ಎಂಕೆ ಗಣಪತಿ ಸಾವಿನ ಪ್ರಕರಣ : ಸಚಿವ ಕೆ.ಜೆ ಜಾರ್ಜ್ ವಿರುದ್ಧ ಎಫ್ ಐಆರ್
ಬೆಂಗಳೂರು, ಅಕ್ಟೋಬರ್ 26: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳ ಮೇಲೆ ಸಿಬಿಐ ಎಫ್ ಐ ಆರ್ ದಾಖಲಿಸಿದೆ.
ಡಿವೈಎಸ್ಪಿ ಗಣಪತಿ ಯಾರು? ಏನು? ಎತ್ತ?
ಸಿಐಡಿ ತನಿಖಾ ತಂಡ ಇಂದು ಸಿಬಿಐಗೆ ತನ್ನ ವಿಸ್ತೃತ ತನಿಖಾ ವರದಿಯನ್ನು ಹಸ್ತಾಂತರ ಮಾಡಿತ್ತು. ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸುಪ್ರೀಂಕೋರ್ಟ್ ಕೂಡಾ ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ಸಿಐಡಿ ತನಿಖಾ ತಂಡ ವರದಿಯನ್ನು ಇಂದು ಚೆನ್ನೈನಲ್ಲಿರುವ ಸಿಬಿಐ ಅಧಿಕಾರಿಗಳಿಗೆ ಹಸ್ತಾಂತರಿಸಿತ್ತು. ಸಚಿವ ಕೆ.ಜೆ.ಜಾರ್ಜ್, ಹಿರಿಯ ಐಎಎಸ್ ಅಧಿಕಾರಿ ಎ.ಎನ್.ಪ್ರಸಾದ್, ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ಅವರ ವಿರುದ್ಧ ಸಿಬಿಐ ತಂಡ ಎಫ್ ಐ ಆರ್ ದಾಖಲಿಸಿದೆ.
ಮಡಿಕೇರಿಯ ಲಾಡ್ಜ್ ನಲ್ಲಿ(ರೂಮ್ ನಂಬರ್ 315) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗುವುದಕ್ಕೂ ಮುನ್ನ ಗಣಪತಿ ತಮ್ಮ ಜೀವಕ್ಕೆ ಯಾವುದೇ ರೀತಿಯ ತೊಂದರೆಯಾದರೆ ಗೃಹಸಚಿವರಾಗಿದ್ದ ಕೆ.ಜೆ.ಜಾರ್ಜ್ ಮತ್ತು ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ ಮತ್ತು ಎ.ಎಂ.ಪ್ರಸಾದ್ ಅವರೇ ಕಾರಣವೆಂದು ಆರೋಪ ಮಾಡಿದ್ದರು.
ವಿಡಿಯೋ ಸಾಕ್ಷ್ಯವಿದ್ದರೂ ಯಾವುದೇ ಕ್ರಮ ಜರುಗಿಸುವಲ್ಲಿ ಕರ್ನಾಟಕ ಸರ್ಕಾರ, ತನಿಖಾ ತಂಡ ವಿಫಲವಾಗಿದೆ, ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಎಂಕೆ ಗಣಪತಿ ಅವರ ತಂದೆ ಎಂಕೆ ಗಣಪತಿ ತಂದೆ ಕುಶಾಲಪ್ಪ ಹಾಗೂ ಸಹೋದರ ಎಂ.ಕೆ. ಮಾಚಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಮಹತ್ವದ ಆದೇಶ ಹೊರಡಿಸಿತ್ತು.
ಈ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಜಾರ್ಜ್, ಪ್ರಣವ್ ಮೊಹಾಂತಿ ಹಾಗೂ ಎ.ಎಂ ಪ್ರಸಾದ್ ಮೂವರಿಗೂ ಕ್ಲೀನ್ ಚಿಟ್ ನೀಡಿ, ಬಿ ರಿಪೋರ್ಟ್ ಸಲ್ಲಿಸಿತ್ತು.
ಗಣಪತಿ ಆತ್ಮಹತ್ಯೆಯ ಪ್ರಮುಖ ಸಾಕ್ಷಿಗಳ ನಾಶ? ಇಲ್ಲಿದೆ ಸ್ಫೋಟಕ ಮಾಹಿತಿ
ಸಿಬಿಐ ತನಿಖೆಗೆ ಕೋರಿ ಹೈಕೋರ್ಟಿನಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರಗೊಂಡ ಬಳಿಕ, ಗಣಪತಿ ಅವರ ಸೋದರ ಮಾಚಯ್ಯ, ಸೋದರಿ ಬಬಿತಾ, ತಂದೆ ಕುಶಾಲಪ್ಪ ಎಲ್ಲರೂ ಸುಪ್ರೀಂಕೋರ್ಟಿಗೆ ಅರ್ಜಿ ಹಾಕಿದ್ದರು. ಸಿಬಿಐ ತನಿಖೆಗೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು.