ಮಂಗಳವಾರ ಶಾಲೆಗಳು, ಐಟಿ ಕಂಪನಿಗಳಿಗೆ ರಜೆ ಘೋಷಣೆ ಸಾಧ್ಯತೆ, ಕಾರಣ ಇಲ್ಲಿದೆ
ಬೆಂಗಳೂರು, ಸೆಪ್ಟೆಂಬರ್ 24: ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳು ಸೆಪ್ಟೆಂಬರ್ 26 ಮಂಗಳವಾರ ಬೆಂಗಳೂರು ಬಂದ್ಗೆ ಕರೆ ನೀಡಿವೆ. ನಗರದ ಫ್ರೀಡಂ ಪಾರ್ಕ್ನಲ್ಲಿ ಹಲವು ಸಂಘ ಸಂಸ್ಥೆಗಳು ಸಭೆ ನಡೆಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.
ರೈತ ಮುಖಂಡ ಕುರುಬೂರು ಶಾಂತಕುಮಾರ್ ಬೆಂಗಳೂರು ಬಂದ್ಗೆ ಕರೆ ನೀಡಿದ್ದು, ವಿವಿಧ ಸಂಘಟನೆಗಳಿಂದ ಸಹಕಾರ ಕೋರಿದ್ದಾರೆ. ಬೆಂಗಳೂರಿನಲ್ಲಿ ಶಾಲಾ- ಕಾಲೇಜುಗಳಿಗೆ, ಫಿಲಂ ಚೇಂಬರ್ ಮತ್ತು ಐಟಿ ಕಂಪನಿಗಳಿಗೆ ರಜೆ ಘೋಷಿಸುವಂತೆ ಶಾಂತಕುಮಾರ್ ಮನವಿ ಮಾಡಿದ್ದಾರೆ. ಕಾವೇರಿ ವಿವಾದ ಕುರಿತು ಚರ್ಚಿಸಲು ವಿಶೇಷ ವಿಧಾನಸಭೆ ಅಧಿವೇಶನ ಕರೆಯಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬಂದ್ ಕುರಿತ ಸಭೆಯಲ್ಲಿ ಆಮ್ ಆದ್ಮಿ ಪಾರ್ಟಿ, ಹಲವಾರು ನಾಗರಿಕ ವೆಲ್ಫೇರ್ ಅಸೋಸಿಯೇಷನ್ಗಳು ಮತ್ತು ಕನ್ನಡ ಪರ ಸಂಘಟನೆಗಳು ಸೇರಿದಂತೆ 15 ಕ್ಕೂ ಹೆಚ್ಚು ಸಂಘಟನೆಗಳು ಸಭೆಯಲ್ಲಿ ಭಾಗವಹಿಸಿದ್ದವು. ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಬೆಂಗಳೂರಿನಲ್ಲಿ ಶನಿವಾರ ವಿವಿಧ ಗುಂಪುಗಳು ಪ್ರತಿಭಟನೆ ನಡೆಸಿ ಹಲವೆಡೆ ಸಂಚಾರ ಸ್ಥಗಿತಗೊಳಿಸಲು ಯತ್ನಿಸಿದ್ದವು.
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಂಡು ತಮಿಳುನಾಡಿಗೆ ನೀರು ಬಿಡಲು ಕರ್ನಾಟಕ ಸರ್ಕಾರ ಶುಕ್ರವಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನೂ ಈಗಾಗಲೇ ಕೈಗೊಳ್ಳಲಾಗಿದೆ. ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 21 ರಂದು ನಿರಾಕರಿಸಿತ್ತು.
ತಮಿಳುನಾಡಿಗೆ ನೀರು ಬಿಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಇಂದು ಮಂಡ್ಯದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ಕೈಗೊಂಡಿವೆ. ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಕಾವೇರಿ ನೀರು ಬಿಡಲು ಕರ್ನಾಟಕ ಸರ್ಕಾರ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡಿಸಿತ್ತು. ದೆಹಲಿಯಲ್ಲಿ ನಡೆದ ಸಭೆಯಲ್ಲಿ ಆಗಸ್ಟ್ ನಲ್ಲಿ ರಾಜ್ಯದಲ್ಲಿ ಶೇ.73ರಷ್ಟು ಕಡಿಮೆ ಮಳೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.
195 ತಾಲೂಕುಗಳಲ್ಲಿ ಬರಪೀಡಿತ ಎಂದು ಘೋಷಿಸಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯಡಿ ಕೇಂದ್ರದಿಂದ ಪರಿಹಾರ ಪಡೆಯುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಶುಕ್ರವಾರ ಒಪ್ಪಿಗೆ ನೀಡಿದೆ. ಬೆಳೆನಷ್ಟ ಸಮೀಕ್ಷೆ ಆಧರಿಸಿ 161 ತಾಲ್ಲೂಕುಗಳು ತೀವ್ರ ಬರ ಎದುರಿಸುತ್ತಿದ್ದು, 34 ತಾಲ್ಲೂಕುಗಳು ಸಾಧಾರಣ ಬರ ಎದುರಿಸುತ್ತಿವೆ ಎಂದು ರಾಜ್ಯ ಸರ್ಕಾರ ಹೇಳಿತ್ತು.
ಅತ್ತ ಕಾವೇರಿ ವಿಚಾರವಾಗಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಸೆ.26ರಂದು ಬೆಂಗಳೂರು ಬಂದ್ ಘೋಷಿಸಿದ ಬೆನ್ನಲ್ಲೇ ಮಾಜಿ ಶಾಸಕ ಹಾಗೂ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸೋಮವಾರ ನಗರದಲ್ಲಿ ವಿವಿಧ ಸಂಘಟನೆಗಳ ಸಭೆ ನಡೆಸಿ ಕರ್ನಾಟಕದಲ್ಲಿ ಮುಷ್ಕರ ನಡೆಸುವ ದಿನಾಂಕ ನಿರ್ಧರಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದ ಹಿನ್ನೆಲೆಯಲ್ಲಿ ಬಂದ್ಗೆ ಕರೆ ನೀಡಲಾಗಿತ್ತು.
ಶಾಂತಕುಮಾರ್ ಅವರು ನಗರದಲ್ಲಿ ಬಂದ್ ಘೋಷಿಸಿದ ಬೆನ್ನಲ್ಲೇ ವಾಟಾಳ್ ನಾಗರಾಜ್ ಅವರು ಸೋಮವಾರ ವಿವಿಧ ಸಂಘಟನೆಗಳ ಸಭೆಯ ಘೋಷಣೆ ಮಾಡಿದ್ದು ಗೊಂದಲಕ್ಕೆ ಕಾರಣವಾಯಿತು. ಉಭಯ ನಾಯಕರು ಸಭೆ ನಡೆಸಿ ಸೋಮವಾರ ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಿದ್ದಾರೆ. ಆದರೆ, ಸೆ.26ರಂದು ಕರೆ ನೀಡಿರುವ ಬಂದ್ ಹಿಂಪಡೆಯುವುದಿಲ್ಲ ಎಂದು ಶಾಂತಕುಮಾರ್ ಸಮರ್ಥಿಸಿಕೊಂಡಿದ್ದಾರೆ.












Click it and Unblock the Notifications