ಸ್ಥಳೀಯ ಸಂಸ್ಥೆ ಚುನಾವಣೆ: ಜೆಡಿಎಸ್ ಮೈತ್ರಿಗೆ ಕಾಂಗ್ರೆಸ್ ಚಿಂತನೆ
ಬೆಂಗಳೂರು, ಆಗಸ್ಟ್ 4: ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಬೇಕೆ, ಬೇಡವೇ ಎಂಬ ಕುರಿತಂತೆ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಎರಡು ದಿನಗಳ ಕಾಲ ನಡೆದ ಲೋಕಸಭಾ ಕ್ಷೇತ್ರವಾರು ಪದಾಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗೆಲ್ಲುವುದು ಪಕ್ಷಕ್ಕೆ ಅಗತ್ಯವಾಗಿದೆ.
ರಮ್ಯಾಗೆ ಮಂಡ್ಯ ಕಾಂಗ್ರೆಸ್ನಲ್ಲಿ ಸ್ನೇಹಿತರಿಲ್ಲ, ದುಷ್ಮನ್ಗಳೇ ಎಲ್ಲಾ!
ಈ ನಿಟ್ಟಿನಲ್ಲಿ ಮೈತ್ರಿ ಸರ್ಕಾರ ಅಸ್ತುತ್ವದಲ್ಲಿರುವುದರಿಂದ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಬೇಕೆ ಅಥವಾ ಸ್ವತಂತ್ರವಾಗಿ ಸ್ಪರ್ಧಿಸಬೇಕೆ ಎನ್ನುವುದರ ಕುರಿತು ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.
ಶುಕ್ರವಾರ ನಡೆದ ಸಭೆಯಲ್ಲಿ 7ಲೋಕಸಭಾ ಕ್ಷೇತ್ರಗಳ ಸ್ಥಳೀಯ ಮುಖಂಡರ ಜೊತೆ ಚರ್ಚೆ ನಡೆದಿದೆ. ಪಕ್ಷ ಸಂಘಟನೆ,ವಿಧಾನಸಭೆ ಸೋಲು ಗೆಲುವುಗಳು, ಸ್ಥಳೀಯ ಸಂಸ್ಥೆ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ, ಉಳಿದ 21ಲೋಕಸಭಾ ಕ್ಷೇತ್ರಗಳ ಮುಖಂಡರ ಸಭೆ ಮುಂದಿನ ವಾರ ನಿಗದಿ ಪಡಿಸುತ್ತೇವೆ.
ಲೋಕಸಭೆ ಅಭ್ಯರ್ಥಿ ಆಯ್ಕೆ ಬಗ್ಗೆ ನಿನ್ನೆಯ ಸಭೆಯಲ್ಲಿ ಚರ್ಚೆ ಆಗಿಲ್ಲ, ಆಷಾಢ ಮುಗಿದ ಬಳಿಕ ಸಂಪುಟ ವಿಸ್ತರಣೆ ಅಂತ ಹೇಳಿದ್ದೆವು, ಆಗಸ್ಟ್ 15ರ ನಂತರ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಜೊತೆ ಚರ್ಚಿಸುತ್ತೇವೆ. ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡಲಾಗುವುದು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಳ್ಳಬೇಕೆ ಇಲ್ಲವೇ ಏನು ಮಾಡಬೇಕು ಅಂತ ಇನ್ನೂ ತೀರ್ಮಾನ ಮಾಡಿಲ್ಲ ಎಂದರು.