ಅನರ್ಹ ಶಾಸಕರು ಅಧಿಕೃತವಾಗಿ ಬಿಜೆಪಿ ಸೇರ್ಪಡೆ
ಬೆಂಗಳೂರು. ನವೆಂಬರ್ ೧೪: ಅನರ್ಹ ಶಾಸಕರು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಎಲ್ಲರಿಗೂ ಬಿಜೆಪಿ ಬಾವುಟ ನೀಡಿ ಸ್ವಾಗತ ಕೋರಲಾಯಿತು. ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್, ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆಗೊಂಡರು. ಮಲ್ಲೇಶ್ವರಂ ಬಿಜೆಪಿ ಕಚೇರಿ ಮುಂಭಾಗದ ಬೃಹತ್ ವೇದಿಕೆಯ ಮೇಲೆ ಕೇಸರಿ ಶಾಲು ಹೊದ್ದು ಮಿಂಚುತ್ತಿದ್ದ ಅನರ್ಹ ಶಾಸಕರು ಒಬ್ಬೊಬ್ಬರಾಗಿಯೇ ಬಂದು ಬಿಎಸ್ ವೈಯಿಂದ ಪಕ್ಷದ ಬಾವುಟ ಸ್ವೀಕರಿಸಿ, ಮುರಳೀಧರ್ ರಾವ್, ನಳೀನ್ ಕುಮಾರ್ ಕಟೀಲ್ ರವರು ಎಲ್ಲರ ಕೈ ಕುಲುಕಿ ಸ್ವಾಗತಿಸಿದರು.
ಎಲ್ಲ ಅನರ್ಹ ಶಾಸಕರು ಭಾರತೀಯ ಜನತಾ ಪಾರ್ಟಿಯ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡು ಕಮಲ ಕಲಿಗಳಾದರು.
ಇದೇ ವೇಳೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, "ನಾನು ಸಿಎಂ ಆಗಲು ಇವರು ಎಲ್ಲವನ್ನು ತ್ಯಾಗ ಮಾಡಿದ್ದಾರೆ. ಅವರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. ಉಪಚುನಾವಣೆಯಲ್ಲಿ ೧೫ಕ್ಕೆ ೧೫ ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರುತ್ತೇವೆ, ಪಕ್ಷದ ಎಲ್ಲ ಮುಖಂಡರುಗಳು ಹಾಗೂ ಕಾರ್ಯಕರ್ತರು ಇದಕ್ಕೆ ಸಹಕರಿಸಬೇಕೆಂದು ಮನವಿ ಮಾಡಿದರು. ಯಾವುದೇ ಕಾರಣಕ್ಕೂ ಅವರಿಗೆ ಅನ್ಯಾಯ ಮಾಡಲ್ಲ," ಎಂದು ಅನರ್ಹ ಶಾಸಕರಿಗೆ ಭರವಸೆ ಕೊಟ್ಟರು.

ಇದೇ ಸಂದರ್ಭದಲ್ಲಿ ಅನರ್ಹ ಶಾಸಕ ಹೆಚ್.ವಿಶ್ವಾನಾಥ್ ಮಾತನಾಡಿ, "ನಾವು ಯಡಿಯೂರಪ್ಪ ಸಮ್ಮುಖದಲ್ಲಿ ಅತ್ಯಂತ ಸಂತೋಷದಿಂದ ಬಿಜೆಪಿ ಪಕ್ಷ ಸೇರಿದ್ದೇವೆ. ಇದು ಪಕ್ಷಾಂತರವಲ್ಲ, ರಾಜಕೀಯ ಧೃವೀಕರಣ. ಇಡೀ ದೇಶದಲ್ಲಿ ಬಿಜೆಪಿ ಅಲೆಯಿದೆ. ನಾವು ಜನತಾ ನ್ಯಾಯಾಲಯದಲ್ಲಿ ಗೆದ್ದು ಬರುತ್ತೇವೆ" ಎಂದು ಹೇಳಿದರು.

ಗೆದ್ದರೆ 'ಮಂತ್ರಿಗಿರಿ' ಫಿಕ್ಸ್
ಒಂದು ವೇಳೆ ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಗೆದ್ದರೆ ಮಂತ್ರಿ ಪದವಿ ನೀಡುವುದಾಗಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ನಾವು ತನು-ಮನ-ಧನವನ್ನು ಅರ್ಪಿಸಿ ಗೆಲ್ಲಿಸಿಕೊಂಡು ಬರುತ್ತೇವೆ ಎಂದೂ ಇದೇ ವೇಳೆ ಮಾತನಾಡಿದ್ದಾರೆ.












Click it and Unblock the Notifications