ಲೋಕಸಭಾ ಚುನಾವಣೆ 2024: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ? ದೊಡ್ಡ ಸುಳಿವು ಕೊಟ್ಟ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ
ಬೆಂಗಳೂರು, ಜೂನ್ 6: ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಅನೇಕರು ಬಿಜೆಪಿ ಜತೆ ಕೈ ಜೋಡಿಸಿರುವುದು ಎಲ್ಲರಿಗೂ ಗೊತ್ತಿರುವ ಸತ್ಯ ಅಲ್ಲವೇ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಆಗುವ ಸಾಧ್ಯತೆ ಇದೆಯಾ? ಹಾಗೂ ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ವಿರುದ್ಧ ಸಮಾನಮನಸ್ಕ ಪಕ್ಷಗಳು ಒಂದಾದರೆ, ಆ ಒಕ್ಕೂಟದ ನೇತೃತ್ವ ವಹಿಸುವಿರಾ ಎಂದು ಕೇಳಲಾದ ಪ್ರಶ್ನೆಗೆ ಅವರು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು.

ಬಿಜೆಪಿ ವಿರುದ್ಧ ಒಕ್ಕೂಟ ರಚನೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಯತ್ನ ನಡೆಸುತ್ತಿರುವ ಬಗ್ಗೆ ಮಾಜಿ ಪ್ರಧಾನಿಗಳ ಗಮನ ಸೆಳೆಯಲಾಯಿತು. ಇದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ದೇಶದಲ್ಲಿ ಬಿಜೆಪಿ ಜತೆ ಸೇರಿ ರಾಜಕೀಯ ಮಾಡದೆ ಇರುವ ಯವುದರೂ ಪಕ್ಷವನ್ನು ತೋರಿಸಿ ಎಂದು ಪತ್ರಕರ್ತರಿಗೆ ಮರು ಪ್ರಶ್ನೆ ಹಾಕಿದ ಅವರು, ಮೊದಲು ನನ್ನ ಪ್ರಶ್ನೆಗೆ ಉತ್ತರ ನೀಡಿ. ಆಮೇಲೆ ನಿಮ್ಮ ಪ್ರಶ್ನೆಗೆ ಉತ್ತರ ಕೊಡುವುದಾಗಿ ತಿಳಿಸಿದರು.
ಕಾಂಗ್ರೆಸ್ ನಾಯಕರೇ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ
ಅನೇಕ ಪಕ್ಷಗಳು ವಿವಿಧ ರಾಜ್ಯಗಳಲ್ಲಿ ಪ್ರತ್ಯಕ್ಷ, ಪರೋಕ್ಷವಾಗಿ ಬಿಜೆಪಿ ಪಕ್ಷದ ಜೊತೆಗೆ ಕೈಜೋಡಿಸಿವೆ. ಕಾಂಗ್ರೆಸ್ ಪಕ್ಷದ ಅನೇಕರು ನಾಯಕರು ಬಿಜೆಪಿ ಜತೆ ಶಾಮೀಲಾಗಿದ್ದಾರೆ. ಕರ್ನಾಟಕದಲ್ಲಿಯೂ ಅದನ್ನು ಕಾಣಬಹುದು. ಇದರಲ್ಲಿ ಮುಚ್ಚುಮರೆ ಏನಿದೆ? ಎಂದು ಅವರು ನೇರವಾಗಿ ಪ್ರಶ್ನೆ ಮಾಡಿದರು.
ಪಕ್ಷವನ್ನು ಸಂಘಟಿಸುವತ್ತ ಗಮನ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ನಾವು ಸೋತಿದ್ದೇವೆ, ಈ ಸೋಲಿನಿಂದ ನಾವೇನು ಕುಗ್ಗಬೇಕಿಲ್ಲ. ಅನೇಕ ಚುನಾವಣೆಗಳಲ್ಲಿ ನಾವೆಲ್ಲಾ ಗೆಲುವು-ಸೋಲು ನೋಡಿದ್ದೇವೆ. ಸೋತ ಬಳಿಕ ಫಿನಿಕ್ಸ್ನಂತ ಎದ್ದು ಬಂದಿದ್ದೇವೆ. ಸೋತಿದ್ದೇವೆ ಎಂದು ಮನೆಯಲ್ಲಿ ಕೂರಲಾರೆ, ಪಕ್ಷಕ್ಕಾಗಿ ಎಷ್ಟೇ ಕೆಲಸ ಮಾಡಲು ನಾನು ಸಿದ್ಧ ಎಂದು ಹೇಳಿದರು.
ಮುಂಬರುವ ದಿನಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ತಾಲ್ಲೂಕು, ಜಿಲ್ಲಾ ಪಂಚಾಯಿತಿ ಸೇರಿ ಹಲವಾರು ಚುನಾವಣೆಗಳಿವೆ. ನಾವು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕಿದೆ. ಪಕ್ಷದಲ್ಲಿ ಸಮಾಲೋಚನೆ ಮಾಡಲಾಗುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಎಷ್ಟು ಕ್ಷೇತ್ರಗಳಿವೆ, ಯಾವ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಬೇಕು ಎಂದು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದು ಹೇಳಿದರು. ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಬೇಕೋ ಬೇಡವೋ ಎನ್ನುವುದನ್ನು ಪಕ್ಷ ತೀರ್ಮಾನ ಮಾಡುತ್ತದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.












Click it and Unblock the Notifications