ಅತೃಪ್ತ ವಿಧಾನಪರಿಷತ್ ಸದಸ್ಯರ ಜೊತೆ ದೇವೇಗೌಡರ ಸಭೆ
ಬೆಂಗಳೂರು, ಅಕ್ಟೋಬರ್ 17: ಪಕ್ಷದ ವಿಧಾನಪರಿಷತ್ ಸದಸ್ಯರಲ್ಲಿ ಮೂಡಿರುವ ಅಸಾಮಾಧಾನ ಆಲಿಸಲು ಮುಂದಾಗಿರುವ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ ಶುಕ್ರವಾರ ಸಮಸ್ಯೆ ಬಗೆಹರಿಸುವ ನಿರ್ಧಾರ ಕೈಗೊಂಡಿದ್ದಾರೆ.
ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಪಕ್ಷದ ಮುಖಂಡರಿಗೆ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ಎಂದು ವಿಧಾನಪರಿಷತ್ ಸದಸ್ಯರು ಬೇಸರಗೊಂಡಿದ್ದಾರೆ.
ಅಸಮಾಧಾನ ಶಮನಗೊಳಿಸಲು ಪ್ರತ್ಯೇಕ ಸಭೆ ನಡೆಸುವುದಕ್ಕಿಂತ ಮುಂಬರುವ ವಿಧಾನಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಶುಕ್ರವಾರ ಕರೆದಿರುವ ಸಭೆಯಲ್ಲಿಯೇ ಸಮಾಲೋಚನೆ ನಡೆಸಿ ಸಮಸ್ಯೆ ಬಗೆಹರಿಸಲು ತೀರ್ಮಾನಿಸಲಾಗಿದೆ.
ಆಗ್ನೇಯ ಪದವೀಧರ, ಪಶ್ಚಿಮ ಪದವೀಧರ ಮತ್ತು ಈಶಾನ್ಯ ಶಿಕ್ಷಕರ, ಬೆಂಗಳೂರು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ.
ಅಭ್ಯರ್ಥಿಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಲಾಗುವುದು. ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸುವ ಸಂಬಂಧ ಅ.18ರಂದು ಪಕ್ಷದ ಕಚೇರಿಯಲ್ಲಿ ಸಣೆ ಡೆಸಲಾಗುವುದು. ವಿಧಾನಸಭೆ, ವಿಧಾನಪರಿಷತ್ ಸದಸ್ಯರು, ಸಂಸದರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಭ್ಯರ್ಥಿ ಆಯ್ಕೆ ಸಂಬಂಧ ಪ್ರತಿಯೊಬ್ಬರ ಅಭಿಪ್ರಾಯ ಪಡೆದು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಆದರೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಪಕ್ಷ ಕ್ರಿಯಾಶೀಲವಾಗಿದೆ.
ಅನರ್ಹಗೊಂಡಿರುವ ಶಾಸಕರ ಕುರಿತು ಸಭಾಧ್ಯಕ್ಷರು ನೀಡಿದ ತೀರ್ಪನ್ನುಸುಪ್ರೀಂಕೋರ್ಟ್ ಎತ್ತಿಹಿಡಿದರೆ ಉಪ ಚುನಾವಣೆ ಎದುರಾಗಲಿದೆ. ಇಲ್ಲವಾದರೆ ಉಪ ಚುನಾವಣೆ ನಡೆಯುವುದು ಅನುಮಾನ, ಉಪ ಚುನಾವಣೆ ನಡೆದರೆ ಎಲ್ಲಾ 15 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಹೇಳಿದರು.