಮೇ 29: ಕಲಬುರಗಿ ಜಿಲ್ಲೆಗೆ ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶದಿಂದ ಹೆಚ್ಚಿನ ಪ್ರಮಾಣದಲ್ಲಿ ವಲಸಿಗರು ಬರುವ ನಿರೀಕ್ಷೆ ಇದ್ದು, ತಪಾಸಣೆ ನಡೆಸದೇ ಯಾವುದೇ ಕಾರಣಕ್ಕೂ ಹೊರ ರಾಜ್ಯಗಳಿಂದ ಬರುವವರನ್ನು ಜಿಲ್ಲೆಗೆ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚಿಸಿದ್ದಾರೆ.
ಮಹಾರಾಷ್ಟ್ರದಿಂದ ಸೇರಿದಂತೆ ಬೇರೆ ರಾಜ್ಯಗಳಿಂದ 35,723 ಜನರು ಬಂದಿದ್ದು, ಅವರನ್ನು 547 ಕ್ವಾರಂಟೈನ್ ಕೇಂದ್ರಗಳಲ್ಲಿ ಕ್ವಾರೆಂಟೈನಲ್ಲಿಡಲಾಗಿದೆ. ಅವರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು. ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆದೇಶಿಸಿದ್ದಾರೆ.
ಕಲಬುರಗಿ-ಬೆಂಗಳೂರು ನಡುವೆ ಹಾರಾಟ ಆರಂಭಿಸಿದ ಅಲಯನ್ಸ್ ಏರ್
ವಿಕಾಸಸೌಧದಲ್ಲಿಂದು ಕಲಬುರ್ಗಿ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದ ನಡೆಸಿದ ಗೋವಿಂದ ಎಂ ಕಾರಜೋಳ ''ಕಲಬುರಗಿ ಜಿಲ್ಲೆಗೆ ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ಇತರ ರಾಜ್ಯಗಳಿಂದ 35,723 ವಲಸಿಗರು ಆಗಮಿಸಿದ್ದು, 13,701 ಮಾದರಿಗಳನ್ನು ಸಂಗ್ರಹಿಸಲಾಗಿದೆ. ಒಟ್ಟಾರೆ ಕಲಬುರಗಿಯಲ್ಲಿ ಈವರೆಗೆ 20743 ಕೊವಿಡ್ 19 ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ 4,34,438 ಪ್ರಯಾಣಿಕರ ಸ್ಕ್ರೀನಿಂಗ್ ಮಾಡಲಾಗಿದೆ. ಅಂತರ್ ರಾಜ್ಯ ಚೆಕ್ ಪೋಸ್ಟ್ ಗಳಲ್ಲಿ 35,723 ಜನರನ್ನು ಸ್ಕ್ರೀನಿಂಗ್ ಮಾಡಲಾಗಿದೆ. 174 ಜನರನ್ನು ಐಸೋಲೇಶನ್ ನಲ್ಲಿಡಲಾಗಿದೆ'' ಎಂದು ಮಾಹಿತಿ ನೀಡಿದರು.
ಜೇವರ್ಗಿಯಲ್ಲಿ ಹೆಚ್ಚು ಜನರು ಭೀಮಾ ನದಿ ತೀರದ ಮೂಲಕ ಜಿಲ್ಲೆಗೆ ಆಗಮಿಸುತ್ತಿರುವ ಮಾಹಿತಿ ಇದೆ. ತಪಾಸಣೆಗೊಳಗಾಗದೇ ನೇರವಾಗಿ ಅವರ ಊರುಗಳಿಗೆ ತೆರಳಿ, ಇತರರಿಗೆ ಹರಡದಂತೆ ಮುಂಜಾಗ್ರತೆ ವಹಿಸಬೇಕು. ಅನಧಿಕೃತವಾಗಿ ಜಿಲ್ಲೆಗೆ ಪ್ರವೇಶಿಸಿ ತಿರುಗಾಡುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಿ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ಹಾಗೂ ಪೊಲೀಸರು ಹೆಚ್ಚು ನಿಗಾವಹಿಸಬೇಕು ಎಂದರು
ಅಧಿಕಾರಿಗೆ ಬೆದರಿಕೆ: ಶಾಸಕ ರೇವೂರ ವಿರುದ್ಧ ಕೇಸ್ ದಾಖಲಿಸಲು ಸಿದ್ದರಾಮಯ್ಯ ಆಗ್ರಹ
ಯಾವುದೇ ನಿರಾಶ್ರಿತರು, ವಲಸಿಗರು ಹೊರ ಜಿಲ್ಲೆಗಳಿಂದ ಬಂದು ಕ್ವಾರಂಟೈನ್ನಲ್ಲಿರುವವರು ಹಸಿವಿನಿಂದ ಬಳಲಬಾರದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಪೇಕ್ಷೆ ಇದಾಗಿದ್ದು, ಈ ಕುರಿತು ಜಿಲ್ಲಾಡಳಿತ ಮುತುವರ್ಜಿ ವಹಿಸಬೇಕು. ಆಹಾರ ಸಾಮಗ್ರಿಗಳಲ್ಲಿ ದುರುಪಯೋಗವಾಗುತ್ತಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿದ್ದು, ಈ ಕುರಿತು ತನಿಖೆ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚಿಸಿದರು.
ಬೇಸಿಗೆ ಇರುವುದರಿಂದ ಕುಡಿಯುವ ನೀರಿನ ಅಭಾವ ಇರುವ ಸಾಧ್ಯತೆ ಇದೆ. ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು. ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಬಯಸುವವರಿಗೆ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಒದಗಿಸಬೇಕು. ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಸ್ಪಚ್ಚತೆಯನ್ನು ಕಾಪಾಡಬೇಕು ಎಂದು ತಿಳಿಸಿದ್ದಾರೆ.