ಆದೇಶ ಪಾಲಿಸದ ಇನ್ಸ್ಪೆಕ್ಟರ್ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ
ಕರ್ತವ್ಯ ಲೋಪದ ಆರೋಪದ ಮೇಲೆ ಬೆಂಗಳೂರಿನ ಕಾಟನ್ಪೇಟೆ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕೆ. ವೈ. ಪ್ರವೀಣ್ ವಿರುದ್ಧ ಇಲಾಖಾ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.
ಬೆಂಗಳೂರು, ಫೆಬ್ರವರಿ 02; ಕಳ್ಳತನ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶ ಪಾಲಿಸದ ಕಾಟನ್ಪೇಟೆ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕೆ. ವೈ. ಪ್ರವೀಣ್ ವಿರುದ್ಧ ಇಲಾಖಾ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶಿಸಿದೆ.
ಅಲ್ಲದೆ, ಕೋರ್ಟ್ ಸೂಚನೆ ಹೊರತಾಗಿಯೂ ಕ್ರಮಕ್ಕೆ ಮುಂದಾಗದ ಅಧಿಕಾರಿಯ ನಿರ್ಲಕ್ಷ್ಯತನವನ್ನು ತರಾಟೆಗೆ ತೆಗೆದುಕೊಂಡಿದೆ. ಇಲಾಖಾ ತನಿಖೆ ಪೂರ್ಣಗೊಂಡ ಬಳಿಕ ವರದಿಯನ್ನು ಹೈಕೋರ್ಟ್ ರಿಜಿಸ್ಟ್ರಾರ್ಗೆ ಸಲ್ಲಿಸುವಂತೆ ನಿರ್ದೇಶನ ನೀಡಿದೆ.
ಕಾಟನ್ಪೇಟೆಯ ನಿವಾಸಿ ಎಂ. ಪ್ರಕಾಶ್ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣವೊಂದರ ಕುರಿತು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಸೂಚನೆ ಮೇರೆಗೆ ನಡೆಯುತ್ತಿರುವ ತನಿಖೆ ಸಂಬಂಧ ಅರ್ಜಿಯ ವಿಚಾರಣೆ ನಡೆಸಿದ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಕೃತ್ಯಕ್ಕೆ ಕಾರಣವಾದ ಅಧಿಕಾರಿಯಾಗಿರುವ ಕೆ. ವೈ. ಪ್ರವೀಣ್ ಕಡತ ನಾಪತ್ತೆಯಾಗಿತ್ತು. ಹೀಗಾಗಿ ಪ್ರಕರಣ ದಾಖಲಿಸಲು ವಿಳಂಬವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಅಷ್ಟಕ್ಕೆ ಪ್ರಕರಣ ಕೈ ಬಿಡುವುದಕ್ಕೆ ಸಾಧ್ಯವಿಲ್ಲ. ಪೊಲೀಸ್ ಇಲಾಖೆ ಪ್ರಮಾಣ ಪತ್ರದಲ್ಲಿ ತಿಳಿಸಿರುವಂತೆ ಅಧಿಕಾರಿಯ ಕರ್ತವ್ಯಲೋಪ ಒಪ್ಪಿಕೊಂಡಂತಾಗಿದೆ. ಹೀಗಾಗಿ ಆ ಅಧಿಕಾರಿಯ ವಿರುದ್ಧ ಇಲಾಖಾ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ನೀಡಿ ಅರ್ಜಿ ಇತ್ಯರ್ಥಪಡಿಸಿದೆ.
ಗಂಭೀರ ದುರ್ನಡತೆ; ಕೋರ್ಟ್ಗಳು ಕಾನೂನು ಬದ್ಧವಾಗಿ ನೀಡುವ ಆದೇಶ ಪೋಲೀಸರು ಗಂಭೀರವಾಗಿ ಪರಿಗಣಿಸಿ ಜಾರಿ ಮಾಡಬೇಕು. ಇಲ್ಲವಾದಲ್ಲಿ ಸಂತ್ರಸ್ತರಾದವರ ಮೂಲಭೂತ ಹಕ್ಕು ಉಲ್ಲಂಘನೆಯಾಗಲಿದೆ.
ಅಲ್ಲದೆ, ಈ ರೀತಿಯ ಅಧಿಕಾರಿ ವರ್ಗಗಳ ನಡೆ ಗಂಭೀರ ದುರ್ನಡತೆ ಮತ್ತು ದಂಡ ವಿಧಿಸಬಹುದು. ಇಂತಹ ಕರ್ತವ್ಯ ಲೋಪವನ್ನು ಸಹಿಸಲಾಗದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಅಲ್ಲದೆ, ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸೂಚನೆ ನೀಡಿದ ತಕ್ಷಣ ಪೊಲೀಸ್ ಅಧಿಕಾರಿಗಳು ಕಾನೂನು ಪ್ರಕಾರ ಎಫ್ಐಆರ್ ದಾಖಲಿಸಿ ತನಿಖೆ ಪ್ರಾರಂಭಿಸಿಬೇಕು. ಆದರೆ, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನಿರ್ದೇಶನ ನೀಡಿದ ಐದೂವರೆ ತಿಂಗಳ ಬಳಿಕ ಪ್ರಕರಣ ದಾಖಲಿಸಲಾಗಿದೆ. ಈ ಬೆಳವಣಿಗೆ ಪೊಲೀಸ್ ಇನ್ಸ್ಪೆಕ್ಟರ್ ನಿರ್ಲಕ್ಷ್ಯತನ ಮತ್ತು ಬೇಜವಾಬ್ದಾರಿ ತನವೇ ಕಾರಣ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.
ಪ್ರಕರಣದ ವಿವರ: ಪ್ರಕರಣದ ಆರೋಪಿಯಾಗಿರುವ ವಿನಾಯಕ ಮತ್ತು ಅರ್ಜಿದಾರರ ನಡುವೆ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಿವಿಲ್ ದಾವೆ ವಿಚಾರಣೆ ಹಂತದಲ್ಲಿದೆ. ಈ ನಡುವೆ ಆರೋಪಿ 2021ರ ಮಾರ್ಚ್ 26 ರಂದು ಅರ್ಜಿದಾರರ ಮನೆ ಬಾಗಿಲನ್ನು ಮುರಿದು ಹಲವು ಬೆಲೆ ಬಾಳವ ವಸ್ತುಗಳನ್ನು ಕಳವು ಮಾಡಿದ್ದರು.
ಈ ಕುರಿತಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಸೂಚನೆ ನೀಡುವಂತೆ ಕೋರಿ ಅರ್ಜಿದಾರರ ಪ್ರಕಾಶ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ದೂರಿನ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 2022 ಮಾ. 4 ರಂದು ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುವಂತೆ ಕಾಟನ್ ಪೇಟೆ ಪೊಲೀಸ್ ಠಾಣೆಗೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತ್ತು.
ಈ ಸಂಬಂಧ ಆದೇಶದ ಪ್ರತಿಯನ್ನು 2022ರ ಮೇ 4 ರಂದು ಸ್ವೀಕರಿಸಿದ್ದ ಕಾಟನ್ ಪೇಟೆ ಪೊಲೀಸರು ಎಫ್ಐಆರ್ ದಾಖಲಿಸಲು ಮುಂದಾಗಿರಲಿಲ್ಲ. ಮತ್ತೆ ಅರ್ಜಿ ವಿಚಾರಣೆಗೆ ಬಂದ ಸಂದರ್ಭದಲ್ಲಿ ಪ್ರಕರಣ ದಾಖಲಿಸುವಂತೆ ಪೊಲೀಸ್ ಠಾಣೆಗೆ ಮತ್ತೊಮ್ಮೆ ನೆನಪು ಮಾಡಿತ್ತು. ಆದರೂ ಪ್ರಕರಣ ದಾಖಲಿಸಿರಲಿಲ್ಲ. ಇದಾದ ಸುಮಾರು ಐದೂವರೆ ತಿಂಗಳ ಬಳಿಕ ಪ್ರಕರಣ ದಾಖಲಿಸಲಾಗಿತ್ತು.












Click it and Unblock the Notifications