ಚುನಾವಣೆ ಹೊತ್ತಲ್ಲೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ಗೆ ಕೋರ್ಟ್ ಸಮನ್ಸ್: ಯಾಕೆ?
ಬೆಂಗಳೂರು, ಮಾರ್ಚ್ 29: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ ಅಪಪ್ರಚಾರ ಮಾಡಿದ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಏಪ್ರಿಲ್ 29ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಜರಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ.
ನಿಗದಿಯಂತೆ ಮಾರ್ಚ್ 28 ಗುರುವಾರ ಅವರು ಕೋರ್ಟ್ ಮುಂದೆ ಹಾಜರಾಗಬೇಕಿತ್ತು, ಆದರೆ ಅವರು ಸಮನ್ಸ್ ಸರ್ವ್ ಆಗಿಲ್ಲ ಎಂದು ಹಾಜರಾಗಿರಲಿಲ್ಲ. ಹಾಗಾಗಿ ನ್ಯಾಯಾಲಯ ಮತ್ತೆ ಸಮನ್ಸ್ ಜಾರಿ ಮಾಡಿ ಒಂದು ತಿಂಗಳ ಕಾಲಾವಕಾಶ ನೀಡಿದೆ. ಹಾಗಾಗಿ ಅವರು ಏ.29ಕ್ಕೆ ಖುದ್ದು ಹಾಜರಾಗಬೇಕು ಇಲ್ಲವೇ ವಕೀಲರ ಮೂಲಕ ಪ್ರತಿನಿಧಿಸಿ ಹಾಜರಾತಿಗೆ ವಿನಾಯಿತಿ ಪಡೆಯಬೇಕು ಎಂದು ಕೋರ್ಟ್ ತಿಳಿಸಿದೆ.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಪಪ್ರಚಾರ ಮಾಡಿದ್ದಾರೆಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಖಾಸಗಿ ದೂರು ನೀಡಿತ್ತು. ದೂರಿನ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಪ್ರಕರಣದ ಪ್ರತಿವಾದಿಗಳಾದ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಮಾರ್ಚ್ 28ಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.
ಜೂನ್ 1ಕ್ಕೆ ರಾಹುಲ್ ಗಾಂಧಿ ಹಾಜರಿ
ಗುರುವಾರ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಪರ ವಕೀಲರು ಹಾಜರಾಗಿ, ನಮ್ಮ ಕಕ್ಷಿದಾರರು ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಆದ್ದರಿಂದ ಖುದ್ದು ಹಾಜರಿಗೆ ಅವಕಾಶ ನೀಡಬೇಕು ಎಂದು ಕೋರಿದರು. ಅಂಶವನ್ನು ಪರಿಗಣಿಸಿದ ನ್ಯಾಯಧೀಶರು, ಜೂನ್ 1ರಂದು ಖುದ್ದು ಹಾಜರಾಗಬೇಕು ಎಂದು ಸೂಚನೆ ನೀಡಿತು.

ದೂರುದಾರರ ಪರ ವಾದಿಸಿದ ವಕೀಲರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರಿಗೆ ಪೊಲೀಸರು ಸಮನ್ಸ್ ಜಾರಿ ಮಾಡಿಲ್ಲ. ಈ ವಿಚಾರದಲ್ಲಿ ಪೊಲೀಸರ ಕರ್ತವ್ಯ ಲೋಪ ಎದ್ದು ಕಾಣಿಸುತ್ತಿದೆ ಎಂದು ವಿವರಿಸಿದರು. ಈ ವೇಳೆ ನ್ಯಾಯಪೀಠ, ಏಪ್ರಿಲ್ 29ರಂದು ಖುದ್ದು ಹಾಜರಿಗೆ ಸಮನ್ಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿತು.
ಪ್ರಕರಣದ ಹಿನ್ನೆಲೆ ಏನು..?
ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಅಂದಿನ ಆಡಳಿತಾರೂಢ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು 40% ಕಮಿಷನ್ ಮತ್ತಿತರ ಆರೋಪಗಳನ್ನು ಮಾಡಿದ್ದರು. ಅಲ್ಲದೇ ಭ್ರಷ್ಟಾಚಾರದ ಆರೋಪದ ಜಾಹೀರಾತು ನೀಡಿದ್ದರು. ಇದರಿಂದಾಗಿ ಬಿಜೆಪಿಗೆ ಹಾನಿಯಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.












Click it and Unblock the Notifications