ರಾಜಿನಾಮೆ ಕೊಡು ಅಂದ ಕೂಡಲೇ ಕೊಡಲು ಸಾಧ್ಯವಿಲ್ಲ: ಜಾರ್ಜ್
ಸಚಿವ ಪದವಿಗೆ ರಾಜಿನಾಮೆ ನೀಡಲು ಸಾಧ್ಯವಿಲ್ಲ ಎಂದ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್. ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಕೇಸ್ ಸಿಬಿಐಗೆ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಜಾರ್ಜ್ ರಾಜಿನಾಮೆಗೆ ಒತ್ತಾಯಿಸಿದ್ದ ಯಡಿಯೂರಪ್ಪ.
ಬೆಂಗಳೂರು, ಸೆಪ್ಟೆಂಬರ್ 5: ಯಡಿಯೂರಪ್ಪ ಅವರು ರಾಜಿನಾಮೆ ನೀಡು ಅಂದ ಕೂಡಲೇ ನಾನು ನನ್ನ ಮಂತ್ರಿ ಪದವಿಗೆ ರಾಜಿನಾಮೆ ಕೊಡಲು ಸಾಧ್ಯವಿಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಕಳೆದ ವರ್ಷ ನಡೆದಿದ್ದ ಡಿವೈ ಎಸ್ ಪಿ ಗಣಪತಿಯವರ ಆತ್ಮಹತ್ಯೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಮೂಲಕ ಮರುತನಿಖೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5ರಂದು ಆದೇಶಿಸಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ, ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಜಾರ್ಜ್ ಅವರು ತನಿಖೆಗೆ ಸಹಕರಿಸಲು ಸಚಿವ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ಪ್ರತಿಕ್ರಿಯಿಸಿರುವ ಜಾರ್ಜ್, ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಆದರೆ, ಸಿಬಿಐ ತನಿಖೆ ನಡೆಸಲಿದೆ ಎಂಬ ಕಾರಣಕ್ಕಾಗಿ ಸಚಿವ ಸ್ಥಾನ ತೊರೆಯಲು ಸಾಧ್ಯವಿಲ್ಲ. ಯಡಿಯೂರಪ್ಪ ಅವರು ಹೇಳಿದ ಕೂಡಲೇ ರಾಜಿನಾಮೆ ಸಲ್ಲಿಸಲು ಆಗದು ಎಂದು ಹೇಳಿದರು.
ಈ ಹಿಂದೆ, ಸಿಐಡಿಯು ಇದೇ ಪ್ರಕರಣದ ತನಿಖೆ ನಡೆಸುತ್ತಿದ್ದಾಗ ನಾನು ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ತನಿಖೆಗೆ ಸಹಕರಿಸಿದ್ದೆ. ಈಗ ಮತ್ತೆ ರಾಜಿನಾಮೆ ಕೊಡುವ ಅಗತ್ಯವಿಲ್ಲ ಎಂದು ಅವರು ತಮ್ಮ ಮಾತನ್ನು ಸಮರ್ಥಿಸಿಕೊಂಡರು.












Click it and Unblock the Notifications