ಜೂನ್ 5ರಂದು ಸರ್ವಪಕ್ಷಗಳ ಸಭೆ ಕರೆದ ಡಿಸಿಎಂ ಡಿಕೆಶಿ!
ಬೆಂಗಳೂರು, ಜೂನ್ 02; ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತ ಪಡೆದು ಸರ್ಕಾರ ರಚನೆ ಮಾಡಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಸರ್ಕಾರ ಮುನ್ನಡೆಸುತ್ತಿದ್ದಾರೆ. ವಿರೋಧ ಪಕ್ಷಗಳು ಹೊಸ ಸರ್ಕಾರಕ್ಕೆ ಹಲವು ಸಲಹೆಗಳನ್ನು ನೀಡುತ್ತಿವೆ.
ರಾಜ್ಯದ ರಾಜಧಾನಿ ಬೆಂಗಳೂರು ನಗರ ವಿಶ್ವಮಟ್ಟದಲ್ಲಿ ಗಮನ ಸೆಳೆದಿದೆ. ಇಲ್ಲಿ ಸಮಸ್ಯೆಗಳೂ ಸಹ ಸಾಕಷ್ಟಿವೆ. ಈ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರಕ್ಕೆ ಇತರ ಪಕ್ಷಗಳ ಸಹಾಯ ಸಹ ಬೇಕಾಗುತ್ತದೆ. ಸರ್ಕಾರದ ನಡೆಗೆ ಟೀಕೆ ಮಾಡುವುದು ಬಿಟ್ಟು ನಗರದ ಅಭಿವೃದ್ಧಿಗೆ ವಿಪಕ್ಷಗಳು ಸಲಹೆ ನೀಡಬಹುದು.

ಇದಕ್ಕಾಗಿ ಉಪ ಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ. ಕೆ. ಶಿವಕುಮಾರ್ ಜೂನ್ 5ರ ಸೋಮವಾರ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಬೆಂಗಳೂರು ನಗರದ ಅಭಿವೃದ್ಧಿ ಕುರಿತು ವಿರೋಧ ಪಕ್ಷಗಳ ಸಲಹೆಗಳನ್ನು ಪಡೆಯಲು ಈ ಸಭೆಯನ್ನು ಕರೆಯಲಾಗಿದೆ. ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ.
ಅನುಭವಿ ನಾಯಕರು ಇದ್ದಾರೆ; ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ನಲ್ಲಿ ಅನುಭವಿ ನಾಯಕರು ಇದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಮಾಜಿ ಸಚಿವ ಆರ್. ಅಶೋಕ, ಡಾ. ಸಿ. ಎನ್. ಅಶ್ವಥ್ ನಾರಾಯಣ ಬೆಂಗಳೂರು ನಗರದ ಶಾಸಕರು ನಗರದ ಬಗ್ಗೆ ಅಪಾರವಾದ ಜ್ಞಾನ ಹೊಂದಿದ್ದಾರೆ. ನಗರದ ಸಮಸ್ಯೆಗಳ ಕುರಿತು ಅವರಿಗೆ ಚೆನ್ನಾಗಿ ಅರಿವಿದೆ.

ಬೆಂಗಳೂರು ನಗರದಲ್ಲಿ ಜೆಡಿಎಸ್ನ ಯಾವುದೇ ಶಾಸಕರು ಗೆದ್ದಿಲ್ಲ. ಆದರೆ ಎಚ್. ಡಿ. ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿಗಳು. ನಗರದ ಸಮಸ್ಯೆಗಳು ಅವರಿಗೆ ಚೆನ್ನಾಗಿ ಗೊತ್ತು, ಅಭಿವೃದ್ಧಿ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಆದ್ದರಿಂದ ಡಿ. ಕೆ. ಶಿವಕುಮಾರ್ ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಮೇ 20ರಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಬಳಿಕ ಸುರಿದ ಭಾರೀ ಮಳೆ ಬೆಂಗಳೂರು ನಗರದಲ್ಲಿ ಅವಾಂತರ ಸೃಷ್ಟಿ ಮಾಡಿತ್ತು. ಕೆ. ಆರ್. ವೃತ್ತದ ಅಂಡರ್ ಪಾಸ್ನಲ್ಲಿ ಮಳೆ ನೀರಿನಲ್ಲಿ ಕಾರು ಸಿಲುಕಿ ಇನ್ಫೋಸಿಸ್ ಉದ್ಯೋಗಿ ಮೃತಪಟ್ಟಿದ್ದರು. ಈ ಘಟನೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು.
ಆಗ ಟ್ವೀಟ್ ಮಾಡಿದ್ದ ಎಚ್. ಡಿ. ಕುಮಾರಸ್ವಾಮಿ, "ಬೆಂಗಳೂರು ನಗರದಲ್ಲಿ ಇಂದು ಸುರಿದ ಭಾರೀ ಮಳೆಯಿಂದ ಕೆ. ಆರ್. ವೃತ್ತದ ಅಂಡರ್ ಪಾಸ್ನಲ್ಲಿ ಮಳೆ ನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ" ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ನೈಋತ್ಯ ಮುಂಗಾರು ಮಳೆ ಆರಂಭವಾಗುತ್ತಿದೆ. ಮಳೆಗಾಲದಲ್ಲಿ ಬೆಂಗಳೂರು ನಗರದಲ್ಲಿ ವಿವಿಧ ಸಮಸ್ಯೆಗಳು ಎದುರಾಗುತ್ತವೆ. ಡಿ. ಕೆ. ಶಿವಕುಮಾರ್ ಈಗಾಗಲೇ ಮುನ್ನೆಚ್ಚರಿಕೆ ವಹಿಸುವಂತೆ ಆಯುಕ್ತರು, ಜಂಟಿ ಆಯುಕ್ತರು ಸೇರಿದಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ನಿವಾಸಿಗಳು ಈ ಸಮಯದಲ್ಲಿ ಎಚ್ಚರಿಕೆಯಿಂದ ಓಡಾಡುವಂತೆ ನನ್ನ ಮನವಿ ಎಂದು ಹೇಳಿದ್ದಾರೆ.
ಡಿ. ಕೆ. ಶಿವಕುಮಾರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ 'ಬೆಟರ್ ಬೆಂಗಳೂರು' ನಿರ್ಮಾಣಕ್ಕಾಗಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸೂಕ್ತ ಸಲಹೆ, ಸೂಚನೆಗಳನ್ನು ನೀಡಿದ್ದಾರೆ. ಬೆಂಗಳೂರಿನ ವೈಭವವನ್ನು ಮರಳಿ ತರಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.












Click it and Unblock the Notifications