DK Shivakumar DA Case: ಡಿಕೆ ಶಿವಕುಮಾರ್ಗೆ ಮತ್ತೆ ಸಂಕಷ್ಟ- ತನಿಖೆಗೆ ನೀಡಿರುವ ತಡೆ ತೆರವಿಗೆ ಸಿಬಿಐ ಮನವಿ!
ಡಿಎ ಆರೋಪಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಲಾಗಿರುವ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಬೇಕೆಂದು ಸಿಬಿಐ ಹೈಕೋರ್ಟ್ ಮೊರೆ ಹೋಗಿದೆ.
ಬೆಂಗಳೂರು ಫೆಬ್ರವರಿ 25: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಳೆಯ ಪ್ರಕರಣಗಳು ಮತ್ತೆ ಚಿಗುರೊಡೆಯಲು ಶುರುವಾಗಿವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲಿದ್ದ ಆದಾಯ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಮತ್ತೆ ಮೊಳಕೆ ಹೊಡೆಯಲು ಶುರುವಾಗಿದೆ.
ಡಿಎ ಆರೋಪಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಲಾಗಿರುವ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಬೇಕೆಂದು ಸಿಬಿಐ ಹೈಕೋರ್ಟ್ ಮೊರೆ ಹೋಗಿದೆ. ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿಗೆ ತಡೆ ಆದೇಶ ತೆರವು ಕೋರಿ ಸಿಬಿಐ ಪರ ವಕೀಲರು ಮನವಿ ಸಲ್ಲಿಸಿದರು.

ಅಲ್ಲದೆ, ತನಿಖೆಯ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು. ಆದರೆ, ತನಿಖೆಯ ಪ್ರಗತಿ ವರದಿ ಸ್ವೀಕರಿಸಲು ನಿರಾಕರಿಸಿದ ನ್ಯಾಯಪೀಠ ವಿಚಾರಣೆಯನ್ನು ಮಾರ್ಚ್ 3ಕ್ಕೆ ಮುಂದೂಡಿತು.
ಸಿಬಿಐ ಕೋರಿಕೆ ಏನು?
ಸಿಬಿಐ ತನ್ನ ಕೋರಿಕೆಯಲ್ಲಿ, ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ಕಲಂ 19 (3) (ಸಿ) ಅನ್ನು 2018ರಲ್ಲಿ ತಿದ್ದುಪಡಿ ಮಾಡಲಾಗಿದೆ. ಇದರ ಅನುಸಾರ ತನಿಖೆಯನ್ನು ಯಾವುದೇ ಕೋರ್ಟ್ ತಡೆಯುವಂತಿಲ್ಲ. ಆದ್ದರಿಂದ ಈ ಮೊದಲು ನೀಡಿರುವ ತಡೆ ಆದೇಶ ತೆರವುಗೊಳಿಸಬೇಕು' ಎಂದು ಕೋರಿದೆ.

ಅರ್ಜಿದಾರರು ಎಫ್ಐಆರ್ನಲ್ಲಿ ಕುಟುಂಬದ ಸದಸ್ಯರ ಹೆಸರುಗಳು ಇಲ್ಲ ಎಂದು ಪ್ರತಿಪಾದಿಸುತ್ತಿದ್ದಾರೆ. ಆದರೆ ಕಲಂ 13 (ಎ) (ಇ) ಅನ್ವಯ ಕುಟುಂಬದ ಸದಸ್ಯರೂ ನಿಶ್ಚಿತವಾಗಿ ಈ ಕಾಯ್ದೆಯ ಅಡಿ ತನಿಖಾ ವ್ಯಾಪ್ತಿಗೆ ಒಳಪಡುತ್ತಾರೆ. ಮೇಲಾಗಿ ತನಿಖೆಯ ವ್ಯಾಪ್ತಿಯನ್ನು ಇಂತಿಷ್ಟೇ ಮತ್ತು ಹೀಗೇ ಇರಬೇಕು ಎಂಬುದನ್ನು ಆರೋಪಿ ನಿಶ್ಚಿಯಿಸುವುದು ಸಮಂಜಸವಲ್ಲ' ಎಂದು ಸಿಬಿಐ ಪ್ರತಿಪಾದಿಸಿದೆ.
ಪ್ರಕರಣದ ಹಿನ್ನೆಲೆ:
'ಸಿಬಿಐ ಎಫ್ಐಆರ್ ದಾಖಲು ಮಾಡಿ ಈಗಾಗಲೇ ಎರಡು ವರ್ಷಗಳಾಗಿವೆ. ಆದರೆ, ಅರ್ಜಿದಾರರು ಈಗ ಹೈಕೋರ್ಟ್ನಲ್ಲಿ ಆದೇಶ ಪ್ರಶ್ನಿಸುತ್ತಿದ್ದಾರೆ. ಅರ್ಜಿದಾರ ಆರೋಪಿ ಡಿ.ಕೆ.ಶಿವಕುಮಾರ್ ಸಂಬಂಧಿ ಶಶಿಕುಮಾರ್ ಶಿವಣ್ಣ ಈ ಹಿಂದೆ ಇದೇ ರೀತಿಯಲ್ಲಿ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿದ್ದನ್ನು ಪ್ರಶ್ನಿಸಿದ್ದರು. ಆದರೆ, ಹೈಕೋರ್ಟ್ನ ಏಕಸದಸ್ಯ ನ್ಯಾಯಪೀಠ, ಈ ಅರ್ಜಿಯನ್ನು 2022ರ ಜುಲೈ 22ರಂದು ವಜಾಗೊಳಿಸಿತ್ತು. ನಂತರ ವಿಭಾಗೀಯ ನ್ಯಾಯಪೀಠ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಎತ್ತಿ ಹಿಡಿದಿತ್ತು' ಎಂಬ ಅಂಶವನ್ನು ಸಿಬಿಐ ತನ್ನ ಮನವಿಯಲ್ಲಿ ಉಲ್ಲೇಖಿಸಿದೆ.

ಪ್ರಕರಣದ ಹಿನ್ನೆಲೆ ?'ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ಕಲಂ 13 (2), 13 (1)(ಇ) ಅಡಿಯಲ್ಲಿ ಸಿಬಿಐ 2020ರ ಅ. 3ರಂದು ಪ್ರಕರಣ ದಾಖಲಿಸಿದೆ. 'ಸಿಬಿಐ ದಾಖಲಿಸಿರುವ ಈ ಎಫ್ಐಆರ್ ಕಾನೂನು ಬಾಹಿರವಾಗಿದ್ದು ಇದನ್ನು ರದ್ದುಗೊಳಿಸಬೇಕು' ಎಂದು ಕೋರಿ ಡಿ.ಕೆ.ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯಪೀಠ ಇದೇ 11ರಂದು ವಿಚಾರಣೆ ನಡೆಸಿ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ತಡೆ ಆದೇಶವನ್ನು ತೆರವುಗೊಳಿಸುವಂತೆ ಕೋರಿ ಸಿಬಿಐ ಈ ಮನವಿ ಸಲ್ಲಿಸಿದೆ.












Click it and Unblock the Notifications