ಬೆಂಗಳೂರಿನ ಪಾದಚಾರಿಗಳು, ಬೀದಿ ವ್ಯಾಪಾರಿಗಳಿಗೆ ಡಬಲ್ ಗುಡ್ನ್ಯೂಸ್: ಜುಲೈ 1ರಿಂದ ಹೊಸ ವ್ಯವಸ್ಥೆ
ಬೆಂಗಳೂರು: ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಸಮಗ್ರ ಯೋಜನೆ ರೂಪಿಸಿಕೊಂಡು ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಚಿವ ಕೃಷ್ಣಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಜುಲೈ 1ರಿಂದ "ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ" ಕೈಗೆತ್ತಿಕೊಳ್ಳುವ ಸಂಬಂಧ ಮಂಗಳವಾರ ನಡೆದ ವರ್ಚುವಲ್(Video Conference-VC) ಸಭೆಯಲ್ಲಿ ಅವರು ಮಾತನಾಡಿದರು. ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಆದೇಶ ಹಾಗೂ ಬೀದಿ ಬದಿ ವ್ಯಾಪಾರಿಗಳ ಸಂರಕ್ಷಣಾ ಕಾಯ್ದೆಯನ್ನು ಪಾಲಿಸಬೇಕು. ಸಮಗ್ರ ಯೋಜನೆ ರೂಪಿಸಿಕೊಂಡು, ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಂಡು ಕಾರ್ಯಾಚರಣೆ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಮೊದಲಿಗೆ ಯಾವ ಯಾವ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲಾಗುತ್ತದೆ ಎಂಬುದರ ಪಟ್ಟಿಯನ್ನು ಸಿದ್ಧಪಡಿಸಬೇಕು. ನಂತರ ಅಂಗಡಿ ಮಾಲೀಕರು ಹಾಗೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಬೇಕು. ಇದಾದ ನಂತರ ನೋಟಿಸ್ ನೀಡಿ, ಅದರ ಬಳಿಕ ನಿಯಮಾನುಸಾರ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು. ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಪಾಲಿಕೆಯ ಅಧಿಕಾರಿಗಳು, ಉದ್ದಿಮೆ ಪರವಾನಗಿ ನೀಡುವ ಆರೋಗ್ಯಾಧಿಕಾರಿಗಳು, ಭದ್ರತೆಗಾಗಿ ಪೊಲೀಸ್ ಸಿಬ್ಬಂದಿ ಹಾಗೂ ಒತ್ತುವರಿ ತೆರವು ತಂಡಗಳ ಸಮನ್ವಯದೊಂದಿಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದಿದ್ದಾರೆ.

ಇನ್ನು ಮುಂದುವರಿದು ನಗರದ ಆರ್ಟಿರಿಯಲ್ ಹಾಗೂ ಸಬ್-ಆರ್ಟಿರಿಯಲ್ ರಸ್ತೆಗಳು ಸೇರಿದಂತೆ ಪ್ರಮುಖ ರಸ್ತೆಗಳನ್ನು ನಾನ್-ವೆಂಡಿಂಗ್ ವಲಯಗಳಾಗಿ ಅಧಿಸೂಚನೆ ಹೊರಡಿಸಲು ಕ್ರಮವಹಿಸಲು ತಿಳಿಸಲಾಗಿದೆ. ನಗರದಲ್ಲಿ ಸುಮಾರು 15 ಸಾವಿರ ಕಿ.ಮೀ ರಸ್ತೆಗಳಿದ್ದು, ಅವುಗಳಲ್ಲಿ ಸುಮಾರು 1500 ಕಿ.ಮೀ. ರಸ್ತೆಗಳನ್ನು ನಾನ್-ವೆಂಡಿಂಗ್ ವಲಯಗಳಾಗಿ ಗುರುತಿಸಬೇಕು. ಉಳಿದ ರಸ್ತೆಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ವ್ಯಾಪಾರ ನಡೆಸಲು ಬೀದಿ ವ್ಯಾಪಾರಿಗಳಿಗೆ ಅವಕಾಶ ಕಲ್ಪಿಸಬೇಕೆಂದು ಎಂದಿದ್ದಾರೆ.
ಬೀದಿ ವ್ಯಾಪಾರಿಗಳಿಗೆ ಜೀವನ ನಡೆಸಲು ಮುಕ್ತ ಅವಕಾಶ
ನಗರದಲ್ಲಿ ಬೀದಿ ವ್ಯಾಪಾರಿಗಳು ಜೀವನ ನಡೆಸಲು ಮುಕ್ತ ಅವಕಾಶವಿದೆ. ಪಾಲಿಕೆ ಗುರುತಿಸುವ ನಾನ್-ವೆಂಡಿಂಗ್ ವಲಯಗಳ ರಸ್ತೆಗಳನ್ನು ಹೊರತುಪಡಿಸಿ ಉಳಿದ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಮುಕ್ತವಾಗಿ ವ್ಯಾಪಾರ ನಡೆಸಬಹುದು. ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ನಾಗರಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು. ಯಾವ ರಸ್ತೆಗಳಲ್ಲಿ ಕಾರ್ಯಾಚರಣೆ ನಡೆಯಲಿದೆಯೋ, ಆ ರಸ್ತೆಗಳಲ್ಲಿ ಮುಂಚಿತವಾಗಿಯೇ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಾಗೃತಿ ಕಾರ್ಯಕ್ರಮದ ವೇಳೆ ಒತ್ತುವರಿಯನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸದಿದ್ದರೆ ಪಾಲಿಕೆಯಿಂದ ತೆರವುಗೊಳಿಸಿ, ಕಾನೂನಿನ ಪ್ರಕಾರ ದಂಡ ವಿಧಿಸಲಾಗುವುದು ಎಂಬುದನ್ನು ಮನವರಿಕೆ ಮಾಡಿಕೊಡಬೇಕೆಂದು ಎಂದರು.
ನಗರದಲ್ಲಿ ಎಲ್ಲೆಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತದೆಯೋ, ಅದೇ ಸ್ಥಳಗಳಲ್ಲಿ ಸಮಾನಾಂತರವಾಗಿ ಪಾದಚಾರಿ ಮಾರ್ಗಗಳ ದುರಸ್ತಿ ಕಾರ್ಯವನ್ನೂ ತಕ್ಷಣ ಕೈಗೊಳ್ಳಬೇಕು. ಪಾದಚಾರಿಗಳಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಆದ್ಯತೆ ನೀಡಿ, ಹಾಳಾಗಿರುವ ಸ್ಲ್ಯಾಬ್ಗಳು, ಕರ್ಬ್ಗಳು ಹಾಗೂ ಅಗತ್ಯ ಸಿವಿಲ್ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.












Click it and Unblock the Notifications