ರಾಜಕೀಯಕ್ಕೆ ಮಕ್ಕಳನ್ನು ಬಳಸಿಕೊಳ್ಳಬಾರದು: ಡಿಕೆಶಿ
ಬೆಂಗಳೂರು ಜೂ.20: ಪ್ರಧಾನಿ ನರೇಂದ್ರ ಮೋದಿ ಅವರ ಕರ್ನಾಟಕ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿರುವುದು ದುರದೃಷ್ಟಕರ. ಸರ್ಕಾರದ ಈ ನಡೆ ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸೋಮವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, "ಕರ್ನಾಟಕ ಶಾಂತಿಪ್ರಿಯ ರಾಜ್ಯವಾಗಿದೆ. ವಿದ್ಯಾವಂತರಾದ ಕನ್ನಡಿಗರಲ್ಲಿ ಯಾರೂ ಎಂದಿಗೂ ಕಾನೂನು ಕೈಗೆತ್ತಿಕೊಳ್ಳುವುದಿಲ್ಲ. ಪ್ರತಿಭಟನೆ ನಡೆಸುವುದಾದರೆ ಅದನ್ನು ಕ್ರಮಬದ್ಧ, ಕಾನೂನುಬದ್ಧ ರೀತಿಯಲ್ಲಿ ಮಾಡುತ್ತಾರೆ. ಆದರೆ ರಾಜ್ಯ ಸರ್ಕಾರ ಶಾಲಾ, ಕಾಲೇಜುಗಳಿಗೆ ರಜೆ ನೀಡುವಷ್ಟರ ಮಟ್ಟಿಗೆ ಚಿಂತಿಸಿದೆ ಎಂಬುದು ಅರ್ಥವಾಗುತ್ತಿಲ್ಲ," ಎಂದು ವ್ಯಂಗ್ಯವಾಡಿದರು.

ರಾಜಕೀಯಕ್ಕೆ ಮಕ್ಕಳ ಬಳಸಿಕೊಳ್ಳಬಾರದು
ವಿದ್ಯಾರ್ಥಿಗಳು ಭಯೋತ್ಪಾದಕರಲ್ಲ, ಅವರು ವಿದ್ಯಾವಂತ ಹಾಗೂ ಕಾನೂನಿಗೆ ತಲೆಬಾಗುವ ನಾಗರಿಕರು. ಬೆಂಗಳೂರಲ್ಲಿ ದೇಶಕ್ಕೆ ಕೀರ್ತಿ ತರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ. ಅಂತಹ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುವಂತೆ ಸರ್ಕಾರ ರಜೆ ನೀಡಿ ಆದೇಶಿಸಿರುವುದು ಸರಿಯಾದ ಕ್ರಮವಲ್ಲ. ಈ ಮೂಲಕ ವಿದ್ಯಾರ್ಥಿಗಳನ್ನು ಬಿಜೆಪಿ ನಾಯಕರು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಬಾರದು ಎಂದು ಆಕ್ರೋಶ ಹೊರ ಹಾಕಿದರು.

ರಾಹುಲ್-ಸೋನಿಯಾ ತಪ್ಪು ಮಾಡಿಲ್ಲ.
ಕಾಂಗ್ರೆಸ್ ಪಕ್ಷದ ಪ್ರತಿಭಟನೆ ಕುರಿತು ಕೇಳಿದ ಪ್ರಶ್ನೆಗೆ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಎಲ್ಲರಂತೆ ನಮಗೂ ಪ್ರತಿಭಟನೆ ಮಾಡುವ ಹಕ್ಕಿದೆ. ಕೇಂದ್ರ ಸರ್ಕಾರ ಕಾನೂನನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಸಲ್ಲಿಸಿರುವ ಚುನಾವಣಾ ಅಫಿಡವಿಟ್ ನಲ್ಲಿ ಪತ್ರಿಕಾ ಸಂಸ್ಥೆಯ ಮಾಲೀಕತ್ವವನ್ನು ಘೋಷಿಸಿಕೊಂಡಿಲ್ಲ. ಈ ಸಂಸ್ಥೆ ಲಾಭಯೇತರ ಸಂಸ್ಥೆಯಾಗಿದ್ದು, ಸ್ವಾತಂತ್ರ್ಯದ ಸಮಯದಲ್ಲಿ ಹಾಗೂ ನಂತರ ಕಾಂಗ್ರೆಸ್ ಧ್ವನಿಯಾಗಲು ನೆಹರೂ ಅವರು ಪತ್ರಿಕೆಯನ್ನು ಆರಂಭಿಸಿದ್ದರು. ಅದನ್ನು ಉಳಿಸಿಕೊಂಡು ಹೋಗುತ್ತಿದ್ದೇವೆ ಎಂದು ಕಾಂಗ್ರೆಸ್ ಪ್ರತಿಭಟನೆ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.












Click it and Unblock the Notifications