ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ನಡೆದಿದ್ದು ಐಟಿ ಅಲ್ಲ ಇಡಿ ದಾಳಿ
ಬೆಂಗಳೂರು, ಆಗಸ್ಟ್ 5: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಗುರುವಾರ ಬೆಳಗ್ಗೆ 6 ಗಂಟೆ ವೇಳೆಗೆ ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Recommended Video
ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಜಮೀರ್ ಅಹ್ಮದ್ ಖಾನ್ ರಾಜಕೀಯದ ಹೊರತಾಗಿ ನ್ಯಾಷನಲ್ ಟ್ರಾವೆಲ್ಸ್ ಸೇರಿದಂತೆ ಹಲವು ಉದ್ಯಮಗಳಲ್ಲಿ ತೊಡಗಿಸಿಕೊಂಡಿದ್ದರು. ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸ, ಕಚೇರಿ, ಫ್ಲ್ಯಾಟ್ ಸೇರಿದಂತೆ ಏಕಕಾಲಕ್ಕೆ ಆರು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಇದರ ಜೊತೆಗೆ ಜಮೀರ್ ಅಹ್ಮದ್ ಖಾನ್ ಅವರಿಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೂ ದಾಳಿ ನಡೆಸಲಾಗಿದೆ.
ಗುರುವಾರ ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ನೀಡಿದ್ದರು. ಬೆಳಗ್ಗೆ 6 ಗಂಟೆ ಸುಮಾರಿಗೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಕಳೆದ ನಾಲ್ಕು ಗಂಟೆಗಳಿಂದ ನಿರಂತರ ಶೋಧ ನಡೆಸುತ್ತಿದ್ದಾರೆ. ಮನೆ, ಫ್ಲ್ಯಾನ್ ಮತ್ತು ಕಚೇರಿಯಲ್ಲಿರುವ ಹಣ ಮತ್ತು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ದಾಳಿ ನಡೆಸಿದ್ದು ಐಟಿ ಅಲ್ಲ ಇಡಿ:
ಐಎಂಎ ಹಗರಣದ ಆರೋಪಿ ಮನ್ಸೂರ್ ಅಲಿ ಖಾನ್ ವಿಚಾರಣೆ ವೇಳೆ ಶಾಸಕ ಜಮೀರ್ ಅಹ್ಮದ್ ಖಾನ್ ಹೆಸರು ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದಕ್ಕೂ ಮೊದಲು ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ದಾಳಿ ನಡೆಸಿರುವುದು ಐಟಿ ಅಧಿಕಾರಿಗಳಲ್ಲ ಬದಲಿಗೆ ಕೇಂದ್ರದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎಂದು ಗೊತ್ತಾಗಿದೆ.
ಜಮೀರ್ ಅಹ್ಮದ್ ವಿಚಾರಣೆನಡೆಸುತ್ತಿರುವ ಇಡಿ:
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಶಾಸಕನ ಮನೆ ಮೇಲೆ ಇಡಿ ದಾಳಿ ನಡೆದಿರುವುದರ ಬೆನ್ನಲ್ಲೇ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.