ಗುತ್ತಿಗೆ ಚಾಲ್ತಿಯಲ್ಲಿದ್ದರೆ ಮಾತ್ರ ಗ್ರಾಮ ಪಂಚಾಯ ಸದಸ್ಯತ್ವ ರದ್ದು: ಹೈಕೋರ್ಟ್
ಬೆಂಗಳೂರು, ಮೇ. 11: ಸದಸ್ಯರು ಪಂಚಾಯತಿಗೆ ಸಂಬಂಧಿಸಿದಂತೆ ಪಡೆದಿರುವ ಕಾಮಗಾರಿ ಗುತ್ತಿಗೆ (ಒಪ್ಪಂದ) ಅಸ್ವಿತ್ವದಲ್ಲಿದ್ದರೆ ಮಾತ್ರ ಗ್ರಾಮ ಪಂಚಾಯತಿ ಸದಸ್ಯತ್ವ ರದ್ದಾಗುತ್ತದೆ ಎಂದು ಹೈಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿ ಎಸ್. ಸುನೀಲ್ ದತ್ತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಬೀರುಹಳ್ಳಿ ಗ್ರಾಮ ಪಂಚಾಯಿತಿಯ ಗುತ್ತಿಗೆ ಕಾಮಗಾರಿ ಕೆಲಸ ನಿರ್ವಹಿಸಿರುವ ಹಿನ್ನೆಲೆಯಲ್ಲಿ ಸದಸ್ಯ ಬಿ.ಎನ್. ಕುಮಾರ್ ಅವರನ್ನು ಅನರ್ಹಗೊಳಿಸಬೇಕು ಕೋರಿ ಅದೇ ಗ್ರಾಮದ ನಿವಾಸಿ ಬಿ.ಟಿ. ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಹೈಕೋರ್ಟ್ ಆದೇಶವೇನು?
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ- 1993ರ ಸೆಕ್ಷನ್ 12 (ಎಚ್) ಪ್ರಕಾರ ಗ್ರಾಮ ಪಂಚಾಯಿತಿ ಸದಸ್ಯರನ್ನು, ಅವರ ಪಂಚಾಯತಿಗೆ ಸೇರಿದ ಕಾಮಗಾರಿಗಳು ಗುತ್ತಿಗೆ ಪಡೆದು, ಆ ಗುತ್ತಿಗೆ ಒಪ್ಪಂದ ಅಸ್ವತ್ತಿದ್ದಲ್ಲಿ ಇದ್ದರೆ ಮಾತ್ರ ಸದಸ್ಯತ್ವ ಅನರ್ಹಗೊಳಿಸಲು ಕಾರಣವಾಗುವುದು. ಅದು ಬಿಟ್ಟು ಹಿಂದಿನ ವರ್ಷದ ಕಾಮಗಾರಿಗಳು ಅಂದರೆ ಅವರು ಸದಸ್ಯರಾಗುವ ಮುನ್ನ ಕಾಮಗಾರಿಗಳು ನಡೆಸಿ, ಅದನ್ನು ಪೂರ್ಣಗೊಳಿಸಿದ್ದರೆ, ಅದರ ಆಧಾರದ ಮೇಲೆ ಸದಸ್ಯತ್ವ ರದ್ದುಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.
ಅಲ್ಲದೆ, ಅಧೀನ ನ್ಯಾಯಾಲಯವು ಸಹ ಇದೇ ವ್ಯಾಖ್ಯಾನ ಮಾಡಿ, ಬಿ.ಎನ್. ಕುಮಾರ್ ಅವರ ಅನರ್ಹತೆ ಕೋರಿ ಅರ್ಜಿದಾರರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ತಿರಸ್ಕರಿಸಿದೆ. ಹಾಗಾಗಿ, ಅದರ ಆದೇಶದಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯ ಕಂಡು ಬರುತಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.
ಪ್ರಕರಣದ ಹಿನ್ನೆಲೆ
ಬೀರುಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಬಿ.ಎನ್. ಕುಮಾರ್ ಅವರು 2018 ರಿಂದ 2020ರ ಜುಲೈ 3ರ ನಡುವೆ ಪಂಚಾಯಿತಿಯ ಗುತ್ತಿಗೆ ಕಾಮಗಾರಿಗಳನ್ನು ಕೈಗೊಂಡು ಪೂರ್ಣಗೊಳಿಸಿದ್ದಾರೆ. ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿ ಸದಸ್ಯರ ಆಯ್ಕೆಗೆ 2020ರ ಜುಲೈ 7 ರಂದು ಚುನಾವಣಾ ಅಧಿಸೂಚನೆ ಹೊರಡಿಸಿತ್ತು. ಅದರಂತೆ ಗ್ರಾಮ ಪಂಚಾಯಿತಿ ಸದಸ್ಯ ಚುನಾವಣೆಗೆ ಸ್ಪರ್ಧಿಸಿ ಬಿ.ಎನ್. ಕುಮಾರ್ ಆಯ್ಕೆಯಾಗಿದ್ದಾರೆ.
ಅಲ್ಲದೆ, ಬಿ.ಎನ್. ಕುಮಾರ್ ಅವರ ಆಯ್ಕೆ ಪ್ರಶ್ನಿಸಿ ಮಂಡ್ಯದ ಕೆ.ಆರ್. ಪೇಟೆಯ ಹಿರಿಯ ಸಿವಿಲ್ ಮತ್ತು ಜೆಎಂಎಫ್ಸಿ ಕೋರ್ಟ್ಗೆ ಬಿ.ಟಿ. ಕುಮಾರ್ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಗ್ರಾಮ ಪಂಚಾಯಿತಿಯ ಯಾವುದೇ ಕಾಮಗಾರಿ ಗುತ್ತಿಗೆ ಪಡೆದು, ನಿರ್ವಹಿಸಿದವರು ಸದಸ್ಯರಾಗಲು ಅವಕಾಶವಿಲ್ಲ. ಇದೇ ನಿಯಮವನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ-1993ರ ಸೆಕ್ಷನ್ 12(ಎಚ್) ಪ್ರತಿಪಾದಿಸುತ್ತದೆ.
ಅದರಂತೆ ಬಿ.ಎನ್. ಕುಮಾರ್ ಅವರನ್ನು ಅವರ ಗ್ರಾಮ ಪಂಚಾಯಿತಿ ಸದಸ್ಯತ್ವನ್ನು ಅನರ್ಹಗೊಳಿಸಿ ಆದೇಶಿಸಬೇಕು ಎಂದು ಕೋರಿದ್ದರು. ಆ ಅರ್ಜಿಯನ್ನು ತಿರಸ್ಕರಿಸಿ ಅಧೀನ ನ್ಯಾಯಾಲಯವು 2022ರ ಆಗಸ್ಟ್ 6 ರಂದು ಆದೇಶಿಸಿತ್ತು. ಇದರಿಂದ ಅರ್ಜಿದಾರರು ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.












Click it and Unblock the Notifications