ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಕರ್ಫ್ಯೂ: 110 ಆರೋಪಿಗಳ ಬಂಧನ
ಬೆಂಗಳೂರು, ಆಗಸ್ಟ್.12: ಸಿಲಿಕಾನ್ ಸಿಟಿಯ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ 110ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ.
Recommended Video
ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ, ಡಿಸಿಪಿ ಕಾರು ಜಖಂ, ಶಾಸಕರ ಮನೆ ಎದುರು ಕಲ್ಲು ತೂರಾಟ ಸೇರಿದಂತೆ ಬಂಧಿತರ ವಿರುದ್ಧ 10ಕ್ಕೂ ಹೆಚ್ಚು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಳ್ಳಲು ಪೊಲೀಸರು ಮುಂದಾಗಿದ್ದಾರೆ.
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ
ಮಂಗಳವಾರ ನಡೆದ ದಾಂಧಲೆಗೆ ಸಂಬಂಧಿಸಿದಂತೆ ಸ್ಥಳದಲ್ಲಿನ ಸಿಸಿ ಕ್ಯಾಮರಾ ಮತ್ತು ಮೊಬೈಲ್ ನಲ್ಲಿ ಸೆರೆ ಹಿಡಿದಿರುವ ದೃಶ್ಯಾವಳಿಗಳನ್ನು ಸಂಗ್ರಹಿಸಲು ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.
ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಕರ್ಫ್ಯೂ ಜಾರಿ:
ಬುಧವಾರ ತಡರಾತ್ರಿ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ರಿಕ್ತರ ಗುಂಪು ದಾಂಧಲೆ ನಡೆಸಿದೆ. ಪೊಲೀಸ್ ಠಾಣೆಗಳ ಮೇಲೆ ಕಲ್ಲು, ಬಾಟಲಿ ತೂರಾಟ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಸಿಡಿಸಿದ್ದಾರೆ. ಪರಿಸ್ಥಿತಿ ಹತೋಟಿಗೆ ಬಾರದಿದ್ದಾಗ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಸದ್ಯ ಬೂದಿ ಮುಚ್ಚಿದ ಕೆಂಡದಂತೆ ಆಗಿರುವ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಕರ್ಫ್ಯೂ ಜಾರಿಗೊಳಿಸಿದ್ದಾರೆ.
ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರಳಿಯ ನವೀನ್, ಒಂದು ಸಮುದಾಯದ ವಿರುದ್ಧ ಪೋಸ್ಟ್ ಹಾಕಿದ್ದಾರೆ ಎಂಬ ಆರೋಪವಿದೆ. ಈ ಹಿನ್ನೆಲೆ ರಾತ್ರಿ 8 ಗಂಟೆಯ ಹೊತ್ತಿಗೆ ಕಾವಲ್ ಬೈರಸಂದ್ರದಲ್ಲಿ ಇರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಎದುರು ಉದ್ರಕ್ತರ ಗುಂಪು ಗಲಾಟೆ ಶುರು ಮಾಡಿತು.