ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಾಟೆ: ಪೊಲೀಸರ ಗುಂಡಿಗೆ ಮೂವರು ಬಲಿ
ಬೆಂಗಳೂರು, ಆಗಸ್ಟ್.12: ಸಿಲಿಕಾನ್ ಸಿಟಿಯ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ನಡೆದ ದಾಂಧಲೆ ನಿಯಂತ್ರಿಸಲು ಪೊಲೀಸರು ಫೈರಿಂಗ್ ನಡೆಸಿದ್ದರು. ಈ ವೇಳೆ ಪೊಲೀಸರ ಗುಂಡಿನ ದಾಳಿಗೆ ಮೂವರು ದುಷ್ಕರ್ಮಿಗಳು ಬಲಿಯಾಗಿದ್ದಾರೆ.
Recommended Video
ಪೊಲೀಸರ ಫೈರಿಂಗ್ ನಲ್ಲಿ 10ಕ್ಕೂ ಹೆಚ್ಚು ದುಷ್ಕರ್ಮಿಗಳಿಗೆ ಗುಂಡಿನೇಟು ತಗಲಿದೆ. ಒಬ್ಬ ದುಷ್ಕರ್ಮಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದರೆ, ಗಾಯಗೊಂಡ ಇಬ್ಬರು ದುಷ್ಕರ್ಮಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಒಂದು ಸಮುದಾಯದ ವಿರುದ್ಧ ಪೋಸ್ಟ್: ಆರೋಪಿ ನವೀನ್ ಬಂಧನ
ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ದಾಂಧಲೆ ಸಂದರ್ಭದಲ್ಲಿ ಪೊಲೀಸರು ಹಾರಿಸಿದ ಗುಂಡು ತಗಲಿ ಗಾಯಗೊಂಡ ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರೆ, ಅಲ್ಲಿಂದ ಆರೂ ಮಂದಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
100ಕ್ಕೂ ಹೆಚ್ಚು ಮಂದಿ ಪೊಲೀಸರಿಗೆ ಗಾಯ:
ಬುಧವಾರ ತಡರಾತ್ರಿ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ರಿಕ್ತರ ಗುಂಪು ದಾಂಧಲೆ ನಡೆಸಿದೆ. ಪೊಲೀಸ್ ಠಾಣೆಗಳ ಮೇಲೆ ಕಲ್ಲು, ಬಾಟಲಿ ತೂರಾಟ ನಡೆಸಿದ್ದು, ಗಲಾಟೆಯಲ್ಲಿ 100ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಗಾಯಗೊಂಡ ಪೊಲೀಸರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರಳಿಯ ನವೀನ್, ಒಂದು ಸಮುದಾಯದ ವಿರುದ್ಧ ಪೋಸ್ಟ್ ಹಾಕಿದ್ದಾರೆ ಎಂಬ ಆರೋಪವಿದೆ. ಈ ಹಿನ್ನೆಲೆ ರಾತ್ರಿ 8 ಗಂಟೆಯ ಹೊತ್ತಿಗೆ ಕಾವಲ್ ಬೈರಸಂದ್ರದಲ್ಲಿ ಇರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಎದುರು ಉದ್ರಕ್ತರ ಗುಂಪು ಗಲಾಟೆ ಶುರು ಮಾಡಿತು. ಸದ್ಯ ಬೂದಿ ಮುಚ್ಚಿದ ಕೆಂಡದಂತೆ ಆಗಿರುವ ಪುಲಕೇಶಿ ನಗರ, ಕಾವಲ್ ಬೈರಸಂದ್ರ, ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಕರ್ಫ್ಯೂ ಜಾರಿಗೊಳಿಸಿದ್ದಾರೆ.