ತೆಲಂಗಾಣ ಸಿಎಂ ರೇವಂತ್ ರೆಡ್ಡಿಯವರಿಂದ 'ಟ್ಯೂಶನ್' ಪಡೆಯಿರಿ
ಬೆಂಗಳೂರು, ಮಾರ್ಚ್ 11: ಬರ ಪರಿಹಾರ ವಿಚಾರದಲ್ಲಿ ಮಾಜಿ ಪಿಎಂ ಮನಮೋಹನ್ ಸಿಂಗ್ ಸರ್ಕಾರವಿದ್ದಾಗಲೂ ತಡವಾಗಿ ಪರಿಹಾರ ನೀಡಲಾಗಿತ್ತು. ಆಗ ಬಾಯಿ ಮುಚ್ಚಿಕೊಂಡಿದ್ದ ಕಾಂಗ್ರೆಸ್ ನಾಯಕರು, ಈಗ ಮಾತನಾಡುತ್ತಿದ್ದಾರೆ. ನೀವೆಲ್ಲ ತೆಲಂಗಾಣ ಮುಖ್ಯಮಂತ್ರಿ ಅವರಿಂದ ಟ್ಯೂಶನ್ ಪಡೆಯಿರಿ ಎಂದು ಬಿಜೆಪಿ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
ಸುದ್ದಿಗಾರರ ಜತೆಗೆ ಬೆಂಗಳೂರಿನಲ್ಲಿ ಮಾತನಾಡದ ಅವರು, ಬರ ಪರಿಹಾರ ನೀಡಲು ನೀತಿ ಸಂಹಿತೆ ಅನ್ವಯವಾಗುವುದಿಲ್ಲ. ಕೇಂದ್ರದ ಬಗ್ಗೆ ಉತ್ತಮ ಸಂಬಂಧ ಇಟ್ಟುಕೊಳ್ಳದೇ ಕಾಂಗ್ರೆಸ್ನವರು ರಾಜಕೀಯ ಮಾಡುತ್ತಿದ್ದಾರೆ. ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ಪ್ರಧಾನಿಯ ಬಗ್ಗೆ ಉತ್ತಮವಾಗಿ ಮಾತನಾಡಿದ್ದಾರೆ. ಕರ್ನಾಟಕದ ಕಾಂಗ್ರೆಸ್ ನಾಯಕರು ಅವರ ಬಳಿ ಟ್ಯೂಶನ್ ಪಡೆಯಲಿ ಎಂದು ತಿವಿದರು.

ಕರ್ನಾಟಕ ಕಾಂಗ್ರೆಸ್ ಸರ್ಕಾರ ಚುನಾವಣೆ ಹೊಂದಾಣಿಕೆಗಾಗಿ ಕಾವೇರಿ ನೀರನ್ನು ನೆರೆಯ ತಮಿಳುನಾಡಿಗೆ ಹರಿಸುತ್ತಿದೆ. ಈ ಪಾಪರ್ ಸರ್ಕಾರದ ಬಳಿ ಬರ ಪರಿಹಾರ ನೀಡಲು ಹಣವಿಲ್ಲ. ಆದರೆ ನೀರನ್ನು ಮಾತ್ರ ಹರಿಸುತ್ತಲೇ ಇದೆ. ನೀರಿನ ವಿಚಾರಕ್ಕೆ ರೈತರು ಹೋರಾಟ ಮಾಡುತ್ತಿದ್ದಾರೆ, ಜನರು ಖಾಲಿ ಬಿಂದಿಗೆ ಹಿಡಿದುಕೊಂಡು ಬೀದಿಗಿಳಿದಿದ್ದಾರೆ, ಬೆಂಗಳೂರಿನಲ್ಲಿ ನೀರಿಗೆ ಕೊರತೆಯಾಗಿದೆ. ಇದಕ್ಕೆಲ್ಲ ಸರ್ಕಾರದ ವೈಫಲ್ಯಗಳೇ ಕಾರಣ ಎಂದು ದೂರಿದರು.
ಚುನಾವಣಾ ಹೊಂದಣಿಕೆಗಾಗಿ ನೀರು ಬಿಟ್ಟಿದ್ದಾರೆ
ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬರ ಸ್ಥಿತಿ ಇದ್ದರೂ ಸಹಿತ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಾರೆ ಎಂದರೆ ಇಂತಹ ನಾಚಿಕೆಗೆಟ್ಟ ಸರ್ಕಾರ ಇತಿಹಾಸದಲ್ಲೇ ಇಲ್ಲ ಎನ್ನಬೇಕು. ನಮ್ಮ ಕುಡಿಯುವ ನೀರನ್ನು ಚುನಾವಣಾ ಹೊಂದಾಣಿಕೆಗಾಗಿ ಬಿಟ್ಟು ಕೊಡುತ್ತಾರೆ. ಈಗಾಗಲೇ ಓಟಿಗಾಗಿ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡಿದ್ದಾರೆ. ಈಗ ಹೊಂದಾಣಿಕೆಗಾಗಿ ರಾಜ್ಯಕ್ಕೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ ಎಂದು ವಿವರಿಸಿದರು.

ಮೇಕೆದಾಟು ಯೋಜನೆಗೆ ಹಣ ಮೀಸಲಿಡಿ
ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆ ಎಂದು ಈ ಹಿಂದೆ ಹೋರಾಟ ಮಾಡಿದ್ದರು. ಇದೀಗ ಯೋಜನೆಯನ್ನು ಕೇಂದ್ರ ಸರ್ಕಾರ ಮಾಡಬೇಕು ಎನ್ನುತ್ತಿದ್ದಾರೆ. ಆಯವ್ಯದಲ್ಲಿ ಮೇಕೆದಾಟು ಯೋಜನೆಗೆ ನಯಾ ಪೈಸೆ ನೀಡಿಲ್ಲ.
ಇವರಿಗೆ ಮಾನವಿದ್ದರೆ 10,000 ಕೋಟಿ ರೂಪಾಯಿಯನ್ನು ಈ ಯೋಜನೆಗೆ ಮೀಸಲಿಡಬೇಕಿತ್ತು. ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಮಾನ ತೆಗೆದಿದ್ದಾರೆ. ಜನರಿಗೆ ಕಲುಷಿತ ನೀರು ನೀಡಲಾಗುತ್ತಿದೆ. ಖಜಾನೆಯನ್ನು ಲೂಟಿ ಹೊಡೆಯುವುದರಲ್ಲಿ ಎಲ್ಲರೂ ನಿರತರಾಗಿದ್ದಾರೆ ಎಂದು ಅವರು ಆರೋಪಿಸಿದರು.
ಕುಡಿಯಲು ನೀರು ಕೊಡದಿದ್ದರೆ ರಾಜೀನಾಮೆ ಕೊಡಿ
ಬರ ಪರಿಹಾರ ತರಲು ಯೋಗ್ಯತೆ ಇಲ್ಲವಾದರೆ ಕಾಂಗ್ರೆಸ್ ನಾಯಕರಿಗೆ ರಾಜೀನಾಮೆ ಕೊಟ್ಟು ಹೋಗಲಿ. ಬಿಜೆಪಿ ಸರ್ಕಾರವಿದ್ದಾಗ ಕೇಂದ್ರದ ದಾರಿ ಕಾಯದೇ ನಾವೇ ರೈತರಿಗೆ ಪರಿಹಾರ ನೀಡಿದ್ದೇವು. ಈಗಿನ ಸರ್ಕಾರ ಪಾಪರ್ ಆಗಿದೆ. ಕುಡಿಯುವ ನೀರಿಗೂ ಹಣವಿಲ್ಲ. ಕುಡಿಯುವ ನೀರು ಕೊಡುವ ಯೋಗ್ಯತೆ ಇಲ್ಲವಾದರೆ ಕುರ್ಚಿ ಬಿಟ್ಟು ತೊಲಗಲಿ ಎಂದು ವಾಗ್ದಾಳಿ ನಡೆಸಿದರು.
ಬರ ಪರಿಹಾರಕ್ಕೆ ಚುನಾವಣಾ ನೀತಿ ಸಂಹಿತೆ ಅನ್ವಯವಾಗುವುದಿಲ್ಲ. ಎಸ್ಡಿಆರ್ಎಫ್ ಹಣ ಈಗಾಗಲೇ ರಾಜ್ಯ ಸರ್ಕಾರಕ್ಕೆ ತಲುಪಿದೆ. ಎನ್ಡಿಆರ್ಎಫ್ ಹಣವನ್ನು ಕೇಂದ್ರ ಸರ್ಕಾರ ಒಟ್ಟಿಗೆ ತೀರ್ಮಾನ ಮಾಡಿ ಎಲ್ಲ ರಾಜ್ಯಗಳಿಗೆ ನೀಡುತ್ತದೆ. ಬಿಜೆಪಿ ಸರ್ಕಾರ ತಕ್ಷಣ ಪ್ರವಾಹ ಹಾನಿ ಪರಿಹಾರ ನೀಡಿದ್ದು, ಬಳಿಕ ಕೇಂದ್ರ ಸರ್ಕಾರ ಹಣ ನೀಡಿತ್ತು.
ಕಾರ್ಯಕರ್ತರಲ್ಲಿ ಭಿನ್ನಾಭಿಪ್ರಾಯ ಇಲ್ಲ
ಲೋಕಸಭಾ ಚುನಾವಣೆಯಲ್ಲಿ ಯಾರಿಗೇ ಟಿಕೆಟ್ ಕೊಟ್ಟರೂ ಬಿಜೆಪಿ ಕಾರ್ಯಕರ್ತರು ಭಿನ್ನಾಭಿಪ್ರಾಯವಿಲ್ಲದೆ ನಿಷ್ಠೆಯಿಂದ ಕೆಲಸ ಮಾಡುವ ಮನೋಭಾವ ಹೊಂದಿದ್ದಾರೆ. ಪಕ್ಷ ಅಂತಿಮವಾಗಿ ಸೂಚಿಸುವ ಅಭ್ಯರ್ಥಿಗಳ ಪರವಾಗಿ ಎಲ್ಲರೂ ಕೆಲಸ ಮಾಡಲಿದ್ದಾರೆ. ಒಂದು ಬಾರಿ ಟಿಕೆಟ್ ಘೋಷಣೆಯಾದ ಬಳಿಕ ಎಲ್ಲರೂ ಒಂದಾಗಿ ಕೆಲಸ ಮಾಡಲಿದ್ದಾರೆ ಎಂದು ಹೇಳಿದರು.
ಸದ್ಯ ಕರ್ನಾಟಕದಲ್ಲಿ ಒಂದೇ ಒಂದು ಕ್ಷೇತ್ರಕ್ಕೂ ಬಿಜೆಪಿಯ ಟಿಕೆಟ್ ಘೋಷಣೆ ಆಗಿಲ್ಲ. ಈಗಾಗಲೇ ಕಾಂಗ್ರೆಸ್ ಪಕ್ಷ ರಾಜ್ಯದ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದಾರೆ.












Click it and Unblock the Notifications