ಉಮ್ಮನ್ ಚಾಂಡಿ ನಿಧನಕ್ಕೆ ಸಂತಾಪ: ಎಚ್ಡಿಕೆ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ
ಬೆಂಗಳೂರು, ಜುಲೈ 18: ದೇಶದ ಅತ್ಯಂತ ಹಿರಿಯ ಹಾಗೂ ಅನುಭವಿ ರಾಜಕಾರಣಿ ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ, ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದರು.
ಕೇಂದ್ರ ಬಿಜೆಪಿ ವಿರುದ್ಧ ಬೆಂಗಳೂರಿನ ತಾಜ್ವೆಸ್ಟೆಂಡ್ನಲ್ಲಿ ನಡೆಯುತ್ತಿರುವ ವಿರೋಧ ಪಕ್ಷಗಳ ಸಭೆ ಸಂದರ್ಭದಲ್ಲಿ ಸುದ್ದಿಗಾರರಿಗೆ ಉತ್ತರಿಸಿದ ಅವರು, ವಿದ್ಯಾರ್ಥಿಗಳ ನಾಯಕರಿಂದ ಹಿಡಿದು ಮುಖ್ಯಮಂತ್ರಿ ಸ್ಥಾನ ಅಲಂಕರಿಸುವವರಿಗೆ ಬೆಳೆದ ನಾಯಕರು ಚಾಂಡಿ ಅವರು.

ರಾಜಕೀಯ ಜೀವನದಲ್ಲಿ ಅವರು ಒಟ್ಟು 10 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಅನೇಕ ರಾಜ್ಯಗಳ ಉಸ್ತುವಾರಿ ಜವಾಬ್ದಾರಿ ನಿಭಾಯಿಸಿದ್ದಾರೆ. ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು.
ನಮ್ಮ ಕಾಂಗ್ರೆಸ್ ನಾಯಕರುಗಳು ಉಮ್ಮೆನ್ ಚಾಂಡಿ ಅವರ ಅಂತಿಮ ದರ್ಶನ ಮಾಡಲಿದ್ಆರೆ. ಇಂದಿನ ವಿರೋಧ ಪಕ್ಷಗಳ ಒಕ್ಕೂಟ ಸಭೆಯಲ್ಲಿ ಕೇರಳದ ಅನೇಕ ನಾಯಕರು ಭಾಗವಹಿಸಲು ಆಗಮಿಸಿದ್ದು, ರಾಹುಲ್ ಗಾಂಧಿ ಅವರು ಕೂಡ ಕೇರಳದ ಪ್ರತಿನಿಧಿಯಾಗಿದ್ದಾರೆ ಎಂದು ತಿಳಿಸಿದರು.
ಎಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ
ವಿರೋಧ ಪಕ್ಷಗಳ ಸಭೆಗೆ ಅಧಿಕಾರಿಗಳ ಬಳಕೆ ಕುರಿತು ಕುಮಾರಸ್ವಾಮಿ ಅವರ ಟೀಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಕುಮಾರಸ್ವಾಮಿ ಅವರ ಟೀಕೆಗೆ ಉತ್ತರ ನೀಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ನಾಯಕರು ರಾಜ್ಯಕ್ಕೆ ಭೇಟಿ ನೀಡಿದಾಗ ಅವರನ್ನು ರಾಜ್ಯದ ಅತಿಥಿ ಎಂದು ಪರಿಗಣಿಸಲಾಗುವುದು ಎಂದಷ್ಟೇ ಹೇಳಿದರು.

ಶಿಷ್ಟಾಚಾರದ ಭಾಗವಾಗಿ ಯಾರನ್ನು ನಿಯೋಜಿಸಬಹುದೊ ಅವರನ್ನು ನಿಯೋಜಿಸಿದ್ದೇವೆ. ಕೆಲವು ಗಣ್ಯರನ್ನು ನಾನು ಹಾಗು ಕೆಲ ಸಚಿವರು ಸ್ವಾಗತಿಸಿದ್ದೇವೆ. ಮತ್ತೆ ಕೆಲವು ನಾಯಕರನ್ನು ಅಧಿಕಾರಿಗಳು ಸ್ವಾಗತಿಸಿದ್ದಾರೆ. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿ. ಅವರು NDA ಮೈತ್ರಿಕೂಟದ ಆಹ್ವಾನಕ್ಕೆ ಕಾಯುತ್ತಿರುವುದಾಗಿ ಹೇಳಿದ್ದಾರೆ. ಅವರಿಗೆ ಸುದ್ದಿಯಲ್ಲಿ ಇರಲು ವಿಷಯ ಬೇಕು, ಅದಕ್ಕೆ ಟೀಕೆ ಮಾಡುತ್ತಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಎಚ್ಡಿ ಕುಮಾರಸ್ವಾಮಿ ಅವರಿ ತಿರುಗೇಟು ನೀಡಿದರು.
ಸಿಎಂ ಸಿದ್ದರಾಮಯ್ಯ ಸೇರಿ ಹಲವರ ಸಂತಾಪ
ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ (73) ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅವರನ್ನು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಬೆಳಗಿನ ಜಾವ ನಿಧನರಾದರು. ಅವರ ನಿಧನಕ್ಕೆ ಕರ್ನಾಟಕ, ಕೇರಳ ಸೇರಿದಂತೆ ದೇಶದ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದಾರೆ.
ರಾಜ್ಯದ ಸಿಎಂ ಸಿದ್ದರಾಮಯ್ಯ ಅವರು ಅಗಲಿದ ಜೀವಕ್ಕೆ ಸಂತಾಪ ವ್ಯಕ್ತಪಡಿಸಿ, ಹಿರಿಯ ಮುತ್ಸದ್ದಿಯಾದ ಮಾಜಿ ಸಿಎಂ ಉಮ್ಮನ್ ಚಾಂಡಿ ಅವರು ನನಗೆ ಅತ್ಯಂತ ಆತ್ಮೀಯರಾಗಿದ್ದರು. ಅವರ ನೀಧನದ ಸುದ್ದಿ ತಿಳಿದು ನನಗೆ ಆಘಾತವಾಯಿತು. ಕೇರಳ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನಕ್ಕೇರಿಸಲು ಶ್ರಮಿಸಿದವರು. ಕೇರಳದಲ್ಲಿ ಎರಡು ಸಲ ಸಿಎಂ ಆಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದು ಅವರು ಹೇಳಿದರು.












Click it and Unblock the Notifications