ಬೆಂಗಳೂರಲ್ಲಿ ಪ್ರಗತಿಯಲ್ಲಿರುವ ಕಾಮಗಾರಿ ಒಂದು ತಿಂಗಳಲ್ಲಿ ಪೂರ್ಣಗೊಳಿಸಲು ಡೆಡ್ಲೈನ್
ಬೆಂಗಳೂರಿನಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ. ಮಳೆಗಾಲ ಪ್ರಾರಂಭವಾಗುತ್ತಿದ್ದು, ಈಗಾಗಲೇ ಪ್ರಾರಂಭಿಸಲಾಗಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವುದಕ್ಕೆ ಡೆಡ್ಲೈನ್ ನಿಗದಿ ಮಾಡಲಾಗಿದೆ. ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಪ್ರಗತಿಯಲ್ಲಿರುವ ಎಲ್ಲ ಪ್ರವಾಹ ತಡೆ ಕಾಮಗಾರಿಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸುವಂತೆ ಎಫ್.ಇ.ಸಿ.ಸಿ. ವಿಶೇಷ ಆಯುಕ್ತರಾದ ಸುಷಮಾ ಗೋಡಬೋಲೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಮಳೆಯ ಸಂದರ್ಭದಲ್ಲಿ ರಸ್ತೆಗಳ ಮೇಲೆ ನೀರು ನಿಲ್ಲುವುದು ಹಾಗೂ ಪ್ರವಾಹ ಸಮಸ್ಯೆಗಳು ಉಂಟಾಗದಂತೆ ತಡೆಯುವ ನಿಟ್ಟಿನಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಅಗತ್ಯ ಕ್ರಮಗಳನ್ನು ವಿಳಂಬವಿಲ್ಲದೆ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಟಾಟಾನಗರದಲ್ಲಿ ದೊಡ್ಡಬೊಮ್ಮಸಂದ್ರ ಕೆರೆಯಿಂದ ಟಾಟಾನಗರದವರೆಗೆ 6 ಮೀಟರ್ ಅಗಲದ 900 ಮೀ. ಉದ್ದದ ಮಳೆನೀರು ಕಾಲುವೆಯ ತಡೆಗೋಡೆಯನ್ನು ಎತ್ತರಿಸುವ ಕಾಮಗಾರಿ ನಡೆಯುತ್ತಿದ್ದು, ಅದನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.

ಹೆಬ್ಬಾಳ ಕೆರೆ ವೆಟ್ ಲ್ಯಾಂಡ್ ಪರಿಶೀಲನೆ
192 ಎಕರೆ ವ್ಯಾಪ್ತಿಯ ಹೆಬ್ಬಾಳ ಕೆರೆಯಲ್ಲಿ 15.90 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ವೆಟ್ಲ್ಯಾಂಡ್ ಹಾಗೂ ಇನ್ಲೆಟ್ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಅವುಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ ಸಮೀಪ ಜಲಾವೃತ ಸಮಸ್ಯೆ ದೀರ್ಘಕಾಲದಿಂದ ಇದ್ದು, ಈ ಪ್ರದೇಶದಲ್ಲಿ ವೀರಣ್ಣಪಾಳ್ಯದಿಂದ ಹೆಬ್ಬಾಳ ವ್ಯಾಲಿವರೆಗೆ 1.2 ಕಿ.ಮೀ. ಉದ್ದದ ಎರಡು ಮಾನವ ನಿರ್ಮಿತ ಕಾಲುವೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. 800 ಮೀ. ಉದ್ದದ ಆರ್.ಸಿ.ಸಿ ತಡೆಗೋಡೆ ನಿರ್ಮಿಸಲಾಗಿದ್ದು, ಉಳಿದ ಭಾಗದಲ್ಲಿಯೂ ಆರ್.ಸಿ.ಸಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.
ನಾಗವಾರ ಕೆರೆ ಪರಿಶೀಲನೆ
96 ಎಕರೆ ವ್ಯಾಪ್ತಿಯ ನಾಗವಾರ ಕೆರೆಯಲ್ಲಿ 15.90 ಕೋಟಿ ರೂ. ವೆಚ್ಚದಲ್ಲಿ ಹೂಳೆತ್ತುವಿಕೆ, ಒಳಹರಿವು ಮತ್ತು ಹೊರಹರಿವು ವ್ಯವಸ್ಥೆ, ಏರಿ ಅಭಿವೃದ್ಧಿ, ವಾಯುವಿಹಾರ ಮಾರ್ಗ, ವೆಟ್ಲ್ಯಾಂಡ್, ಇನ್ಲೆಟ್, ಔಟ್ಲೆಟ್ ಹಾಗೂ ಐಲ್ಯಾಂಡ್ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಜೂನ್ ಅಂತ್ಯದೊಳಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮಳೆಗಾಲದ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ವಿಪತ್ತು ಉಪಶಮನ ನಿಧಿಯಡಿ ಕೈಗೊಳ್ಳಲಾಗುತ್ತಿರುವ ಪ್ರವಾಹ ತಡೆ ಕಾಮಗಾರಿಗಳಿಗೆ ವೇಗ ನೀಡಿ, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಈ ವೇಳೆ ಕಾರ್ಯಪಾಲಕ ಎಂಜಿನಿಯರರಾದ ನಿತ್ಯಾ, ನಾಗಪ್ಪ ಕಮಾಟಿ, ಮಹದೇವ್, ಸಹಾಯಕ ಕಾರ್ಯಪಾಲಕ ಎಂಜಿನಿಯರರು ಸೇರಿದಂತೆ ಇತರ ಅಧಿಕಾರಿಗಳು ಇದ್ದರು.












Click it and Unblock the Notifications