ಬಿಡದಿ ರೈತರಿಗೆ ಗುಡ್ನ್ಯೂಸ್: ಬಲವಂತದಿಂದ ಜಮೀನು ಪಡೆಯಲ್ಲ ಎಂದ ಡಿಕೆ ಶಿವಕುಮಾರ್, ಜು.17ಕ್ಕೆ ಬಿಜೆಪಿ ಧರಣಿ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಬಿಡದಿ ಟೌನ್ ಶಿಪ್ ಯೋಜನೆಗೆ ಸಂಬಂಧಿಸಿದಂತೆ ಸಾಕಷ್ಟು ಆರೋಪಗಳು, ಪ್ರತಿಭಟನೆಗಳು ಹೆಚ್ಚಾಗಿವೆ. ಇದರ ಬೆನ್ನಲ್ಲೆ ಎಚ್ಚೆತ್ತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರೈತರಿಗೆ ಗುಡ್ನ್ಯೂಸ್ ನೀಡಿದ್ದಾರೆ. ಯೋಜನೆಗಾಗಿ ಬಲವಂತವಾಗಿ ಒಬ್ಬೇ ಒಬ್ಬ ರೈತರ, ರೈತ ತಾಯಂದಿರ ಜಮೀನನ್ನೂ ಪಡೆದುಕೊಳ್ಳುವುದಿಲ್ಲ. ಕೃಷಿಗೆ ಜಮೀನು ನೀಡಲು ಇಷ್ಟವಿಲ್ಲದವರು ತಾವು ಕೃಷಿ ಮುಂದುವರಿಸಬಹುದು ಎಂದು ಹೇಳಿದ್ದಾರೆ. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿ, ರೈತ ವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸುವ ಕುರಿತು ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಡಿಕೆ ಶಿವಕುಮಾರ್ ಅವರು, ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದಾಗ ಬಿಡದಿ ಟೌನ್ ಶಿಪ್ ಗಾಗಿ ಮಾಡಿದ್ದೆಲ್ಲವನ್ನೂ ದಾಖಲೆ ಸಮೇತ ಮುಂದಿಟ್ಟರು. ಅಂದಿನಿಂದ ಇಂದಿನವರೆಗಿನ ಎಲ್ಲ ಸತ್ಯ ಸಂಗತಿಗಳನ್ನು ಸಿಎಂ ವಿವರಿಸಿದರು.

ರೈತರು ರಾಜಕೀಯ ಪ್ರೇರಿತ ಕುಮ್ಮಕ್ಕಿನಿಂದ ಮೊನ್ನೆ ಅಧಿಕಾರಿಗಳ ಮೇಲೆ ದಾಳಿ ಆಗಿದೆ. ರೈತರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಎಲ್ಲರ ಮನಸ್ಸಿಗೆ ನೋವುಂಟು ಮಾಡುವುದು ನನಗೆ ಇಷ್ಟವಿಲ್ಲ. ಬಿಡದಿ ಟೌನ್ ಶಿಪ್ ನನ್ನ ಕನಸಿನ ಯೋಜನೆ ಅಲ್ಲ. ನಾನು ಶಂಕುಸ್ಥಾಪನೆ ಸಹ ನೆರವೇರಿಸಿಲ್ಲ. ಈ ಯೋಜನೆಯ ಪಿತಾಮಹ ಆಗಲು ಸಹ ನನಗೆ ಇಷ್ಟವಿಲ್ಲ. ಹಿರಿಯರು ನೀಡಿದ ಮಾರ್ಗದರ್ಶನದ ಪ್ರಕಾರ ಮುನ್ನಡೆಯುವೆ ಎಂದು ಕುಮಾರಸ್ವಾಮಿಗೆ ಟಾಂಗ್ ಕೊಟ್ಟರು.
ನಾನು ರೈತನ ಮಗನಾಗಿದ್ದು, ಇಂದು ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಆ ಸ್ಥಾನ ಸಿಕ್ಕಿದ್ದು, ಕೆಲವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ನನ್ನನ್ನು ಜೈಲಿಗೆ ಕಳುಹಿಸಲು ವರ್ಷಗಳಿಂದಲೂ ಸಂಚು ಮಾಡಿದ್ದು, ನನಗೆ ಗೊತ್ತಿದೆ. ಡಿಕೆಶಿ ಜೈಲಿಗೆ ಹೋಗುವ ದಿನ ಬಂದೇ ಬರುತ್ತದೆ ಎಂದು ಕುಮಾರಣ್ಣ ಅವರು ಇಂದೂ ಹೇಳಿದ್ದಾರೆ. ಅವರಿಗೆ ಒಳ್ಳೆಯದಾಗಲಿ. ನನಗೆ ಜೈಲು ಹೊಸದೇನಲ್ಲ ಎಂದು ತಿರುಗೇಟು ನೀಡಿದರು.
ಇಂದು ಜಮೀನಿನ ಬೆಲೆ ಎಲ್ಲರಿಗೂ ಗೊತ್ತು
ಬೆಂಗಳೂರಿನ ಸುತ್ತಮುತ್ತಲು ಸಾವಿರ ಎಕ್ರೆ ಜಮೀನು ಹಲವು ಯೋಜನೆಗಳಿಗಾಗಿ ಸ್ವಾಧೀನವಾಗಿದೆ. ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಸಾವಿರಾರು ಎಕ್ರೆ ಸ್ವಾಧೀನ ಮಾಡಲಾಗಿದೆ. ಇಂದು ಸುತ್ತಮುತ್ತಲಿನ ಜಮೀನಿನ ಬೆಲೆ ಏನೆಂದು ಎಲ್ಲರಿಗೂ ಗೊತ್ತು.
ಕುಮಾರಸ್ವಾಮಿ ಸಿಎಂ ಆಗಿದ್ದಾಗ 2006ರಲ್ಲಿ ಅವರ ನೇತೃತ್ವದ ಸಭೆಯಲ್ಲಿ ಐದು ಉಪನಗರಗಳ ಸಮಗ್ರ ಅಭಿವೃದ್ಧಿಗೆ ಯೋಜನೆಗೆ ತೀರ್ಮಾನಿಸಿದ್ದರು. ಅಂದೇ ಬಿಡದಿ ಟೌನ್ಶಿಪ್ ಯೋಜನೆ ಹುಟ್ಟಿತ್ತು. ಬಿಎಂಆರ್ಡಿಯಿಂದ ಪಿಪಿಪಿ ಮಾದರಿಯಲ್ಲಿ ಸಮಗ್ರ ಉಪನಗರ ಅಭಿವೃದ್ಧಿಪಡಿಸಲು ಅಧಿಕೃತ ಪಾಲುದಾರರನ್ನು ಗುರುತಿಸಲು ಜಾಗತಿಕ ಟೆಂಡರ್ ಕರೆಯಲು ತೀರ್ಮಾನಿಸಲಾಯಿತು.
ಅಂದು ಆರ್. ಅಶೋಕ್ ಅವರು ಸಹ ಅಂದು ಸಚಿವ ಸಂಪುಟದಲ್ಲಿದ್ದರು. 2007ರಲ್ಲಿ ಮತ್ತೆ ಹೆಚ್ಚುವರಿಯಾಗಿ ಮಾರಂಡಹಳ್ಳಿ, ಒಡೆಯರಳ್ಳಿ ಸೇರಿದಂತೆ ಹೊಸದಾಗಿ ಗ್ರಾಮಗಳನ್ನು ಟೌನ್ ಶಿಪ್ ಯೋಜನೆಗೆ ಸೇರಿಸಲಾಯಿತು ಎಂದು ಅವರು ಯೋಜನೆ ಆರಂಭಿಸಿದವರು ಕುಮಾರಸ್ವಾಮಿ ಎಂದು ವಿವರಿಸಿದರು.
ಖಾಸಗಿ ಜಮೀನಿನಲ್ಲಿ ಯಾವುದೇ ವ್ಯಕ್ತಿ, ಸಂಸ್ಥೆ ಸಹ ಪೂರ್ವಾನುಮತಿ ಪಡೆಯದೇ ಅಭಿವೃದ್ಧಿಗೆ ಅನುಮತಿ ನೀಡತಕ್ಕದಲ್ಲ ಎಂದು ಗೆಜೆಟ್ ನೋಟಿಫಿಕೇಶನ್ ಹೊರಡಿಸಿ ರೆಡ್ ಝೋನ್ ಎಂದು ಗುರುತಿಸಿದ್ದರು. ಗ್ರಾಮಠಾಣಾದಲ್ಲಿರುವ ಆಸ್ತಿ, ಮನೆಗಳು ಸೇರಿದಂತೆ ಒಕ್ಕಲೆಬ್ಬಿಸಲು, ಪರಿಹಾರ ಮೊತ್ತ ಘೋಷಿಸಿ ಆದೇಶಿಸಿದ್ದರು. ಖಾಸಗಿ ಡೆವಲಪರ್ ಡಿಎಲ್ಎಫ್ ಗೆ ಪತ್ರ ಬರೆದು ರೂ. 400 ಕೋಟಿ ಸೆಕ್ಯುರಿಟಿ ಡೆಪಾಸಿಟಿ ದುಡ್ಡು ಕಟ್ಟಿಸಿಕೊಂಡು ರಿಯಲ್ ಎಸ್ಟೇಟ್ ಅವಕಾಶ ಕೊಟ್ಟಿದ್ದರು ಎಂದು ಒಟ್ಟಾರೆ ಅಂದಿನಿಂದ ಈವರೆಗೆ ಆದ ಒಂದಷ್ಟು ಮಾಹಿತಿಗಳನ್ನು ಬಿಚ್ಚಿಟ್ಟರು.
ಬಿಎಸ್. ಯಡಿಯೂರಪ್ಪ ಅವರು 2010ರಲ್ಲಿ ಸಮಗ್ರವಾದ ಉಪನಗರ ಯೋಜನೆ ಮುಂದುವರೆಸಲು ಎರಡನೇ ಬಾರಿ ಜಾಗತಿಕ ಟೆಂಡರ್ ಕರೆದರು. ರೈತರ ಆಸ್ತಿಯನ್ನು ಕಬಳಿಸಲು ನೀವು ನಡೆಸಿರುವ ಸಂಚನ್ನು ಎಷ್ಟು ದಿನ ಮುಚ್ಚಿಕೊಳ್ಳಲು ಸಾಧ್ಯವೆಂದು ಮೈತ್ರಿ ಪಕ್ಷದ ನಾಯಕರಿಗೆ ತಿರುಗೇಟು ನೀಡಿದರು.
ಬಿಡದಿ ಟೌನ್ ಶಿಪ್ ಅನುಷ್ಠಾನ ಬಗ್ಗೆ ಪರಿಶೀಲಿಸಲು ಒಂದು ಸಮಿತಿಯನ್ನು ರಚಿಸುವ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಈ ಸಮಿತಿಯ ವರದಿಯ ಆಧಾರದಲ್ಲಿ ಯೋಜನೆಯ ಬಗ್ಗೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರೈತ ವಿರೋಧಿ ಆಡಳಿತ: ಜುಲೈ 17ರಂದು ಬಿಜೆಪಿ ಪ್ರತಿಭಟನೆ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ರಾಜ್ಯ ಸರ್ಕಾರ ಬಡವರು ಹಾಗೂ ರೈತರ ವಿರೋಧಿ ಆಡಳಿತ ನಡೆಸುತ್ತಿದೆ. ಮುಖ್ಯಮಂತ್ರಿ ಅವರಿಗೆ ರೈತರಿಗಿಂತ ರಿಯಲ್ ಎಸ್ಟೇಟ್ಗೆ ಹೆಚ್ಚಿನ ಆದ್ಯತೆ ಇದೆ. ಡಿ.ಕೆ. ಶಿವಕುಮಾರ್ ಅವರು ನೀರಾವರಿ ಸಚಿವರಾಗಿದ್ದ ಸಂದರ್ಭದಲ್ಲಿ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ದುರಸ್ತಿಗೆ 24 ತಿಂಗಳು ತೆಗೆದುಕೊಂಡ ಪರಿಣಾಮ ರೈತರು ಎರಡನೇ ಬೆಳೆ ಬೆಳೆಯಲು ಸಾಧ್ಯವಾಗಲಿಲ್ಲ. ಇದೀಗ ಸಿಎಂ ಆದ 24 ಗಂಟೆಗಳಲ್ಲೇ ಬಿಡದಿ ಟೌನ್ಶಿಪ್ಗೆ ಸಂಬಂಧಿಸಿದ ಆದೇಶ ಹೊರಡಿಸಿದ್ದಾರೆ ಎಂದು ಅವರು ದೂರಿದರು.
ಬಿಡದಿ ಟೌನ್ಶಿಪ್ ಯೋಜನೆಯಿಂದ ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಮತ್ತು ಮಹಿಳೆಯರು ಪೊರಕೆ ಹಿಡಿದು ಪ್ರತಿಭಟಿಸುವ ಸ್ಥಿತಿ ನಿರ್ಮಾಣವಾಗಿದೆ. ರೈತರೊಂದಿಗೆ ಚೆಲ್ಲಾಟ ಆಡದೇ, ರೈತರ ಪರವಾದ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬಿಡದಿ ಟೌನ್ಶಿಪ್ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರು ಹಾಗೂ ವಿವಿಧ ಸಂಘಟನೆಗಳ ಮುಖಂಡರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ರೈತರ ಮೇಲಿನ ಸರ್ಕಾರದ ದಬ್ಬಾಳಿಕೆಯನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಜುಲೈ 17ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಶಾಸಕರು, ಸಂಸದರು, ಮಾಜಿ ಶಾಸಕರು ಹಾಗೂ ಮಾಜಿ ಸಂಸದರು ಬೆಳಗ್ಗೆಯಿಂದ ಸಂಜೆವರೆಗೆ ಧರಣಿ ನಡೆಸಲಿದ್ದೇವೆ. ರೈತರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವುದು ಹಾಗೂ ಬಿಡದಿ ಟೌನ್ಶಿಪ್ ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಲಾಗುವುದು ಎಂದು ವಿಜಯೇಂದ್ರ ತಿಳಿಸಿದರು.
ನಾನು ಹುಟ್ಟು ರೈತನ ಮಗ, ರೈತನ ಶ್ರಮ ಮತ್ತು ಅವರ ಬದುಕಿನ ಬಗ್ಗೆ ನನಗೆ ವೈಯಕ್ತಿಕ ಅನುಭವವಿದೆ.
— DK Shivakumar (@DKShivakumar) July 15, 2026
ಮೊನ್ನೆ ಬಿಡದಿಯಲ್ಲಿ ನಡೆದ ಘಟನೆಯಿಂದ ಮನಸ್ಸಿಗೆ ನೋವಾಗಿದೆ. ರಾಜಕೀಯ ಪ್ರೇರಿತ ಕುಮ್ಮಕ್ಕಿನಿಂದ ಅಧಿಕಾರಿಗಳಿಗೆ ತೊಂದರೆ ನೀಡಿದ್ದಾರೆ. ರೈತರನ್ನು ತಪ್ಪು ದಾರಿಗೆ ಎಳೆಯುವ ಸಂಚು ನಡೆಯುತ್ತಿದೆ. ಯಾರ ಮನಸ್ಸಿಗೂ ನೋವುಂಟು ಮಾಡುವುದು ನನಗೆ… pic.twitter.com/42Jdq1kWLP
ಬರಗಾಲ ನಿರ್ವಹಣೆ: ಸರ್ಕಾರ ಸಂಪೂರ್ಣ ವಿಫಲ
ಬರಗಾಲದ ಕುರಿತು ಮುಖ್ಯಮಂತ್ರಿಗಳು ಪ್ರಧಾನಮಂತ್ರಿಗೆ ಪತ್ರ ಬರೆದು ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇದೆ ಹಾಗೂ ಕೇಂದ್ರ ಸರ್ಕಾರ ಅಧಿಕಾರಿಗಳ ತಂಡವನ್ನು ರಾಜ್ಯಕ್ಕೆ ಕಳುಹಿಸಬೇಕು ಎಂದು ಮನವಿ ಮಾಡಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿಯೂ ಮುಖ್ಯಮಂತ್ರಿ ಹಾಗೂ ಸಚಿವರು ಜಿಲ್ಲೆಗಳ ಪ್ರವಾಸ ಕೈಗೊಳ್ಳದಿರುವುದು ಆಶ್ಚರ್ಯಕರವಾಗಿದೆ. ಕಾಂಗ್ರೆಸ್ ಸರ್ಕಾರ ಬರ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಅವರು ಟೀಕಿಸಿದರು.
ರಾಜ್ಯಕ್ಕೆ ಕೂಡಲೇ ಕೃಷಿ ಸಚಿವರನ್ನು ನೇಮಕ ಮಾಡಬೇಕು. ಬರಗಾಲದ ಸಂದರ್ಭದಲ್ಲಿ ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ ವಿಜಯೇಂದ್ರ, ಆಗಸ್ಟ್ 6ರಿಂದ ಆರಂಭವಾಗುವ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ರೈತ ವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸಲಿವೆ ಎಂದರು.














Click it and Unblock the Notifications