ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಜೆ.ಪಿ. ನಡ್ಡಾಗೆ ತಾತ್ಕಾಲಿಕ ರಿಲೀಫ್..!
ಬೆಂಗಳೂರು ಜುಲೈ 08: ಇತ್ತೀಚೆಗೆ ನಡೆದ ಚುನಾವಣೆ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಇದರಿಂದಾಗಿ ಸದ್ಯಕ್ಕೆ ಪ್ರಕರಣದಲ್ಲಿ ತನಿಖೆ ಎದುರಿಸುವ ಅವಶ್ಯಕತೆ ಇರುವುದಿಲ್ಲ. ತನಿಖೆಯಿಂದ ಪಾರಾಗಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ವೇಳೆ ವಿಜಯನಗರ ಹರಪ್ಪನಹಳ್ಳಿ ಪಟ್ಟಣದಲ್ಲಿ ನಡೆದಿದ್ದ ಬಿಜೆಪಿ ಪ್ರಚಾರ ಸಮಾವೇಶದಲ್ಲಿ ಮತದಾರರಿಗೆ ಆಮಿಷವೊಡ್ಡುವ ರೀತಿಯಲ್ಲಿ ಭಾಷಣ ಮಾಡಿದ್ದ ಆರೋಪ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ದಾಖಲಾಗಿದ್ದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ತಮ್ಮ ವಿರುದ್ಧದ ಹರಪ್ಪನಹಳ್ಳೀ ಠಾಣಾ ಪೊಲೀಸರು ದಾಖಲಿಸಿರುವ ಪ್ರಕರಣ ಹಾಗೂ ಅದರ ತನಿಖೆಯನ್ನು ರದ್ದು ಪಡಿಸುವಂತೆ ಕೋರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಮಧ್ಯಂತರ ಆದೇಶ ಮಾಡಿ ವಿಚಾರಣೆಯನ್ನು ಜು.21ಕ್ಕೆ ಮಂದೂಡಿದೆ.
ಪ್ರಕರಣದ ಹಿನ್ನೆಲೆ ಏನು?
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 2023ರ ಮೇ 7ರಂದು ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಪಟ್ಟಣದ ಐ.ಬಿ. ವೃತ್ತದಲ್ಲಿ ಬಿಜೆಪಿ ಪ್ರಚಾರ ಸಭೆ ನಡೆಸಿತ್ತು. ಈ ವೇಳೆ ಮಾತನಾಡಿದ್ದ ಜೆ.ಪಿ.ನಡ್ಡಾ ಮಾತನಾಡಿ, ಚುನಾವಣೆಯಲ್ಲಿ ಬಿಜೆಪಿ ಸೋತರೆ ಕೇಂದ್ರ ಸರ್ಕಾರದಿಂದ ಸಿಗುವ ಯೋಜನೆಗಳಿಂದ ಮತದಾರರು ವಂಚಿತರಾಗಲಿದ್ದೀರಿ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಿಸಾನ್ ಸಮ್ಮಾನ್ ಸೇರಿದಂತೆ ಕೇಂದ್ರದ ಹಲವು ಯೋಜನೆಗಳು ಬಂದ್ ಆಗಲಿವೆ ಎಂದು ಹೇಳಿಕೆ ನೀಡಿದ್ದರು.
ಇದರಿಂದ ಚುನಾವಣಾ ವಿಚಕ್ಷಣ ದಳದ ಅಧಿಕಾರಿಗಳು ಹರಪ್ಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿ, ಮತದಾರರಿಗೆ ಆಮಿಷ ಹಾಗೂ ಬೆದರಿಕೆ ಒಡ್ಡುವ ರೀತಿಯಲ್ಲಿ ನಡ್ಡಾ ಭಾಷಣ ಮಾಡಿದ್ದಾರೆ. ಆ ಮೂಲಕ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ದೂರು ನೀಡಿದ್ದರು. ಇದರಿಂದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಈ ತನಿಖೆ ರದ್ದುಪಡಿಸುವಂತೆ ಕೋರಿ ನಡ್ಡಾ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.












Click it and Unblock the Notifications