ಗೇಟ್ ಬಿದ್ದು ಮೃತಪಟ್ಟ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಡಿಸಿಎಂ, ಅಧಿಕಾರಿಗಳ ಅಮಾನತು
ಬೆಂಗಳೂರು, ಸೆಪ್ಟೆಂಬರ್ 24: ಮಲ್ಲೇಶ್ವರದ ರಾಜಾಶಂಕರ್ ಆಟದ ಮೈದಾನದಲ್ಲಿ ಕಬ್ಬಿಣದ ಗೇಟ್ ಬಿದ್ದು ಮೃತಪಟ್ಟಿದ್ದ ಬಾಲಕ ನಿರಂಜನ್ ಕುಟುಂಬಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ನಿರ್ಲಕ್ಷ್ಯ ತೋರಿರುವ ಸಹಾಯಕ ಎಂಜಿನಿಯರ್ ಶ್ರೀನಿವಾಸ್ ರಾಜು ಅವರ ಅಮಾನತಿಗೆ ಆದೇಶ ಮಾಡಲಾಗಿದ್ದು, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಳಾದ ಕೆ. ಶಾಂತಲಾ, ದೇವರಾಜು, ಬೇಬಿ ಆಯೇಷಾ ಹುಸೇನ್ ಅವರನ್ನು ಅಮಾನತುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಕಾರ್ಯಪಾಲಕ ಇಂಜಿನಿಯರ್ ಎಲ್.ವೆಂಕಟೇಶ್ ಅವರಿಗೆ ಕಾರಣ ಕೇಳಿ ನೋಟೀಸ್ ನೀಡಲಾಗಿದೆ.

2021 ರ ಮೇ 21 ರಂದು ಈ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿತ್ತು. ಘಟನೆಯ ನಂತರ ಸ್ಥಳ ಪರಿಶೀಲನೆ ವೇಳೆ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸದೇ ಇರುವುದು ಹಾಗೂ ಮೈದಾನ ನಿರ್ವಹಣೆಯಲ್ಲಿ ಕೊರತೆ ಉಂಟಾಗಿದೆ ಎಂದು ಹೇಳಲಾಗಿದೆ. ಆಟದ ಮೈದಾನದ ಸಂಪೂರ್ಣ ಕಾಮಗಾರಿಯ ಕುರಿತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಒಂದು ವಾರದೊಳಗೆ ಪರಿಶೀಲಿಸಿ ಸಂಪೂರ್ಣ ವರದಿ ನೀಡುವಂತೆ ತಿಳಿಸಲಾಗಿದೆ.
ತನಿಖೆ ನಡೆಸುವಂತೆ ಬಿಬಿಎಂಪಿ ಕಮಿಷನರ್ ಗೆ ದಿನೇಶ್ ಗುಂಡೂರಾವ್ ಸೂಚನೆ
ಮಲ್ಲೇಶ್ವರಂ ಬಿಬಿಎಂಪಿ ಆಟದ ಮೈದಾನದಲ್ಲಿ ಗೇಟ್ ಬಿದ್ದು 11 ವರ್ಷದ ಬಾಲಕ ನಿರಂಜನ್ ಸಾವಿಗಿಡಾದ ಪ್ರಕರಣ ಕುರಿತು ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಆರೊಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬಾಲಕನ ಮನೆಗೆ ಇಂದು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಸಚಿವರು, ದುರಙತ ಘಟನೆ ಕುರಿತು ದುಃಖ ವ್ಯಕ್ತಪಡಿಸಿದರು. ಕುಂಟುಬಕ್ಕೆ ಬಿಬಿಎಂಪಿ ಯಿಂದ 5 ಲಕ್ಷ ಹಾಗೂ ಗಾಂಧಿ ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ 5 ಲಕ್ಷ ಪರಿಹಾರ ಘೋಷಿಸಿದರು. ಅಲ್ಲದೇ ಬಾಲಕನ ಸಹೋದರಿಯ ಸಂಪೂರ್ಣ ವಿದ್ಯಾಭ್ಯಾಸದ ಹೊಣೆಯನ್ನ ಆರ್. ಗುಂಡೂರಾವ್ ಫೌಂಡೇಶನ್ ವಹಿಸಿಕೊಳ್ಳಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ತಿಳಿಸಿದರು.
ಘಟನೆ ಕುರಿತು ವಿಷಾಧ ವ್ಯಕ್ತಪಡಿಸಿದ ಸಚಿವ ದಿನೇಶ್ ಗುಂಡೂರಾವ್, ಈ ಬಗ್ಗೆ ಅಗತ್ಯ ತನಿಖೆ ನಡೆಸಲು ಬಿಬಿಎಂಪಿ ಕಮಿಷನರ್ ಗೆ ಸೂಚನೆ ನೀಡಿದರು. 4 ವರ್ಷದ ಹಿಂದೆ ಮೈದಾನಕ್ಕೆ ಗೇಟ್ ಅಳವಡಿಸಲಾಗಿದೆ. ಸಂಬಂಧಪಟ್ಟವರಿಂದ ವರದಿ ತರಿಸಿಕೊಳುತ್ತೇವೆ. ಕಳಪೆ ಮಾಡಿದ್ದಾರೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಈ ಕುರಿತು ಯಾರಿಂದಲೂ ದೂರು ಬಂದಿರಲಿಲ್ಲ. ಕಾರ್ಯಕರ್ತರ ಗಮನಕ್ಕೂ ಬಂದಿಲ್ಲ. ಯಾರಿಂದ ಲೋಪ ಆಗಿದೆ ಎಂಬ ಬಗ್ಗೆ ಪರಿಶೀಲಿಸುತ್ತೇವೆ. ಈ ಬಗ್ಗೆ ಬಿಬಿಎಂಪಿ ಕಮಿಷನರ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.












Click it and Unblock the Notifications