ಯಡಿಯೂರಪ್ಪ ಪ್ರಮಾಣವಚನಕ್ಕೆ ಹಾಜರಾಗಬೇಡಿ: ಕೆಪಿಸಿಸಿ ಅಧ್ಯಕ್ಷ ಸೂಚನೆ
ಬೆಂಗಳೂರು, ಜುಲೈ 26: ಯಡಿಯೂರಪ್ಪ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹಾಜರಾಗಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಪಕ್ಷದ ಮುಖಂಡರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಇಂದು ಸಂಜೆ ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ನಾಲ್ಕನೇ ಬಾರಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಈಗಾಗಲೇ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, 'ಈ ಅಪವಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸುತ್ತೇನೆ, ಪಕ್ಷದ ಎಲ್ಲಾ ನಾಯಕರುಗಳಿಗೆ ಭಾಗವಹಿಸದಂತೆ ಸೂಚನೆ ನೀಡುತ್ತೇನೆ' ಎಂದು ಟ್ವಿಟ್ಟರ್ನಲ್ಲಿ ಬರೆದಿದ್ದಾರೆ.

ಕುದುರೆ ವ್ಯಾಪಾರ ಮತ್ತು ಭ್ರಷ್ಟ ಮಾರ್ಗದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಅಸಂವಿಧಾನಿಕ ಮತ್ತು ಅನೈತಿಕ. ಇದು ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆ ಎಂದು ಅವರು ಟ್ವೀಟ್ನಲ್ಲಿ ಹೇಳಿದ್ದಾರೆ.
ಈಗಾಗಲೇ ಸಿದ್ದರಾಮಯ್ಯ, ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಯಡಿಯೂರಪ್ಪ ಅವರ ಪ್ರಮಾಣ ವಚನವನ್ನು ಪ್ರಜಾಪ್ರಭುತ್ವದ ವಿರೋಧಿ ಎಂದು ಹೇಳಿದ್ದಾರೆ. ಹಾಗಾಗಿ ಅವರು ಇಂದಿನ ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇಲ್ಲ.
ಆದರೆ ಯಡಿಯೂರಪ್ಪ ಅವರು ತಮ್ಮ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರನ್ನು ಆಹ್ವಾನಿಸಿದ್ದಾರೆ. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಸಂಜೆ 6:30 ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.












Click it and Unblock the Notifications