ಬೆಂಗಳೂರು ಜನತೆಗೆ ಗುಡ್ ನ್ಯೂಸ್: 2 ಕೋಟಿ ನಾಗರೀಕರಿಗೆ ಕುಡಿಯುವ ನೀರು ಪೂರೈಕೆ
ಬೆಂಗಳೂರು, ಜೂನ್19: ಬೆಂಗಳೂರಿನ 2 ಕೋಟಿ ನಾಗರೀಕರಿಗೆ ಕುಡಿಯುವ ನೀರು ಪೂರೈಸಲು ಯೋಜನೆ ರೂಪಿಸುತ್ತಿದ್ದೇವೆ. ರಾಮ್ ಪ್ರಸಾತ್ ಮನೋಹರ್ ಅವರ ನೇತೃತ್ವದಲ್ಲಿ ಮಂಡಳಿಯು ಹೊಸ ಆವಿಷ್ಕಾರಿ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದರು.
ನಾವು ನೀರನ್ನು ಉಳಿಸಲೇಬೇಕು. ಈ ನೀರನ್ನು ಉಳಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಬಿಡ್ಬ್ಲೂಎಸ್ಎಸ್ ಬಿ ವತಿಯಿಂದ ಒಂದು ವಾರಗಳ ಕಾಲ ಪ್ರತಿಜ್ಞಾ ಸ್ವೀಕಾರ ಅಭಿಯಾನ ಮಾಡಿದ್ದೆವು. ಈ ಅಭಿಯಾನದಲ್ಲಿ 5,33,642 ಮಂದಿ ಪ್ರತಿಜ್ಞೆ ಸ್ವೀಕರಿಸಿದ್ದರು. ಆಮೂಲಕ ಇದು ಗಿನ್ನಿಸ್ ದಾಖಲೆ ಬರೆದಿದೆ. ದೆಹಲಿ ಸೇರಿದಂತೆ ಬೇರೆ ನಗರಗಳಲ್ಲಿ ಕುಡಿಯುವ ನೀರಿನ ಸಂಪರ್ಕವೇ ಬೇರೆ, ದಿನಬಳಕೆ ಉದ್ದೇಶಕ್ಕೆ ಬಳಸುವ ನೀರಿನ ಸಂಪರ್ಕವೇ ಬೇರೆ ಇದೆ. ಆದರೆ ನಮ್ಮಲ್ಲಿ ಕುಡಿಯಲು, ವಾಹನ ತೊಳೆಯಲು, ಗಿಡಗಳಿಗೆ ಹಾಕಲು ಎಲ್ಲದಕ್ಕೂ ಕುಡಿಯುವ ನೀರನ್ನೇ ಬಳಸಲಾಗುತ್ತಿದೆ. ಸುಮಾರು 35% ನಷ್ಟು ಜನ ಕುಡಿಯುವ ನೀರಿನ ಬಿಲ್ ಕಟ್ಟುತ್ತಿಲ್ಲ. ಆದರೂ ಮಂಡಳಿಯು ಕೆಲಸ ಮಾಡುತ್ತಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ ಬಿ) ವತಿಯಿಂದ ಕಳೆದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣೆ ಅಭಿಯಾನ ಸಪ್ತಾಹದಲ್ಲಿ 5,33,642 ಪ್ರತಿಜ್ಞೆ ಸ್ವೀಕರಿಸಿ, ಜಲ ಸಂರಕ್ಷಣೆಯಲ್ಲಿ ಗಿನ್ನಿಸ್ ವಿಶ್ವದಾಖಲೆ ಬರೆದ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಅಧಿಕೃತ ಪ್ರಮಾಣ ಪತ್ರ ಸ್ವೀಕರಿಸಿದರು. ಬದುಕಿನಲ್ಲಿ ನಾವೇನಾದರೂ ಸಾಧನೆ ಮಾಡಬೇಕು. ಬೆಂಗಳೂರು ಯೋಜಿತ ನಗರವಲ್ಲ. ಇಲ್ಲಿನ ಜನಸಂಖ್ಯೆ ಬಹಳ ದೊಡ್ಡದಾಗಿ ಬೆಳೆದಿದೆ. ಹೀಗಾಗಿ ಇಲ್ಲಿ ಗ್ರೇಟರ್ ಬೆಂಗಳೂರನ್ನು ಘೋಷಣೆ ಮಾಡಿ, ಮತ್ತಷ್ಟು ಪ್ರದೇಶವನ್ನು ಮುಂದಿನ ದಿನಗಳಲ್ಲಿ ಬೆಂಗಳೂರಿನ ವ್ಯಾಪ್ತಿಗೆ ಸೇರಿಸಿಕೊಳ್ಳಲಾಗುತ್ತಿದೆ. ಇದರ ವ್ಯಾಪ್ತಿಯಲ್ಲಿ ಎಷ್ಟು ಪಾಲಿಕೆ ರಚಿಸಬೇಕು ಎಂದು ಚರ್ಚೆ ಮಾಡುತ್ತಿದ್ದೇವೆ ಎಂದರು.
ಬೆಂಗಳೂರಿನ ಒಳಗೆ 1.40 ಕೋಟಿ ಜನಸಂಖ್ಯೆ ಇದ್ದು, ನಗರದ ಹೊರಭಾಗದಲ್ಲಿ ಆನೇಕಲ್ ಹಾಗೂ ಇತರೆ ಭಾಗದಲ್ಲಿ 50 ಲಕ್ಷ ಜನಸಂಖ್ಯೆ ಇದೆ. ಬೆಂಗಳೂರಿಗೆ ಹೊಸದಾಗಿ ಸೇರಿದ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುತ್ತಿದ್ದೇವೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದಂತೆ ಬಸ್, ರೈಲು ಸೇರಿದಂತೆ ಇತರೆ ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ಕಳೆದ 10 ವರ್ಷಗಳಿಂದ ನೀರಿನ ದರ ಏರಿಕೆ ಮಾಡಿರಲಿಲ್ಲ. ಇದರಿಂದ ಮಂಡಳಿಯು ವಾರ್ಷಿಕವಾಗಿ 400-500 ಕೋಟಿ ರೂ. ನಷ್ಟ ಅನುಭವಿಸುವಂತಾಗಿದೆ. ದಾಖಲೆ ಪ್ರಕಾರ ಒಂದು ಸಾವಿರ ಕೋಟಿವರೆಗೂ ನಷ್ಟವಾಗಿರುವ ಬಗ್ಗೆ ಮಾಹಿತಿ ಇದೆ ಎಂದು ಹೇಳಿದರು.
ನಾನು ಇದರ ಜವಾಬ್ದಾರಿ ವಹಿಸಿಕೊಂಡ ಬಳಿಕ ನೀರಿನ ದರ ಏರಿಕೆಗೆ ಅನುಮತಿ ನೀಡಿದ್ದೇನೆ. ಟೀಕೆಗಳು ವ್ಯಕ್ತವಾಗುವುದು ಸಹಜ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಟೀಕೆ ಮಾಡುವವರು ಮಾಡುತ್ತಿರಲಿ ಎಂದು ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ದಿಟ್ಟ ತೀರ್ಮಾನ ಮಾಡಿದೆ. ಈ ದರ ಪರಿಷ್ಕರಣೆಯಿಂದ ವಾರ್ಷಿಕವಾಗಿ 500 ಕೋಟಿಯಷ್ಟು ಕಡಿಮೆ ಮಾಡುವ ಪ್ರಯತ್ನ ಮಾಡಲಾಗಿದೆ. ನಷ್ಟವನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಾಗದಿದ್ದರೂ ಅದನ್ನು ನಿಯಂತ್ರಿಸುವ ಪ್ರಯತ್ನ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸಾರಿಗೆ ಇಲಾಖೆ ಮಾದರಿಯಲ್ಲಿ ದರ ಪರಿಷ್ಕರಣೆ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.
ಮಂಡಳಿ ಸಿಬ್ಬಂದಿ ಬಹಳ ಪರಿಶ್ರಮದಿಂದ ಕೆಲಸ ಮಾಡುತ್ತಿದ್ದಾರೆ. ಕಾವೇರಿ 5ನೇ ಹಂತ ಕುಡಿಯುವ ನೀರಿನ ಯೋಜನೆ ಜಾರಿಗೆ ಸಾಕಷ್ಟು ಅಡಚಣೆಗಳು ಎದುರಾಗಿದ್ದವು. ಅದೆಲ್ಲವನ್ನು ನಿವಾರಿಸಿ ಜಾರಿ ಮಾಡಲಾಗಿದೆ. ಹೊಸ ಸಂಪರ್ಕ ನೀಡಲು ಇದ್ದ ಸಮಸ್ಯೆಗಳನ್ನು ನಿವಾರಣೆ ಮಾಡಲಾಗಿದೆ. ಸಂಚಾರಿ ಕಾವೇರಿ ಯೋಜನೆ ಮೂಲಕ ಜನರಿಗೆ ಕಡಿಮೆ ಬೆಲೆಗೆ ಪರಿಶುದ್ಧವಾದ ನೀರನ್ನು ನೀಡಲಾಗುತ್ತಿದೆ. ಇನ್ನು ಬೆಂಗಳೂರಿನಲ್ಲಿ ಒಳಚರಂಡಿ ವಿಚಾರವೂ ಒಂದು ಸವಾಲಾಗಿದೆ. ಕೊಳಚೆ ನೀರನ್ನು ಉತ್ತಮ ಕೆರೆಗಳಿಗೆ ಬಿಡಲಾಗುತ್ತಿದೆ. ಇದನ್ನು ಸಂಸ್ಕರಿಸಿ ಮರುಬಳಕೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು.












Click it and Unblock the Notifications