ಚನ್ನಪಟ್ಟಣ ಉಪಚುನಾವಣೆಯಲ್ಲಿ ಮಗಳ ಸ್ಪರ್ಧೆ; ಸ್ಪಷ್ಟನೆ ಕೊಟ್ಟ ಡಿ.ಕೆ. ಶಿವಕುಮಾರ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸದ್ಯ ಕರ್ನಾಟಕ ರಾಜಕೀಯ ವಲಯದಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಬಿಜೆಪಿ ಮೈತ್ರಿಗೆ ಇದು ಪ್ರತಿಷ್ಠೆಯ ಕಣವಾಗಿದೆ.
ಪ್ರತಿಷ್ಠಿತ ಸ್ಪರ್ಧೆಗೆ ಯಾರು ಕಣಕ್ಕಿಳಿಯುತ್ತಾರೆ ಎನ್ನುವ ಕುತೂಹಲ ಹೆಚ್ಚಾಗುತ್ತಿದೆ. ಹಲವು ಅಚ್ಚರಿಯ ಹೆಸರುಗಳು ಕೂಡ ಚನ್ನಪಟ್ಟಣ ಕ್ಷೇತ್ರದಲ್ಲಿ ಕೇಳಿಬರುತ್ತಿವೆ. ಮೊದಲು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ವಿರುದ್ಧ ಸೋತ ಡಿ.ಕೆ. ಸುರೇಶ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು.

ಆದರೆ ಈ ಸುದ್ದಿಗಳನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಳ್ಳಿಹಾಕಿದ್ದರು. ನನ್ನ ತಮ್ಮ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ, ಜನ ಅವರಿಗೆ ವಿಶ್ರಾಂತಿ ನೀಡಿದ್ದಾರೆ ಎಂದು ಹೇಳಿದ್ದರು.
ಡಿಕೆ ಶಿವಕುಮಾರ್ ಮಗಳ ಹೆಸರು ಮುನ್ನಲೆಗೆ
ಡಿಕೆ ಸುರೇಶ್ ಅವರ ಸ್ಪರ್ಧೆಯನ್ನು ತಳ್ಳಿ ಹಾಕಿದ ನಂತರ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಅವರು ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಚನ್ನಪಟ್ಟಣವನ್ನು ಪಡೆಯಲು ಡಿ.ಕೆ. ಶಿವಕುಮಾರ್ ತಮ್ಮ ಕುಟುಂಬದವರನ್ನೇ ಕಣಕ್ಕಿಳಿಸುತ್ತಾರೆ ಎನ್ನಲಾಗಿತ್ತು.
ಈಗ ಸ್ವತಃ ಡಿಕೆ ಶಿವಕುಮಾರ್ ಅವರು ಎಲ್ಲಾ ಊಹಾಪೋಹಗಳಿಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನಮ್ಮ ಕುಟುಂಬದಿಂದ ಇನ್ಯಾರಿಗೂ ಚುನಾವಣಾ ರಾಜಕೀಯಕ್ಕೆ ಬರಲು ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ ಎನ್ನುವ ಮೂಲಕ ಎಲ್ಲದಕ್ಕೂ ತೆರೆ ಎಳೆದಿದ್ದಾರೆ.
ಪ್ರತಿಷ್ಠೆಯ ಕಣವಾದ ಚನ್ನಪಟ್ಟಣ
ಚನ್ನಪಟ್ಟಣ ಈಗ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಪ್ರತಿಷ್ಠೆಯ ಕಣವಾಗಿದೆ. ಎಚ್ಡಿ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಲ್ಲಿ ನಿಂತು ಸಂಸದರಾದ ಬಳಿಕ, ಚನ್ನಪಟ್ಟಣದಲ್ಲಿ ವಿಧಾನಸಭಾ ಉಪಚುನಾವಣೆ ನಡೆಯಲಿದೆ.
ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಹೆಸರು ಕೇಳಿಬರುತ್ತಿದೆ. ತಪ್ಪಿದಲ್ಲಿ ಎಚ್ಡಿ ಕುಮಾರಸ್ವಾಮಿ ಮಗ ನಿಖಿಲ್ ಕುಮಾರಸ್ವಾಮಿ ಕೂಡ ಚನ್ನಪಟ್ಟಣದಿಂದ ಸ್ಪರ್ಧೆ ಮಾಡುವ ಅವಕಾಶ ಇದೆ. ಸಸಿಪಿ ಯೋಗೇಶ್ವರ್ ಮಗಳು ನಿಶಾ ಯೋಗೇಶ್ವರ್ ಕಾಂಗ್ರೆಸ್ನಲ್ಲಿದ್ದು, ಯೋಗೇಶ್ವರ್ ಎದುರಾಳಿಯಾಗಿ ಕಾಂಗ್ರೆಸ್ ನಿಶಾರನ್ನು ಕಣಕ್ಕಿಳಿಸುವ ಸಾಧ್ಯತೆ ಬಗ್ಗೆ ಕೂಡ ಚಿಂತಿಸಿದೆ.












Click it and Unblock the Notifications