ಈಗಲ್ಟನ್ ರೆಸಾರ್ಟ್ನಲ್ಲಿ ಸಾಕ್ಷ್ಯನಾಶ: ಡಿಕೆಶಿಗೆ ಕ್ಲೀನ್ಚಿಟ್
ಬೆಂಗಳೂರು, ಏಪ್ರಿಲ್ 05: ಈಗಲ್ಟನ್ ರೆಸಾರ್ಟ್ನಲ್ಲಿ ಚೀಟಿ ಹರಿದು ಹಾಕುವ ಮೂಲಕ ಸಾಕ್ಷ್ಯ ನಾಶ ಮಾಡಿದ ಆರೋಪ ಎದುರಿಸುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಖಲಿಸಿದ್ದ ಸಾಕ್ಷ್ಯ ನಾಶ ಮಾಡಿದ ಆರೋಪ ಹೊರಿಸಿ ಕೇಸು ದಾಖಲಿಸಿದ್ದರು. ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಡಿ.ಕೆ. ಶಿವಕುಮಾರ್ ಮೇಲಿನ ಪ್ರಕರಣವನ್ನು ರದ್ದು ಮಾಡಿತ್ತು. ಇದನ್ನು ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಕೂಡ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ರದ್ದು ಮಾಡಿ ಮಹತ್ವದ ಆದೇಶ ನೀಡಿದೆ.
Recommended Video
ಏನಿದು ಪ್ರಕರಣ? 2017ರ ಆಗಸ್ಟ್ 2ರಂದು ಡಿಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿಯಾಗಿತ್ತು. ಈ ವೇಳೆ ಡಿಕೆ ಶಿವಕುಮಾರ್ ಈಗಲ್ಟನ್ ರೆಸಾರ್ಟ್ನಲ್ಲಿದ್ದರು. ಈ ಮಾಹಿತಿ ತಿಳಿದ ಅಧಿಕಾರಿಗಳು ಅಲ್ಲಿಯೂ ದಾಳಿ ನಡೆಸಿದ್ದರು. ಪರಿಶೀಲನೆ ವೇಳೆ ಕೆಲವು ಮಹತ್ವದ ದಾಖಲೆಗಳು ಸಿಕ್ಕಿದ್ದವು. ಡಿ.ಕೆ. ಶಿವಕುಮಾರ್ ಅವರಿಗೆ ಸೇರಿದ್ದ ಎನ್ನಲಾದ ಚೀಟಿಯನ್ನು ಡಿ.ಕೆ. ಶಿವಕುಮಾರ್ ಹರಿದು ಹಾಕಿದ್ದರು. ಆ ಪೇಪರ್ನಲ್ಲಿ ಹಣಕಾಸಿನ ವಹಿವಾಟಿಗೆ ಸಂಬಂಧಿಸಿದ್ದು ಎಂದು ಐಟಿ ಅಧಿಕಾರಿಗಳು ಉಲ್ಲೇಖಿಸಿದ್ದರು. ಇದು ಡಿಜಿಟಲ್ ಕೇಬಲ್ ಜತೆಗಿನ ವ್ಯವಹಾರ, ಅಕ್ರಮ ವ್ಯವಹಾರಕ್ಕೆ ಸಂಬಂಧಿಸಿದ ಚೀಟಿಯಾಗಿತ್ತು ಎಂಬುದು ಐಟಿ ಅಧಿಕಾರಿಗಳ ವಾದವಾಗಿತ್ತು. ಈ ಕುರಿತು ಸಾಕ್ಷ್ಯನಾಶ ಮಾಡಿದ ಆರೋಪ ಹೊರಿಸಿ ಐಟಿ ಅಧಿಕಾರಿಗಳು ಕೇಸು ದಾಖಲಿಸಿದ್ದರು.
ಈ ಪ್ರಕರಣವನ್ನು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2019 ರಲ್ಲಿ ರದ್ದು ಮಾಡಿತ್ತು. ನ್ಯಾಯಾಲಯದ ಆದೇಶ ಪ್ರಶ್ನಿಸಿ ಐಟಿ ಅಧಿಕಾರಿಗಳು ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣ ಕುರಿತು ವಾದ ಮತ್ತು ಪ್ರತಿವಾದ ಆಲಿಸಿದ ಹೈಕೋರ್ಟ್ ಐಟಿ ಅಧಿಕಾರಿಗಳ ಮೇಲ್ಮನವಿ ಅರ್ಜಿಯನ್ನು ತಿರಸ್ಕರಿಸಿ ತೀರ್ಪು ನೀಡಿದೆ. ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.