ಬಿ.ಎಲ್.ಸಂತೋಷ್ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ವೇಳೆ ಸಖತ್ ಟ್ರೆಂಡ್ ಕ್ರಿಯೇಟ್ ಮಾಡಿ ಸಂಚಲನ ಸೃಷ್ಟಿಸಿದ್ದ ಹೆಸರು ಬಿ.ಎಲ್.ಸಂತೋಷ್. ಆದ್ರೆ ಚುನಾವಣೆ ಬಳಿಕ ಈಗ ಮತ್ತೆ ಬಿಜೆಪಿ ರಾಷ್ಟ್ರೀಯ ನಾಯಕ ಬಿ.ಎಲ್.ಸಂತೋಷ್ ಅವರ ಹೆಸರು ಸದ್ದು ಮಾಡಿ ಸುದ್ದಿಗೆ ಬಂದಿದೆ. ಈಗ ಅದೇ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ರಿಯಾಕ್ಷನ್ ಕೊಟ್ಟಿದ್ದಾರೆ.
ಅಂದಹಾಗೆ ರಾಜ್ಯದಲ್ಲಿ ಆಪರೇಷನ್ ಹಸ್ತ ಮತ್ತು ಆಪರೇಷನ್ ಕಮಲದ ಬಗ್ಗೆ ಜೋರಾಗಿ ಚರ್ಚೆ ನಡೆಯುತ್ತಿದೆ. ಇದೇ ಹೊತ್ತಲ್ಲಿ ಬಿ.ಎಲ್.ಸಂತೋಷ್ ಅವರ ಹೇಳಿಕೆ ಸಂಚಲನಕ್ಕೆ ಕಾರಣವಾಗಿದೆ. ಹೀಗಾಗಿ ಇದೀಗ ರಾಜ್ಯ ಕಾಂಗ್ರೆಸ್ನ ಪ್ರಬಲ ನಾಯಕ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಹಾಗೇ ಬಿಜೆಪಿ ನಾಯಕರ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ ಡಿಸಿಎಂ. ಹಾಗಾದರೆ ಡಿಸಿಎಂ ಡಿಕೆ ಶಿವಕುಮಾರ್ ರಿಯಾಕ್ಷನ್ ಹೇಗಿತ್ತು? ಇನ್ನು ಬಿಎಲ್ ಸಂತೋಷ್ ಹೇಳಿಕೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಏನು? ಮುಂದೆ ಓದಿ.

136 ಶಾಸಕರ ಸಂಪರ್ಕ ಇಟ್ಟುಕೊಳ್ಳಲಿ
ಹೌದು ಇಂದು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್, ನಾನು ಸಂತೋಷ್ ಅವರನ್ನು ರಾಷ್ಟ್ರೀಯ ನಾಯಕರು ಎಂದು ಭಾವಿಸಿದ್ದೇನೆ. ಅವರು ಈಶ್ವರಪ್ಪ ಹಾಗೂ ಸಿ.ಟಿ ರವಿ ಮಾತನಾಡಿದಂತೆ ಮಾತನಾಡಿದರೆ ಏನೂ ಮಾಡಲಾಗುವುದಿಲ್ಲ. ಅವರು 136 ಶಾಸಕರ ಜತೆ ಸಂಪರ್ಕ ಇಟ್ಟುಕೊಳ್ಳಲಿ. ಅದರಲ್ಲಿ ತಪ್ಪೇನಿದೆ? ದೇಶ ಆಳುತ್ತಿರುವ ಪಕ್ಷದ ನಾಯಕರು ಅವರು. ಅವರ ಮಾತಿಗೆ ತೂಕ ಇರುತ್ತೆ. ಹೀಗಾಗಿ ಅವರು ಈ ರೀತಿಯ ಹೇಳಿಕೆ ನೀಡಬಾರದು ಎಂದು ಮನವಿ ಮಾಡುತ್ತೇನೆ. ಅವರ ಘನತೆಗೆ ಧಕ್ಕೆಯಾಗಬಾರದು ಎಂದು ಪರೋಕ್ಷವಾಗಿ ಡಿಸಿಎಂ ಟಾಂಗ್ ಕೊಟ್ಟರು.
ಹೆಚ್ಚಿನ ಮಾಹಿತಿಗೆ ಶಾಸಕರನ್ನೇ ಕೇಳಿ
ಹಾಗೇ ಕಾಂಗ್ರೆಸ್ ಪಕ್ಷದ ಶಾಸಕರು ಅವರ ಸಂಪರ್ಕದಲ್ಲಿರುವ ಬಗ್ಗೆ ಮಾಹಿತಿ ಇಲ್ಲ. ಈ ಹಿಂದೆ ನಮ್ಮ ವಿರುದ್ಧ ಷಡ್ಯಂತ್ರ ಮಾಡಲು ಸಭೆ ನಡೆದಿತ್ತು, ಈಗ ತಣ್ಣಗಾಗಿದೆ. ಹೆಚ್ಚಿನ ಮಾಹಿತಿಗೆ ಶಾಸಕರನ್ನೇ ಕೇಳಿ ಎಂದರು ಡಿಕೆ ಶಿವಕುಮಾರ್. ಈ ಮೂಲಕ ಬಿಜೆಪಿ ಆಪರೇಷನ್ ಸುದ್ದಿ ಬಗ್ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಇದರ ಜೊತೆಗೆ ಒಂದು ದೇಶ ಒಂದು ಚುನಾವಣೆ ಬಗ್ಗೆ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಬಗ್ಗೆ ಮಾತನಾಡಿ, ಈ ವಿಚಾರ ಬಹಳ ಚರ್ಚೆ ಆಗುತ್ತಿದೆ. ಅನೇಕ ರಾಜ್ಯಗಳಲ್ಲಿ ಬೇರೆ ಸಮಯದಲ್ಲಿ ಚುನಾವಣೆ ನಡೆಯುತ್ತಿದೆ. ಕಾನೂನು ಸಮಿತಿ ಕೂಡ ಈ ಬಗ್ಗೆ ಚರ್ಚೆ ಮಾಡಿವೆ. ಈ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರು ಉತ್ತರಿಸುತ್ತಾರೆ ಎಂದಿದ್ದಾರೆ.

ಜತೆಗೆ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಅನರ್ಹತೆ ವಿಚಾರವಾಗಿಯು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಎಲ್ಲ ಶಾಸಕರು ಸಂಸದರಿಗೆ ಇದು ಎಚ್ಚರಿಕೆಯ ಗಂಟೆಯಾಗಿದೆ. ಜನಪ್ರತಿನಿಧಿಗಳು ಬಹಳ ಜಾಗರೂಕವಾಗಿ ಇರಬೇಕು. ತೀರ್ಪು ಏನಿದೆ ಅಂತಾ ಸಂಪೂರ್ಣ ನೋಡಿಲ್ಲ. ಆ ಬಗ್ಗೆ ಪರಿಶೀಲನೆ ಮಾಡಿ ಮಾತನಾಡುತ್ತೇನೆ ಎಂದರು ಡಿಕೆ ಶಿವಕುಮಾರ್.
ಒಟ್ನಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರ ಬಿಎಲ್ ಸಂತೋಷ್ ಅವರ ಬಗ್ಗೆ ಈಗ ಡಿಸಿಎಂ ರಿಯಾಕ್ಟ್ ಮಾಡಿದ್ದು, ಈ ಬಗ್ಗೆ ಕಮಲ ಪಾಳಯದ ನಾಯಕರು ಯಾವ ರೀತಿ ಉತ್ತರ ನೀಡುತ್ತಾರೆ ಅನ್ನೋದನ್ನ ಕಾದು ನೋಡಬೇಕು. ಈ ಮೂಲಕ ಲೋಕಸಭೆ ಚುನಾವಣೆಗೆ ಮುನ್ನ ಹೊಸ ಸಂಚಲನ ಸೃಷ್ಟಿಯಾಗಿದೆ. ಬಿಜೆಪಿ & ಕಾಂಗ್ರೆಸ್ ನಡುವೆ ಕಿಚ್ಚು ಹತ್ತಿದೆ. ಅತ್ತ ಕಾಂಗ್ರೆಸ್ ಸಂಪರ್ಕದಲ್ಲಿ ಬಿಜೆಪಿ ಶಾಸಕರು ಇದ್ದಾರೆ ಅನ್ನೋ ಮಾತು ಒಂದುಕಡೆ, ಬಿಜೆಪಿ ಸಂಪರ್ಕದಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ ಅನ್ನೋ ಮಾತು ಇನ್ನೊಂದು ಕಡೆ. ಆದರೆ ಯಾರು ಯಾರ ಕಡೆ ಇದ್ದಾರೆ ಅನ್ನೋದನ್ನ ಕಾದು ನೋಡಬೇಕಿದೆ.












Click it and Unblock the Notifications