ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಗಲಭೆ; 12 ಕಡೆ ಎನ್ಐಐ ದಾಳಿ
ಬೆಂಗಳೂರು, ಸೆಪ್ಟೆಂಬರ್ 24 : ಬೆಂಗಳೂರು ನಗರದ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಬಗ್ಗೆ ಎನ್ಐಎ ತನಿಖೆ ಆರಂಭವಾಗಿದೆ. ನಗರದ 12 ಕಡೆಗಳಲ್ಲಿ ಎನ್ಐಎ ದಾಳಿ ನಡೆಸಿದ್ದು, ಹಲವಾರು ಮಾಹಿತಿಗಳನ್ನು ಸಂಗ್ರಹ ಮಾಡಿದೆ.
Recommended Video
ಗುರುವಾರ ಡಿ. ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ 8 ಕಡೆ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ 4 ಕಡೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗಲಭೆ ಬಗ್ಗೆ ಬೆಂಗಳೂರು ಪೊಲೀಸರಿಂದ ಮಾಹಿತಿಯನ್ನು ಪಡೆದಿದ್ದಾರೆ.
ಬೆಂಗಳೂರು ನಗರದ ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಒಂದು ಸಮುದಾಯದ ವಿರುದ್ಧ ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿತ್ತು.
ಡಿ. ಜೆ. ಹಳ್ಳಿ ಪೊಲೀಸ್ ಠಾಣೆಗಳಿಗೆ ಬೆಂಕಿ ಹಚ್ಚಲಾಗಿತ್ತು. ಗಲಭೆಗೆ ಸಂಬಂಧಿಸಿದಂತೆ 2 ಪ್ರಕರಣಗಳ ವಿಚಾರಣೆಯನ್ನು ಎನ್ಐಎ ನಡೆಸಲಿದೆ. ರಾಜ್ಯ ಪೊಲೀಸರ ಸಹಕಾರ ಪಡೆದು ತನಿಖೆ ನಡೆಸಲಾಗುತ್ತದೆ ಎಂದು ಎನ್ಐಎ ಕರ್ನಾಟಕ ಹೈಕೋರ್ಟ್ಗೆ ತಿಳಿಸಿತ್ತು.

ಪೊಲೀಸ್ ಠಾಣೆಗಳ ಮೇಲೆ ನಡೆದ ದಾಳಿ
ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗಳ ಪ್ರಕರಣದಲ್ಲಿ ಪೊಲಿಸ್ ಠಾಣೆಗಳ ಮೇಲೆ ನಡೆದ ದಾಳಿ ಪ್ರಕರಣದ ತನಿಖೆಯನ್ನು ಎನ್ಐಎ ನಡೆಸುತ್ತಿದೆ. ಕಾನೂನು ಬಾಹಿರ ಅಪರಾಧ ಚಟುವಟಿಕೆಗಳ ನಿಯಂತ್ರಣ ಕಾಯ್ದೆ ಅಡಿಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಎನ್ಐಎ ನಡೆಸಲಿದೆ.

ರಾಜ್ಯ ಪೊಲೀಸರ ಸಹಕಾರದಿಂದ ತನಿಖೆ
ಬೆಂಗಳೂರಿನಲ್ಲಿ ಎನ್ಐಎ ಕಚೇರಿಯನ್ನು ಹೊಂದಿದೆ. ಡಿವೈಎಸ್ಪಿ ಸೇರಿ ಐವರು ಸಿಬ್ಬಂದಿಗಳು ಮಾತ್ರ ಇಲ್ಲಿ ಇದ್ದಾರೆ. ಆದ್ದರಿಂದ, ರಾಜ್ಯ ಪೊಲೀಸರ ಸಹಕಾರದ ಜೊತೆ ತನಿಖೆ ಮಾಡುತ್ತೇವೆ ಎಂದು ಎನ್ಐಎ ಕರ್ನಾಟಕ ಹೈಕೋರ್ಟ್ಗೆ ಹೇಳಿಕೆ ನೀಡಿದೆ.

ಶಾಸಕರ ಮನೆಗೆ ಬೆಂಕಿ
ಆಗಸ್ಟ್ 11ರಂದು ಮೊದಲು ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಲಾಗಿತ್ತು. ಬಳಿಕ ಡಿ. ಜೆ. ಹಳ್ಳಿ ಪೊಲೀಸ್ ಠಾಣೆಗೆ ಜನರು ಮುತ್ತಿಗೆ ಹಾಕಿದ್ದರು. ಪೊಲೀಸ್ ವಾಹನ ಜಖಂ ಮಾಡಿದ್ದರು. ಠಾಣೆಗೆ ಬೆಂಕಿ ಹಚ್ಚಲು ಪ್ರಯತ್ನ ನಡೆಸಿದ್ದರು.

ಮೂವರು ಮೃತಪಟ್ಟಿದ್ದರು
ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಪೊಲೀಸರು ಗಲಭೆ ನಿಯಂತ್ರಣ ಮಾಡಲು ಗುಂಡು ಹಾರಿಸಿದಾಗ ಮೂವರು ಮೃತಪಟ್ಟಿದ್ದರು. ಗಲಭೆಗೆ ಸಂಬಂಧಿಸಿದಂತೆ ಇದುವರೆಗೂ 200ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದೆ.












Click it and Unblock the Notifications