ದೂರು ಸಲ್ಲಿಸಲು 45 ದಿನ ವಿಳಂಬ, ಕೇಸಿನ ಎಫ್ ಐಆರ್ ರದ್ದು
ಬೆಂಗಳೂರು, ಜೂ. 24: ಘಟನೆ ನಡೆದ ಬಳಿಕ ದೂರು ಸಲ್ಲಿಸಲು 45 ದಿನ ವಿಳಂಬ ಮಾಡಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್, ಕೇಸಿನ ಎಫ್ಐಆರ್ ಅನ್ನೇ ರದ್ದುಗೊಳಿಸಿದೆ. ಹಣದ ವ್ಯವಹಾರದಲ್ಲಿ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ ಸಂಬಂಧ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಪಡಿಸಿ ಹೈಕೋಟ್ ಆದೇಶಿಸಿದೆ.
ಪ್ರಕರಣದ ಎರಡನೇ ಆರೋಪಿ ದುರ್ಗಾರಾಮ್, ತಮ್ಮ ವಿರುದ್ಧ ಹಲಸೂರು ಗೇಟ್ ಠಾಣಾ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ.
ಕೋರ್ಟ್ ಏನು ಹೇಳಿದೆ:
ಹೈಕೋರ್ಟ್, ಘಟನೆ ನಡೆದ ದಿನದಿಂದ ಒಂದೂವರೆ ತಿಂಗಳ ನಂತರ ಹಲ್ಲೆ ನಡೆಸಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಅಮಮಾನ ಮಾಡಿದ ಆರೋಪ ಸಂಬಂಧ ದೂರುದಾರರು ದೂರು ದಾಖಲಿಸಿದ್ದಾರೆ. ಆದರೆ, ದೂರು ಸಲ್ಲಿಸಲು ವಿಳಂಬ ಮಾಡಿರುವುದಕ್ಕೆ ಸೂಕ್ತ ಕಾರಣ ಹಾಗೂ ವಿವರಣೆ ನೀಡಿಲ್ಲ. ಇನ್ನೂ ಅರ್ಜಿದಾರರು ಹಲ್ಲೆ ನಡೆಸಿರುವುದರಿಂದ ದೂರುದಾರಿಗೆ ಯಾವುದಾದರು ಗಾಯ ಉಂಟಾಗಿರುವ ಬಗ್ಗೆ ಯಾವುದೇ ದಾಖಲೆಗಳನ್ನು ಪೊಲೀಸರು ಸಲ್ಲಿಸಿಲ್ಲ. ಹಾಗಾಗಿ ದುರುದ್ದೇಶದಿಂದ ದೂರು ದಾಖಲಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ, ದೂರುದಾರರನ್ನು ನಿಂದಿಸಲು ಅರ್ಜಿದಾರರು ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಆ ಪದಗಳು ಸಾರ್ವಜನಿಕ ಶಾಂತಿಗೆ ಯಾವುದೇ ರೀತಿ ಭಂಗ ತಂದಿಲ್ಲ. ಇಂತಹ ಸಂದರ್ಭದಲ್ಲಿ ಅರ್ಜಿದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ಮುಂದುವರಿಸಿದರೆ ಅದು ಕಾನೂನಿನ ದುರ್ಬಳಕೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.
ಪ್ರಕರಣದ ಹಿನ್ನೆಲೆ?
ದೂರುದಾರ ಬಾಬುಲಾಲ್, ಹಲಸೂರು ಗೇಟ್ ಠಾಣಾ ಪೊಲೀಸರಿಗೆ ದೂರು ಸಲ್ಲಿಸಿ, ತುಳಸೀರಾಮ್ ಎಂಬಾತ ತಮ್ಮಿಂದ 66 ಲಕ್ಷ ಹಣ ಪಡೆದು ಹಿಂದಿರುಗಿಸದೆ ಸತಾಯಿಸುತ್ತಿದ್ದಾರೆ. ಈ ಕುರಿತು ಮಾತುಕತೆ ನಡೆಸಲು ತುಳಸೀರಾಮ್ ಮತ್ತು ಆತನ ಸ್ನೇಹಿತ ದುರ್ಗಾರಾಮ್ ನನ್ನನ್ನು ಭೇಟಿಯಾಗಿದ್ದರು. ಈ ವೇಳೆ ನನ್ನ ಮೇಲೆ ಇಬ್ಬರು ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದರು.
ಅದನ್ನು ಆಧರಿಸಿ ಎಫ್ಐಆರ್ ದಾಖಲಿಸಿದ್ದ ಪೊಲೀಸರು, ತನಿಖೆ ಪೂರ್ಣಗೊಳಿಸಿ ತುಳಸರಾಮ್ ಮತ್ತು ದುರ್ಗಾರಾಮ್ ವಿರುದ್ಧ ಜೀವ ಬೆದರಿಕೆ, ಹಲ್ಲೆ ಮತ್ತು ಅವಮಾನ ಮಾಡಿರುವ ಬಗ್ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ದೋಷಾರೋಪ ಪಟ್ಟಿಯನ್ನು ಅಂಗೀಕರಿಸಿದ್ದ ನಗರದ 1ನೇ ಎಸಿಎಂಎಂ ಕೋರ್ಟ್, ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿತ್ತು. ಇದರಿಂದ ಪ್ರಕರಣದಲ್ಲಿ ಎರಡನೇ ಆರೋಪಿಯಾದ ದುರ್ಗಾರಾಮ್ ತಮ್ಮ ವಿರುದ್ಧದ ಎಫ್ಐಆರ್ ಹಾಗೂ ಎಸಿಎಂಎಂ ಕೋರ್ಟ್ ವಿಚಾರಣೆ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.