ಬೆಂಗಳೂರು ರಸ್ತೆ ಗುಂಡಿಗಳಿಗೆ ಸಿಗಲಿದೆ ಮುಕ್ತಿ: ಡಿಸಿಎಂ ಹೇಳಿದ್ದೇನು?
ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ, ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರಲ್ಲಿ ರೌಂಡ್ಸ್ ಹಾಕಿದ್ದಾರೆ. ಈ ವೇಳೆ ಬೆಂಗಳೂರಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಡಿಸಿಎಂ ಅಧಿಕಾರಿಗಳಿಂದ ಮಾಹಿತಿ ಪಡೆದ್ರು. ನೂರಾರು ಕೋಟಿ ರೂಪಾಯಿ ಕಾಮಗಾರಿ ಬೆಂಗಳೂರಲ್ಲಿ ನಡೆಯುತ್ತಿದ್ದು, ಪರಿಶೀಲನೆ ವೇಳೆ ಅಧಿಕಾರಿಗಳಿಗೂ ಡಿಸಿಎಂ ಖಡಕ್ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ 34 ಕಿಲೋ ಮೀಟರ್ ಟೆಂಡರ್ ಶ್ಯೂರ್ ಕೆಲಸ ನಡೆಯುತ್ತಿದೆ. ನಿಂತಿರುವ ಕಾಮಗಾರಿಗಳನ್ನು ಮತ್ತೆ ಆರಂಭ ಮಾಡಲು ಹೇಳಿದ್ದೇನೆ. ಚರಂಡಿ ಕೆಲಸ ಆರಂಭಿಸೋದಕ್ಕೆ ಸೂಚನೆ ನೀಡಿದ್ದೇನೆ. ರಸ್ತೆ ಗುಂಡಿಗಳ ಬಗ್ಗೆ ತಿಳಿಸೋದಕ್ಕೆ ಸಾರ್ವಜನಿಕರಿಗೂ ಅವಕಾಶವಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು. ಹಾಗೇ ಬೆಂಗಳೂರಿನಲ್ಲಿ ಭಾರಿ ಸಮಸ್ಯೆ ಉಂಟು ಮಾಡುತ್ತಿರುವ ರಸ್ತೆ ಗುಂಡಿಗಳನ್ನ ಮುಚ್ಚುವ ಕೆಲಸ ನಡೆಯುತ್ತಿದೆ ಅಂತಾ ಇದೇ ವೇಳೆ ಡಿಸಿಎಂ ತಿಳಿಸಿದ್ದಾರೆ.

ಪಾಲಿಕೆ & ಪೊಲೀಸರಿಗೆ ಗುಂಡಿ ಜವಾಬ್ದಾರಿ!
ಇನ್ನು ಅಮೃತ ನಗರೋತ್ಥಾನ ಯೋಜನೆಯಡಿ 5 ಸಾವಿರ ಕೋಟಿ ಅನುದಾನದಲ್ಲಿ ಕೆಲಸಗಳು ನಡೆಯಲಿವೆ. 7ನೇ ತಾರೀಖಿಗೆ ಔಟರ್ ರಿಂಗ್ ರೋಡ್ನಲ್ಲಿ ವೀಕ್ಷಣೆ ಮಾಡಲಿದ್ದೇನೆ. ಜನಗಳಿಗೆ ತೊಂದರೆ ಆಗದಂತೆ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಹಾಗೇ ಈ ವೇಳೆ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ಕೆಲಸದ ಬಗ್ಗೆ ಮಾಹಿತಿ ನೀಡುತ್ತಾ ನಗರದಲ್ಲಿ ರಸ್ತೆಗುಂಡಿ ಮುಚ್ಚಲು ಸೂಚನೆ ನೀಡಿದ್ದೇವೆ. ಪೊಲೀಸ್ರು ಮತ್ತು ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ರಸ್ತೆ ಗುಂಡಿ ಮುಚ್ಚುವ ಜವಾಬ್ದಾರಿ ನಿಭಾಯಿಸಲಿದ್ದಾರೆ ಎಂದರು.
ಬೆಂಗಳೂರಿನ ಅಂದ ಹೆಚ್ಚಿಸಲು...
ಹಾಗೇ, ಬೆಂಗಳೂರಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಟೆಂಡರ್ ಶ್ಯೂರ್ ಕಾಮಗಾರಿಗಳು ನಡೆದಿವೆ. ಟೆಂಡರ್ ಶ್ಯೂರ್ ರಸ್ತೆಯಲ್ಲಿ ಮುಂದೆ ಯಾರೂ ರಸ್ತೆ ಅಗೆಯಬಾರದು, ಕೇಬಲ್ ಲೈನ್ ಎಳೆದುಕೊಂಡು ಹೋಗಲು ಅವಕಾಶ ಮಾಡಿಕೊಡಲಾಗಿದೆ. ಅವುಗಳನ್ನು ಯಾರೂ ಉಪಯೋಗಿಸುತ್ತಿಲ್ಲ. ನಾವು ಎಲ್ಲೆಲ್ಲಿ ಈ ವ್ಯವಸ್ಥೆ ಕಲ್ಪಿಸಿದ್ದೇವೆ, ಅಲ್ಲಿ ಕಾನೂನುಬದ್ಧವಾಗಿ ಉಪಯೋಗ ಮಾಡಿಕೊಳ್ಳಬೇಕು. ಬೆಂಗಳೂರಿನ ಅಂದ ಹೆಚ್ಚಿಸಲು ಕೇಬಲ್ ಗಳನ್ನು ಅಂಡರ್ ಗ್ರೌಂಡ್ನಲ್ಲಿ ತೆಗೆದುಕೊಂಡು ಹೋಗಬೇಕು ಎಂದು ಇದೇ ವೇಳೆ ಸೂಚಿಸಿದ್ದಾರೆ.

ಬಾಕಿ ಬಿಲ್ ಬಗ್ಗೆ ಮಹತ್ವದ ಮಾಹಿತಿ
ಬಿಬಿಎಂಪಿ ಬಿಲ್ ಬಾಕಿ ವಿಚಾರವಾಗಿ, ಅಮೃತನಗರ ಯೋಜನೆಯಲ್ಲಿ ಐದು ಸಾವಿರ ಕೋಟಿ ವೆಚ್ಚದ 352 ಪ್ಯಾಕೇಜ್ ಕಾಮಗಾರಿಗಳ ಪೂರ್ಣಗೊಳಿಸಲು ತಿಳಿಸಲಾಗಿದೆ. ಕಾಮಗಾರಿ ತನಿಖೆ ಕೂಡ ಮುಂದುವರಿದು ವರದಿ ಸಲ್ಲಿಕೆಯಾಗಲಿದೆ. 675 ಕೋಟಿ ಮೊತ್ತದ ಬಿಲ್ ಪಾವತಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸುಮಾರು 50-75% ನಷ್ಟು ಬಿಲ್ ಪಾವತಿ ಮಾಡಲಾಗಿದೆ. 432 ಕೋಟಿ ಬಿಬಿಎಂಪಿ ಅನುದಾನ ಕೂಡ ಬಿಡುಗಡೆ ಮಾಡಲಾಗುವುದು. ಉಳಿದ ಬಾಕಿ ಮೊತ್ತವನ್ನ ಪಾವತಿ ಮಾಡಲಾಗುವುದು. ಜನರಿಗೆ ತೊಂದರೆ ಆಗದಂತೆ ಕೆಲಸ ಆರಂಭಿಸಿ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸುವ ಜವಾಬ್ದಾರಿ ಇಂಜಿನಿಯರ್ಗಳಿಗೆ ವಹಿಸಲಾಗಿದೆ ಎಂದು ಇದೇ ವೇಳೆ ಡಿಸಿಎಂ ಮಾಹಿತಿ ನೀಡಿದ್ದಾರೆ.
ಆದಷ್ಟು ಬೇಗ ಈ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಡಿಸಿಎಂ ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಶಾಸಕರಾದ ರಿಜ್ವಾನ್ ಅರ್ಷದ್, ಬಿಡಿಎ ಮುಖ್ಯಸ್ಥರಾದ ರಾಕೇಶ್ ಸಿಂಗ್, ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಇದ್ದರು. ಈ ಮೂಲಕ ಬೆಂಗಳೂರಿನಲ್ಲಿ ಕಾಮಗಾರಿಗಳಿಗೆ ವೇಗ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಕೂಡ ಸಿಟಿ ರೌಂಡ್ಸ್ ಹಾಕಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಲ್ಲದೆ ಪ್ರಮುಖವಾಗಿ ರಸ್ತೆ ಗುಂಡಿ ಸಮಸ್ಯೆಗೆ ಒಂದು ಪರಿಹಾರ ಹುಡುಕುವ ಪ್ರಯತ್ನವೂ ಸಾಗಿದೆ.












Click it and Unblock the Notifications