MLA Munirathna: 'ಮೊಟ್ಟೆ ಅಟ್ಯಾಕ್' ಚಿತ್ರದ ರಚನೆ ಹಾಗೂ ನಿರ್ಮಾಣ ಸ್ವತಃ ಅವರದ್ದೇ
ಬೆಂಗಳೂರು, ಡಿಸೆಂಬರ್ 25: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆಯಲಾಗಿದೆ. ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ಈಗ ಚರ್ಚೆಗೆ ಕಾರಣವಾಗಿದೆ. ಇದು ಕಾಂಗ್ರೆಸ್ ನಾಯಕರ ಕೈವಾಡ ಎಂದು ಸ್ವತಃ ಶಾಸಕ ಮುನಿರತ್ನ ಆರೋಪಿಸಿದ್ದಾರೆ. ಬಿಜೆಪಿ, ಕಾಂಗ್ರೆಸ್ ನಾಯಕರು ಈ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಸದ್ಯ ಮುನಿರತ್ನ ಕೆ. ಸಿ. ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಂದಿನಿ ಲೇಔಟ್ ಠಾಣೆ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.
ಬುಧವಾರ ಆರ್. ಆರ್. ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮೇಲೆ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಟ್ಟೆ ಎಸೆಯಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಮೇಲೆ ಹಲ್ಲೆ ಮಾಡಲು ಪ್ರಯತ್ನ ನಡೆಸಿದ್ದಾರೆ ಎಂದು ಗಂಭೀರ ಆರೋಪವನ್ನು ಶಾಸಕರು ಮಾಡಿದ್ದಾರೆ. ಈ ಘಟನೆ ಸಂಬಂಧ ಮೂವರು ಸದ್ಯ ಪೊಲೀಸರ ವಶದಲ್ಲಿದ್ದಾರೆ.

ಈ ಘಟನೆ ಬಳಿಕ ಮಾತನಾಡಿದ ಶಾಸಕ ಮುನಿರತ್ನ, "ನನಗೆ ಕೊಲೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಗನ್ಮ್ಯಾನ್ ಕೇಳಿದ್ದೆ, ಆದರೂ ಕೊಟ್ಟಿಲ್ಲ. ಈ ಘಟನೆಗೆ ಡಿಸಿಎಂ ಡಿ. ಕೆ. ಶಿವಕುಮಾರ್, ಡಿ. ಕೆ. ಸುರೇಶ್, ಹನುಮಂತರಾಯಪ್ಪ, ಕುಸುಮಾ ಹನುಮಂತರಾಯಪ್ಪ ಅವರೇ ಕಾರಣ" ಎಂದು ಆರೋಪಿಸಿದರು.
"ನನ್ನ ಶರ್ಟ್ ಹರಿದು ಹಾಕಿದರೆ 20 ಲಕ್ಷ ರೂ., ಮಸಿ ಬಳಿದರೆ 10 ಲಕ್ಷ ರೂ. ಹೀಗೆ ಒಂದೊಂದು ರೀತಿ ರೇಟ್ ಫಿಕ್ಸ್ ಮಾಡಿದ್ದಾರೆ" ಎಂದು ಮುನಿರತ್ನ ಆರೋಪಿಸಿದ್ದಾರೆ. ಮೊಟ್ಟೆ ಎಸೆದ ಘಟನೆಯ ನಂತರ ರಸ್ತೆಯಲ್ಲೇ ಕುಳಿತು ಶಾಸಕ ಮುನಿರತ್ನ ಬೆಂಬಲಿಗರ ಜೊತೆ ಪ್ರತಿಭಟನೆಯನ್ನು ನಡೆಸಿದರು.
ಮೊಟ್ಟೆ ಅಟ್ಯಾಕ್ ಚಿತ್ರ: ಶಾಸಕ ಮುನಿರತ್ನ ಆರೋಪಕ್ಕೆ ಆರ್. ಆರ್. ನಗರದ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಪ್ರತಿಕ್ರಿಯೆ ನೀಡಿದ್ದಾರೆ. "ಶಾಸಕ ಮುನಿರತ್ನ ಅವರ ಮೇಲಿನ 'ಮೊಟ್ಟೆ ಅಟ್ಯಾಕ್' ಚಿತ್ರದ ರಚನೆ ಹಾಗೂ ನಿರ್ಮಾಣ ಸ್ವತಃ ಅವರದ್ದೇ, ದಲಿತರನ್ನು ತುಚ್ಚವಾಗಿ ನಿಂದಿಸಿ, ಒಕ್ಕಲಿಗ ಗುತ್ತಿಗೆದಾರನ ಕುಟುಂಬದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನ ಮಾಡಿದ್ದ ಧ್ವನಿ FSL ರಿಪೋರ್ಟ್ನಲ್ಲಿ ಅವರದ್ದೇ ಎಂದು ಸಾಬೀತಾದ ಬೆನ್ನಲ್ಲೇ ತರಹೇವಾರಿ ನಾಟಕಗಳು ಶುರುವಾಗಿದೆ" ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.
"ಜನರೆದುರು ತನ್ನ ನಿಜರೂಪ ಬೆತ್ತಲಾದ ನಂತರ ಸಿಂಪತಿ ಗಿಟ್ಟಿಸಿಕೊಳ್ಳಲು ಇಮೇಜ್ ಬಿಲ್ಡಿಂಗ್ ಆಕ್ಟಿವಿಟಿಯ ಒಂದು ಭಾಗವೇ ಇಂದಿನ ಪ್ರಹಸನಗಳು. ಈತನ ಸ್ಕ್ರಿಪ್ಟೆಡ್ ಸ್ಟೋರಿಗಳು ಅಲ್ಪ ವಿರಾಮದ ಬಳಿಕ ಮತ್ತೆ ಚಾಲ್ತಿಗೆ ಬಂದಿವೆ. ಮಹಿಳೆಯರಿಗೆ ರಾಜಕೀಯದಲ್ಲಿ ಆದ್ಯತೆಯೇ ಕಡಿಮೆ ಇಂತಹ ಸನ್ನಿವೇಶದಲ್ಲಿ ಸ್ವಚ್ಚ ರಾಜಕಾರಣದ ಮೂಲಕ ಸ್ವಾಸ್ಥ್ಯ ಸಮಾಜದ ನಿರ್ಮಾಣದ ಕನಸುಗಳಿಗೆ ಬೆಲೆಯಿಲ್ಲವೆನಿಸುತ್ತದೆ. ಈ ನಾಟಕಗಳನ್ನು ಗಮನಿಸಿದರೆ ಕೊಚ್ಚೆಯಲ್ಲಿ ಹೊರಳಾಡುವ ಹಂದಿಯ ಜೊತೆ ಹಂದಿಗಳಾಗಿಯೇ ಇರಬೇಕಾ ಎಂಬ ಪ್ರಶ್ನೆಯ ಜೊತೆ ಅಸಹ್ಯ ಮೂಡುತ್ತಿದೆ" ಎಂದು ಕುಸುಮಾ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
"ಮಾಡಿದ್ದುಣ್ಣೋ ಮಹಾರಾಯ ಎಂಬಂತೆ ಈತನ ಪಾಪದ ಕೆಲಸಗಳಿಗೆ ತಕ್ಕ ಶಾಸ್ತಿ ಆಗೇ ಆಗುತ್ತದೆ, ಆದರೆ ತನ್ನ ತಪ್ಪು ಮುಚ್ಚಿಕೊಳ್ಳಲು ನನ್ನ ಹೆಸರನ್ನು ವಿನಾಕಾರಣ ಎಳೆದು ತರುವುದು ಎಷ್ಟು ಸರಿ? ಇಂದಿನ ಪ್ರಹಸನದ ಹಿಂದಿನ ದುರುದ್ದೇಶಗಳನ್ನು ಅರಿಯದೆ ಈತನ ಕತೆಗಳನ್ನು ನಂಬುವಷ್ಟು ನಮ್ಮ ಜನರು ದಡ್ಡರೂ, ಮೂರ್ಖರೂ ಅಲ್ಲ. ಕಾಲಾಯ ತಸ್ಮೈ ನಮಃ!" ಎಂದು ಕುಸುಮಾ ಹನುಮಂತರಾಯಪ್ಪ ಪೋಸ್ಟ್ನಲ್ಲಿ ಹೇಳಿದ್ದಾರೆ.
ಸದ್ಯ ಆರ್. ಆರ್. ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಕೆ. ಸಿ. ಜನರಲ್ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಘಟನೆ ಕುರಿತು ನಂದಿನಿ ಲೇಔಟ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆಸ್ಪತ್ರೆಗೆ ತೆರಳಿ ಅವರು ಶಾಸಕ ಮುನಿರತ್ನ ಹೇಳಿಕೆಯನ್ನು ಪಡೆದಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ. ಸಿ. ಎನ್. ಮಂಜುನಾಥ್ ಆಸ್ಪತ್ರೆಗೆ ತೆರಳಿ ಶಾಸಕರ ಆರೋಗ್ಯವನ್ನು ವಿಚಾರಿಸಿದರು. ವೈದ್ಯರ ಜೊತೆ ಅವರು ಮುನಿರತ್ನ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿಯನ್ನು ಪಡೆದರು.
ಆಸಿಡ್ ಮೊಟ್ಟೆ ದಾಳಿ: ಶಾಸಕ ಮುನಿರತ್ನ ತಮ್ಮ ಫೇಸ್ಬುಕ್ ಪೋಸ್ಟ್ನಲ್ಲಿ ಇದು ಆಸಿಡ್ ಮೊಟ್ಟೆ ದಾಳಿ ಎಂದು ಹೇಳಿದ್ದಾರೆ. ಈ ದಾಳಿಯಿಂದ ಮುನಿರತ್ನ ತಲೆಯ ಹಿಂಭಾಗದ ಕೂದಲು ಸುಟ್ಟು ಹೋಗಿದೆ ಎಂದು ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ.
ಶಾಸಕ ಮುನಿರತ್ನ ಸಾಮಾಜಿಕ ಜಾಲತಾಣದಲ್ಲಿ, "ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ಮೊಟ್ಟೆ ದಾಳಿಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರಾದ ಡಾ. ಸಿ. ಎನ್. ಮಂಜುನಾಥ ಹಾಗೂ ಬೆಂಗಳೂರು ಜಿಲ್ಲಾ ಅಧ್ಯಕ್ಷರಾದ ಸಪ್ತಗಿರಿ ಗೌಡ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು" ಎಂದು ಪೋಸ್ಟ್ ಹಾಕಲಾಗಿದೆ.












Click it and Unblock the Notifications