ಕಾಂಗ್ರೆಸ್ ಹಿರಿಯ ನಾಯಕ ಎಂ ವಿ ರಾಜಶೇಖರನ್ ನಿಧನಕ್ಕೆ ಡಿಕೆ ಶಿವಕುಮಾರ್ ಸಂತಾಪ
ಬೆಂಗಳೂರು, ಏಪ್ರಿಲ್ 13: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಎಂ ವಿ ರಾಜಶೇಖರನ್ ಇಂದು ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
''ಎಂ ವಿ ರಾಜಶೇಖರನ್ ಅವರು ಕಾಂಗ್ರೆಸ್ ಪಕ್ಷವನ್ನು ಕಟ್ಟಿದ ನಾಯಕರಲ್ಲಿ ಒಬ್ಬರು. ಪಕ್ಷಕ್ಕೆ ಅವರ ಕೊಡುಗೆ ಅಪಾರ. ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ ಹಾಗೂ ರಾಜ್ಯ ಸಭೆಯ ಸದಸ್ಯರಾಗಿದ್ದ ಅವರ ಪಕ್ಷನಿಷ್ಠೆ ಆದರ್ಶನೀಯ. ಅವರು ಪಕ್ಷದ ಶಿಸ್ತಿನ ಸಿಪಾಯಿ. ಜೀವನದಲ್ಲೂ ಬಹಳ ಶಿಸ್ತು ಬದ್ಧರಾಗಿದ್ದರು. ಪ್ರತಿಯೊಬ್ಬರ ಜತೆಗೂ ಸ್ನೇಹದಿಂದ ಇರುತ್ತಿದ್ದರು. ಅಜಾತಶತ್ರುವಾಗಿ ಬದುಕಿದರು'' ಎಂದು ಶಿವಕುಮಾರ್ ಸ್ಮರಿಸಿದ್ದಾರೆ.
ಕೇಂದ್ರದ ಮಾಜಿ ಸಚಿವ ಎಂ ವಿ ರಾಜಶೇಖರನ್ ನಿಧನ: ಮುಖ್ಯಮಂತ್ರಿ ಸಂತಾಪ
''ಕೆಲ ದಿನಗಳ ಹಿಂದಷ್ಟೇ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದೆ. ಅವರು ಇಂದು ನಮ್ಮನ್ನು ಅಗಲಿದ್ದಾರೆ ಎಂಬ ಸುದ್ದಿ ಕೇಳಿ ಮನಸ್ಸಿಗೆ ಬಹಳ ಬೇಸರವಾಗಿದೆ. ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಬೆಂಬಲಿಗರಿಗೆ ಆ ಭಗವಂತ ನೀಡಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.'' ಎಂದು ಡಿ.ಕೆ. ಶಿವಕುಮಾರ್ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
''ಎಂ ವಿ ರಾಜಶೇಖರನ್ ಅವರ ನಿಧನದಿಂದ ರಾಜ್ಯ ಹಾಗೂ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ. ಅಜಾತಶತ್ರು ಎಂದೇ ಕರೆಸಿಕೊಳ್ಳುವ ಅವರು ರಾಜ್ಯಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಮೈಸೂರು ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ವಿಧಾನಪರಿಷತ್, ರಾಜ್ಯಸಭೆಗಳಲ್ಲಿ ಸೇವೆ ಸಲ್ಲಿಸಿದ್ದ ಅವರು, ಕೇಂದ್ರದ ಯೋಜನೆ ಮತ್ತು ಅಂಕಿಅಂಶ ಖಾತೆಯ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸಿ ಉತ್ತಮ ಹೆಸರು ಗಳಿಸಿದ್ದರು. ಅವರು ಇನ್ನಿಲ್ಲ ಎಂಬ ವಿಷಯ ವೈಯುಕ್ತಿಕವಾಗಿ ಬಹಳ ದುಃಖವನ್ನುಂಟು ಮಾಡಿದೆ. ಕುಟುಂಬಕ್ಕೆ ನೋವು ತಡೆಯುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.'' ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಸಂತಾಪ ಸೂಚಿಸಿದ್ದಾರೆ.