ಡಿಕೆಶಿ ಬಂಧನ; ಬೆಂಗಳೂರಲ್ಲಿ ಸೆ.11ರಂದು ಬೃಹತ್ ಪ್ರತಿಭಟನೆ
ಬೆಂಗಳೂರು, ಸೆಪ್ಟೆಂಬರ್ 10 : "ಡಿ. ಕೆ. ಶಿವಕುಮಾರ್ ಅಕ್ರಮ ಬಂಧನ ವಿರೋಧಿಸಿ ಬುಧವಾರ ಬೆಂಗಳೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ" ಎಂದು ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಹೇಳಿದರು.
ಮಂಗಳವಾರ ಮೌರ್ಯ ಹೋಟೆಲ್ನಲ್ಲಿ ರಾಮಲಿಂಗಾ ರೆಡ್ಡಿ ಪತ್ರಿಕಾಗೋಷ್ಠಿ ನಡೆಸಿದರು. "ಪ್ರತಿಭಟನೆಯಲ್ಲಿ ಹಲವಾರು ಸಂಘ ಸಂಸ್ಥೆಗಳು, ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗುತ್ತಾರೆ. ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲು ಈಗಾಗಲೇ ಕರೆ ನೀಡಲಾಗಿದೆ" ಎಂದರು.
"ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇಡಿ, ಐಟಿ ದುರ್ಬಳಕೆ ಮಾಡಲಾಗುತ್ತಿದೆ. ದೆಹಲಿಯ ಸುನೀಲ್ ಶರ್ಮ ನಿವಾಸದಲ್ಲಿ ದೊರೆತ ಹಣ ನಮ್ಮದೇ ಅಂತಾ ಸುನೀಲ್ ಶರ್ಮ ಈಗಾಗಲೇ ಹೇಳಿದ್ದಾರೆ. ಆದರೂ ಅದು ಡಿ. ಕೆ. ಶಿವಕುಮಾರ್ ಹಣ ಎಂದು ಇಡಿ ಒತ್ತಡ ತರುತ್ತಿದ್ದಾರೆ" ಎಂದು ಆರೋಪಿಸಿದರು.

"ಬೆಂಗಳೂರಿನ ನ್ಯಾಷನಲ್ ಕಾಲೇಜಿನಿಂದ ಫ್ರೀಡಂಪಾರ್ಕ್ ತನಕ ಶಾಂತಿಯುತ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ. ದುರುದ್ದೇಶಪೂರಕವಾಗಿ ಡಿ. ಕೆ. ಶಿವಕುಮಾರ್ರನ್ನು ಬಂಧಿಸಲಾಗಿದೆ. ಹೀಗಾಗಿ ಕೇಂದ್ರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ" ಎಂದರು.
ಪ್ರತಿಭಟನಾ ಜಾಥಾ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಿಂದ ಫ್ರೀಡಂಪಾರ್ಕ್ ತನ ಸಾಗಲಿದೆ. ಆದ್ದರಿಂದ, ಬೆಂಗಳೂರು ದಕ್ಷಿಣ ಭಾಗದಲ್ಲಿ ಬುಧವಾರ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್ ಬಂಧನವಾಗಿದೆ. ಸೆಪ್ಟೆಂಬರ್ 13ರ ತನಕ ಅವರನ್ನು ಇಡಿ ವಶಕ್ಕೆ ನೀಡಲಾಗಿದೆ. ಮಂಗಳವಾರ ಮಧ್ಯಾಹ್ನ ಡಿ. ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾಗೂ ಇಡಿ ಸಮನ್ಸ್ ನೀಡಿದ್ದು, ಸೆ.12ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ.












Click it and Unblock the Notifications