ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಮೇಲೆ ಕೊಲೆ ಯತ್ನ ಕೇಸ್, ಕಾರಣ ಬಿಚ್ಚಿಟ್ಟ ಡಿಕೆಶಿ!
ಬೆಂಗಳೂರು, ಮಾ. 10: ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಅವರ ಮೇಲೆ ದಾಖಲಾಗಿರುವ ಕೊಲೆ ಯತ್ನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶಾಸಕ ಸಂಗಮೇಶ್ ಅವರ ಮೇಲೆ ದಾಖಲಾಗಿರುವ ಪ್ರಕರಣಗಳಿಗೆ ಕಾರಣವನ್ನು ವಿವರಿಸಿದ್ದು, ಅದರ ಹಿನ್ನೆಲೆಯಲ್ಲಿ ಮಾರ್ಚ್ 13ರಂದು 'ಶಿವಮೊಗ್ಗ ಚಲೋ' ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೊತೆಗೆ ಡಿಕೆಶಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಕೊರೊನಾ ಹಾಗೂ ನಂತರದ ಸಮಯದಲ್ಲಿ ಬಿಜೆಪಿ ನಾಯಕರು ಶಾಂತಿಭಂಗದ ಹೇಳಿಕೆ ಕೊಟ್ಟಿದ್ದರೂ ಈ ಸರಕಾರ ಯಾರ ಮೇಲೂ ಕೇಸು ದಾಖಲಿಸಲಿಲ್ಲ. ಆಗಲೂ ಅಧಿಕಾರ ದುರುಪಯೋಗ ಮಾಡಿಕೊಂಡು ಸರ್ಕಾರದ ಪದಾರ್ಥವನ್ನು ತಮ್ಮ ಪದಾರ್ಥ ಎಂಬಂತೆ ಹಂಚಿದ್ದನ್ನು ನಾವು ಬಯಲು ಮಾಡಿದ್ದೇವು. ಆದರೂ ಕ್ರಮ ಕೈಗೊಳ್ಳಲಿಲ್ಲ ಎಂದು ಇದೇ ಸಂದರ್ಭದಲ್ಲಿ ಆರೋಪಿಸಿದ್ದಾರೆ.
ವಿಧಾನಸಭೆಯಲ್ಲಿ ಶಾಸಕ ಸಂಗಮೇಶ್ ಅಂಗಿ ಬಿಚ್ಚಿದ ಪ್ರಕರಣ ಹಕ್ಕು ಬಾಧ್ಯತಾ ಸಮಿತಿಗೆ
ಆದರೆ ನಮ್ಮ ಶಾಸಕರು, ಮುಖಂಡರು, ಕಾರ್ಯಕರ್ತರ ಮೇಲೆ ನೂರಾರು ಕೇಸ್ ಹಾಕುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಜೊತೆಗೆ ಸಂಗಮೇಶ್ ಅವರ ಮೇಲೆ ದಾಖಲಾಗಿರುವ ಕೊಲೆ ಯತ್ನ ಪ್ರಕರಣದ ಹಿಂದಿನ ಕಾರಣವನ್ನು ಡಿಕೆಶಿ ಬಿಚ್ಚಿಟ್ಟಿದ್ದಾರೆ.
ಆಪರೇಶನ್ ಕಮಲಕ್ಕೆ ಒಪ್ಪದ ಸಂಗಮೇಶ್
ಶಾಸಕ ಸಂಗಮೇಶ್ ಅವರನ್ನು ಬಿಜೆಪಿಗೆ ಸೆಳೆಯಲು ಬಹಳ ಒತ್ತಡ ಹೇರಿದ್ದರು. ಆದರೂ ಇವರು ಆಪರೇಷನ್ ಕಮಲಕ್ಕೆ ಬಲಿಯಾಗಲಿಲ್ಲ ಎಂಬ ಸ್ಫೋಟಕ ಮಾಹಿತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಂಚಿಕೊಂಡಿದ್ದಾರೆ. ಇದೇ ಕಾರಣಕ್ಕೆ ಈ ರೀತಿ ಕಿರುಕುಳ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಬ್ಬ ಕಾಂಗ್ರೆಸ್ ಶಾಸಕ ಇದ್ದಾನೆ ಎಂದು ಪೊಲೀಸರ ಕೈಯಲ್ಲಿ ಎಫ್ಐಆರ್ ಹಾಕಿಸಿ, ತೊಂದರೆ ನೀಡುತ್ತಿದ್ದಾರೆ ಎಂದು ಶಿವಕುಮಾರ್ ಅವರು ಆರೋಪಿಸಿದ್ದಾರೆ.
ಶಾಸಕರು ಅಂಗಿ ಬಿಚ್ಚಿದ್ದಕ್ಕೆ ಕಾರಣ ಕೊಟ್ಟ ಡಿಕೆಶಿ
ತಮಗಾಗುತ್ತಿರುವ ಅನ್ಯಾಯದ ವಿರುದ್ಧ ವಿಧಾನಸಭೆಯಲ್ಲಿ ಮಾತನಾಡಲು ಅವಕಾಶ ಕೊಡಿ ಎಂದು ಕೇಳಿದರೆ ಅವರಿಗೆ ಅವಕಾಶ ನೀಡಲಿಲ್ಲ. ಆಗ ನೋವಿನಿಂದ ನಮ್ಮ ಶಾಸಕ ತಮ್ಮ ಶರ್ಟ್ ಬಿಚ್ಚಿ ಮೈಮೇಲಾಗಿರುವ ಗಾಯ ತೋರಿಸಲು ಮುಂದಾದಾಗ, ಅದನ್ನು ಅಸಭ್ಯ ವರ್ತನೆ ಎಂದು ಹೇಳಿ ಅವರನ್ನು ಒಂದು ವಾರಕ್ಕೂ ಹೆಚ್ಚು ಕಾಲ ವಿಧಾನಸಭೆ ಕಲಾಪದಿಂದ ಅಮಾನತು ಮಾಡಲಾಗಿದೆ. ಆ ಮೂಲಕ ಅವರ ಹಕ್ಕಿಗೆ ಧಕ್ಕೆ ತರಲಾಗಿದೆ. ಈ ಬಗ್ಗೆ ನಾವು ಪ್ರತಿಭಟನೆಯನ್ನೂ ಮಾಡಿದ್ದೇವೆ ಎಂದು ಡಿಕೆಶಿ ಆರೋಪಿಸಿದ್ದಾರೆ.
ಸದನದಲ್ಲಿ ಅಂಗಿ ಬಿಚ್ಚಿ ಕಾಂಗ್ರೆಸ್ ಶಾಸಕ ಸಂಗಮೇಶ್ ಪ್ರತಿಭಟನೆ: ಐಡಿಯಾ ಕೊಟ್ಟಿದ್ದು ಅದೇ ಪಕ್ಷದ ಶಾಸಕ!
ಶಾಸಕರ ಮೇಲೆ ಸುಳ್ಳು ಪ್ರಕರಣ
ಹೀಗಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ನಾವು ನಿರ್ಧರಿಸಿದ್ದೇವೆ. ಈ ಬಗ್ಗೆ ಸದನದಲ್ಲಿ ಹಾಗೂ ಇತರೆ ಕಡೆಗಳಲ್ಲಿ ಚರ್ಚೆ ಮಾಡಿದ್ದೇವೆ. ಈ ಮಧ್ಯೆ ನಮ್ಮ ಪಕ್ಷದ ಶಾಸಕ ಸಂಗಮೇಶ್, ಅವರ ಕುಟುಂಬ ಸದಸ್ಯರು ಹಾಗೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ಹಾಕಲಾಗಿದೆ. ಬಿಜೆಪಿಗೆ ಸೇರದ ಕಾಂಗ್ರೆಸ್ ನಾಯಕರ ಮೇಲೆ ಇಂತಹ ಒತ್ತಡಗಳನ್ನು ಬಿಜೆಪಿ ನಾಯಕರು ಹೇರುತ್ತಿದ್ದಾರೆ ಎಂದು ಸ್ಫೋಟಕ ಮಾಹಿತಿ ಹಂಚಿಕೊಂಡಿದ್ದಾರೆ.
ಅನ್ಯಾಯ ಖಂಡಿಸಿ ಶಿವಮೊಗ್ಗ ಚಲೋ
ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ 13ರಂದು ವಿರೋಧ ಪಕ್ಷ ನಾಯಕರ ಸಮ್ಮುಖದಲ್ಲಿ ಎಲ್ಲ ನಾಯಕರು, ಶಾಸಕರು, ಸಂಸದರು, ಕಾರ್ಯಕರ್ತರು ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ನಾವು ಶಿವಮೊಗ್ಗಕ್ಕೆ ತೆರಳಿ ನಮ್ಮ ಪ್ರತಿಭಟನೆ ನಡೆಸುತ್ತೇವೆ ಎಂದು ಡಿಕೆಶಿ ಇದೇ ಸಂದರ್ಭದಲ್ಲಿ ವಿವರಿಸಿದರು.