ಡಿ.ಜೆ ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಆಪ್ತ ಸೆರೆ; ಸಂಪತ್ ರಾಜ್ ಗಾಗಿ ಮುಂದುವರೆದ ಶೋಧ
ಬೆಂಗಳೂರು, ನವೆಂಬರ್ 16: ಡಿ.ಜೆ. ಹಳ್ಳಿ ಗಲಭೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಅವರ ಆಪ್ತನಾದ ರಿಯಾಜುದ್ದೀನ್ ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಡಿ. ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿರುವ ಮಾಜಿ ಮೇಯರ್ ಸಂಪತ್ ರಾಜ್ ಪರಾರಿಯಾಗಲು ಸಹಕರಿಸಿದ ಆರೋಪದ ಮೇಲೆ ರಿಯಾಜುದ್ದೀನ್ ಎಂಬಾತನನ್ನು ಬಂಧಿಸಲಾಗಿದೆ. ಆಸ್ಪತ್ರೆಯಿಂದ ಪರಾರಿಯಾಗಲು ತನ್ನ ಕಾರನ್ನು ನೀಡಿದ್ದ ರಿಯಾಜುದ್ದೀನ್, ನಾಗರಹೊಳೆಯ ಫಾರಂ ಹೌಸ್ ನಲ್ಲಿ ಆರೋಪಿಗೆ ಆಶ್ರಯ ನೀಡಿದ ಆರೋಪ ಹೊರಿಸಲಾಗಿದೆ. ಸಂಪತ್ ರಾಜ್ ಗೆ ಪರಿಚಿತ ರಿಯಾಜುದ್ದೀನ್ ವಿಚಾರಣೆ ವೇಳೆ ಕೆಲ ಮಾಹಿತಿ ಹಂಚಿಕೊಂಡಿದ್ದು, ಸಂಪತ್ ರಾಜ್ ಅಡಗಿರುವ ತಾಣ ಪತ್ತೆ ಮಾಡಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ.
ಆಯುಕ್ತರ ಸಭೆ: ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಬಂಧಿಸದ ಸಿಸಿಬಿ ಪೊಲೀಸರ ಕಾರ್ಯ ವೈಖರಿ ಬಗ್ಗೆ ನಗರ ಪೊಲೀಸ್ ಆಯುಕ್ತ ಕಮಲಪಂತ್ ಇಂದು ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ. ಡಿ.ಜೆ.ಹಳ್ಳಿ ಪ್ರಕರಣದ ತನಿಖೆ ಬಗ್ಗೆ ವಿವರಗಳನ್ನು ಪಡೆದುಕೊಂಡ ಆಯುಕ್ತರು, ಸಂಪತ್ ರಾಜ್ ಬಂಧನವಾದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಅವರನ್ನು ಬಂಧಿಸದ ಪೊಲೀಸರ ಕಾರ್ಯ ವೈಖರಿ ಬಗ್ಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಒಬ್ಬ ಮಾಜಿ ಮೇಯರ್ ನ್ನು ಬಂಧಿಸಲು ಸಾಧ್ಯವಾಗಲಿಲ್ಲವೇ ಎಂದು ಹೈಕೋರ್ಟ್ ಚಾಟಿ ಬೀಸಿದ ಹಿನ್ನೆಲೆಯಲ್ಲಿ ಇದೀಗ ಸಿಸಿಬಿ ಪ್ರತ್ಯೇಕ ತಂಡಗಳನ್ನು ರಚಿಸಿದ್ದು, ಸಂಪತ್ ರಾಜ್ಗಾಗಿ ಹುಡುಕಾಟ ನಡೆಸುತ್ತಿದೆ. ಆದರೆ ಈವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ ಎನ್ನಲಾಗಿದೆ. ಡಿ.ಜೆ.ಹಳ್ಳಿ ಗಲಭೆಗೆ ಪ್ರಚೋದನೆ ನೀಡಿದ ಆರೋಪ ಸಂಪತ್ ರಾಜ್ ಮೇಲಿದೆ.