ಎಷ್ಟೇ ಕೇಸ್ ಆದ್ರೂ ನಾನೇ ಎದುರಿಸ್ತೀನಿ, ಪ್ರತಿಭಟನೆ ಮಾಡ್ಬೇಡಿ ಎಂದ ಡಿಕೆಶಿ
ಬೆಂಗಗಳೂರು, ಅ.3: ನನ್ನ ಮೇಲೆ ಎಷ್ಟೇ ದೂರುಗಳು ದಾಖಲಾದರೂ ನಾನೇ ಎದುರಿಸುತ್ತೇನೆ ನನ್ನ ಪರವಾಗಿ ಯಾವುದೇ ಪ್ರತಿಭಟನೆ, ಹೋರಾಟ ಬೇಡ ಎಂದು ಸಚಿವ ಡಿಕೆ ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಆದಾಯ ತೆರಿಗೆ ಇಲಾಖೆ ದಾಳಿ, ಜಾರಿ ನಿರ್ದೇಶನಾಲಯ ಪ್ರಕರಣ ದಾಖಲು ಮತ್ತಿತರ ಕಿರುಕುಳಗಳ ಹಿಂದೆ ರಾಜಕೀಯ ಒತ್ತಡ ಹಾಗೂ ದುರುದ್ದೇಶವಿದೆ ಎಂದು ಆಪಾದಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಐಟಿ ಕಚೇರಿ ಎದಿರು ಬುಧವಾರ ಪ್ರತಿಭಟನೆ ನಡೆಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಅವರು ಈ ಮನವಿ ಮಾಡಿಕೊಂಡಿದ್ದಾರೆ.
ತಮಗೆ ಈ ನೆಲದ ಕಾನೂನಿನ ಮೇಲೆ ಅಪಾರ ಗೌರವ ಮತ್ತು ನಂಬಿಕೆ ಇದೆ. ತಮಗೆ ಎದುರಾಗಿರುವ ಸವಾಲು ಹಾಗೂ ಸಮಸ್ಯೆಗಳನ್ನು ಕಾನೂನಾತ್ಮಕ ಹಾಗೂ ರಾಜಕೀಯವಾಗಿ ಎದುರಿಸುವ ಶಕ್ತಿಯೂ ತಮಗಿದೆ.

ರಾಜಕೀಯ ಎದುರಾಳಿಗಳಿಗೆ ರಾಜಕೀಯವಾಗಿಯೇ ಉತ್ತರ ಕೊಡುತ್ತೇನೆ. ಹೀಗಾಗಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಯಾವುದೇ ಚಳವಳಿ ನಡೆಸುವುದಾಗಲಿ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವುದಾಗಲಿ ಮಾಡುವುದು ಬೇಡ. ಇಂಥ ಹೋರಾಟಗಳಿಂದ ಜನಸಾಮಾನ್ಯರಿಗೂ ತೊಂದರೆ ಆಗುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಮ್ಮ ಪರವಾಗಿ ಯಾವುದೇ ಪ್ರತಿಭಟನೆ, ಚಳವಳಿ, ಹೋರಾಟ ಮಾಡಬಾರದು ಎಂದು ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ತಮ್ಮ ಬೆಂಬಲಿಗರಿಗೆ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.












Click it and Unblock the Notifications