Anna Bhagya: ಸೋಮವಾರ ಸಂಜೆಯಿಂದ ಅನ್ನ ಭಾಗ್ಯ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಜಮೆ
ಬೆಂಗಳೂರು, ಜುಲೈ. 09: ಕಾಂಗ್ರೆಸ್ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುವುದು ಎಂದು ಸರ್ಕಾರ ಈ ಹಿಂದೆ ತಿಳಿಸಿತ್ತು. ಅದರಂತೆ ಸರ್ಕಾರದ ಅನ್ನ ಭಾಗ್ಯ ಯೋಜನೆಯಡಿ ನೇರ ಬ್ಯಾಂಕ್ ವರ್ಗಾವಣೆ ಸೋಮವಾರ ಸಂಜೆ ಪ್ರಾರಂಭವಾಗಲಿದೆ ಎಂದು ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ.
ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಸರ್ಕಾರ ನಾಳೆ ಸಂಜೆಯಿಂದ ಹಣ ಜಮೆ ಮಾಡಲಿದೆ. ಇದಕ್ಕೆ ಸೋಮವಾರ (ಜು.10) ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಚಾಲನೆ ನೀಡಲಿದ್ದಾರೆ.

ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಗೆಲುವಿನ ಮೊದಲು ಕಾಂಗ್ರೆಸ್ ಪಕ್ಷವು ನೀಡಿದ ಐದು ಪ್ರಮುಖ ಚುನಾವಣಾ ಗ್ಯಾರಂಟಿಗಳಲ್ಲಿ ಅನ್ನ ಭಾಗ್ಯ ಯೋಜನೆಯೂ ಒಂದಾಗಿದೆ. ಬಡತನ ರೇಖೆಗಿಂತ ಕೆಳಗಿರುವ (BPL) ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಹೆಚ್ಚುವರಿ 5 ಕೆಜಿ ಉಚಿತ ಅಕ್ಕಿಯನ್ನು ಒದಗಿಸುವ ಭರವಸೆಯನ್ನು ಯೋಜನೆ ಒಳಗೊಂಡಿದೆ.
ಸಿದ್ದರಾಮಯ್ಯ ನೇತೃತ್ವದ ನಾಯಕತ್ವವು ಅಕ್ಕಿ ಪೂರೈಕೆಯಲ್ಲಿ ಕೊರತೆಯನ್ನು ಎದುರಿಸಿದೆ. ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಜರಿಸಿದ ನಂತರ ಹಲವು ರಾಜ್ಯಗಳಲ್ಲಿ ಅಕ್ಕಿಗಾಗಿ ಸರ್ಕಾರ ಪ್ರಯತ್ನಿಸಿದ್ದು, ದೊರೆಯದ ಕಾರಣ ಯೋಜನೆಯ ಫಲಾನುಭವಿಗಳಿಗೆ ಅಕ್ಕಿ ಬದಲಿಗೆ ನಗದು ನೀಡಲು ಕಳೆದ ವಾರ ನಿರ್ಧರಿಸಿದೆ. ತಮ್ಮ ಚುನಾವಣಾ ಪ್ರಣಾಳಿಕೆಯ ಭಾಗವಾಗಿದ್ದ ಯೋಜನೆಯ ಅನುಷ್ಠಾನದಲ್ಲಿ ಕಾಂಗ್ರೆಸ್ ಸರ್ಕಾರವು ತೊಡಕುಗಳನ್ನು ಎದುರಿಸುತ್ತಿದೆ.

ಪ್ರತಿ ಕಿಲೋಗೆ 34 ರೂಪಾಯೊಯಂತೆ ಫಲಾನುಭವಿಗಳ ಖಾತೆಗೆ ನಗದು ಜಮಾ ಮಾಡಲಾಗುತ್ತದೆ. 15 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು. ಜುಲೈ 10 ರಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅನ್ನಭಾಗ್ಯ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು. 15 ದಿನಗಳಲ್ಲಿ ಪ್ರತಿಯೊಬ್ಬ ಫಲಾನುಭವಿಗೆ ಹಣ ಸಿಗಲಿದೆ ಎಂದು ಸಚಿವ ಮುನಿಯಪ್ಪ ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ 1.29 ಕೋಟಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿದ್ದು, 4.41 ಕೋಟಿ ಫಲಾನುಭವಿಗಳಿದ್ದಾರೆ. ರಾಜ್ಯವು ಸಾಕಷ್ಟು ಪ್ರಮಾಣದ ಅಕ್ಕಿ ಪಡೆಯಲು ಪ್ರಯತ್ನಿಸಿದೆ ಆದರೆ ಕೇಂದ್ರ ಸರ್ಕಾರ ಅಕ್ಕಿ ನೀಡಲಿಲ್ಲ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.












Click it and Unblock the Notifications