Bengaluru: ಚುರುಕುಗೊಂಡ ಮತದಾರರ ಪಟ್ಟಿ ಪರಿಷ್ಕರಣೆ, ಆನಿವಾಸಿ ಭಾರತೀಯರ ನೋಂದಣಿಗೆ ಸೂಚನೆ
ಬೆಂಗಳೂರು, ನವೆಂಬರ್ 24: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024ರ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಲು ಖುದ್ದು ಭಾರತ ಚುನಾವಣಾ ಆಯೋಗದ ಅಧಿಕಾರಿಗಳು ಬೆಂಗಳೂರು ನಗರ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಇದರ ಬೆನ್ನಲ್ಲೆ ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ, ಸೇರ್ಪಡೆ ಸೇರಿದಂತೆ ಇನ್ನಿತರ ಕೆಲಸಗಳು ಚುರುಕುಗೊಂಡಿವೆ.
ಈ ಸಂಬಂಧ ನಡೆದ ಪಟ್ಟಿಯಲ್ಲಿ ನಗರ ವ್ಯಾಪ್ತಿಯಲ್ಲಿನ ಅನಿವಾಸಿ ಭಾರತೀಯ ಮತದಾರರನ್ನು (NRI) ಗುರುತಿಸಿ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗುವಂತೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂಧು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅನಿವಾಸಿ ಭಾರತೀಯರು ನಮೂನೆ 6A ಮೂಲಕ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡೂ ಟರ್ಮಿನಲ್ ಗಳ ಪ್ರವೇಶದ್ವಾರಗಳ ಬಳಿ ಬ್ಯಾನರ್ ಗಳನ್ನು ಅಳವಡಿಸಲು ಜಿಲ್ಲಾ ಪಂಚಾಯಿತಿ ಮುಖ್ಯ ನಿರ್ವಾಹಕ ಅಧಿಕಾರಿ ಕಾಂತರಾಜು ಅವರಿಗೆ ತಿಳಿಸಿದರು.
ಬಿತ್ತಿಪತ್ರಗಳ ಮೂಲಕ ಜಾಗೃತಿ ಮೂಡಿಸಿ
ಬೆಂಗಳೂರಿನಲ್ಲಿ ಚುಣಾವಣೆಯ ಮಹತ್ವ, ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದು ಸೇರಿದಂತೆ ಸ್ವೀಪ್ ಚಟುವಟಿಕೆಗಳನ್ನು ಹೆಚ್ಚಳ ಮಾಡಿ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ನಗರದ ಆಯಾ ವಲಯ ವ್ಯಾಪ್ತಿಯ ವಲಯ ಆಯುಕ್ತರು, ಜಂಟಿ ಆಯುಕ್ತರು ಹಾಗೂ ಎಲ್ಲಾ ಕಂದಾಯ ಅಧಿಕಾರಿಗಳ ಕಛೇರಿಗಳಲ್ಲಿ ಮತದಾರ ಪಟ್ಟಿಯಲ್ಲಿ ಸೇರ್ಪಡೆಯಾಗುವ ಬಿತ್ತಿಪತ್ರಗಳನ್ನು ಅಂಟಿಸಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದರು.
ಭಾರತ ಚುನಾವಣಾ ಆಯೋಗದ ಕಾರ್ಯದರ್ಶಿ ಅಜಯ್ ಕುಮಾರ್ ವರ್ಮಾ ಅವರು, ಬೆಂಗಳೂರು ವ್ಯಾಪ್ತಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳ ನೇಮಕಾತಿಯನ್ನು ತ್ವರಿತಗತಿಯಲ್ಲಿ ಮಾಡಬೇಕು. ಅನಂತರ ಎಲ್ಲಾ ಬಿಎಲ್ಒ ಗಳು ಮನೆ-ಮನೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲ ಸೇರ್ಪಡೆಯಾಗದಿರುವವರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು. ಹೆಚ್ಚು ಹೆಚ್ಚು ವಿಶೇಷ ಅಭಿಯಾನಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾರರ ಪಟ್ಟಿಯಲ್ಲಿ ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡಲು ನಿರ್ದೇಶಿಸಿದರು.

ಮತದಾರರ ಸೇರ್ಪಡೆಗೆ ಹೆಚ್ಚು ಆದ್ಯತೆ ನೀಡಿ
ಬೆಂಗಳೂರು ವ್ಯಾಪ್ತಿಯಲ್ಲಿ ತೃತೀಯ ಲಿಂಗಿಗಳು, ಚಿಂದಿ ಆಯುವವರು, ನಿರಾಶ್ರಿತರು, ಅಲೆಮಾರಿಗಳು ಮತ್ತು ವಲಸಿಗರು, ಅಂಗವಿಕಲರು, ಯುವ ಮತ್ತು ಮೊದಲ ಬಾರಿಯ ಮತದಾರರು ಸೇರಿದಂತೆ ಇನ್ನಿತರರ ಮೇಲೆ ಹೆಚ್ಚು ಗಮನವರಿಸಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಅಗತ್ಯ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ವರ್ಮಾ ಸೂಚಿಸಿದರು.
ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಜೊತೆ ಸಭೆ
ಬೆಂಗಳೂರಿನ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ(RWAs)ಗಳ ಜೊತೆ ಸಮನ್ವಯ ಸಾಧಿಸಿ, ಆಯಾ ವಲಯ ವ್ಯಾಪ್ತಿಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ವಿಡಿಯೋ ಕಾನ್ಫಿರೆನ್ಸ್ ಮೂಲಕ ಸಭೆಗಳನ್ನು ನಡೆಸಿ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗುವಂತೆ ಪ್ರೇರೇಪಿಸಬೇಕು ಎಂದು ವಿವರಿಸಿದರು.
ನಗರದಲ್ಲಿ ಗುರುತುಪಡಿಸಿರುವ ಸಹಾಯಕ ಮತದಾರರರ ನೋಂದಣಾಧಿಕಾರಿ ಹಾಗೂ ವಲಯ ಉಪ ಆಯುಕ್ತರುಗಳಿಗೆ 18 ವರ್ಷ ಮೇಲ್ಪಟ್ಟ ಯುವ ಮತದಾರರೆಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳಲ್ಲಿ ವಿಶೇಷ ನೋಂದಣಿ ಕಾರ್ಯಕ್ರಮಗಳನ್ನು ಆಯೋಜಿಸಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡುವ ಕೆಲಸ ಮಾಡಬೇಕೆಂದರು.
ಬೆಂಗಳೂರು ನಗರ ಚುನಾವಣಾಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ
ಬೆಂಗಳೂರು ವ್ಯಾಪ್ತಿಯಲ್ಲಿ ನಮೂನೆ 6 ಹಾಗೂ ನಮೂನೆ 7ರ ಪ್ರಗತಿಯನ್ನು ಕುರಿತು ಭಾರತೀಯ ಚುನಾವಣಾ ಆಯೋಗದ ಅಧಿಕಾರಿಗಳು ಮೆಚ್ಚುಗೆಯನ್ನು ವ್ಯಕ್ತಪಿಡಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಮರಣ ಹೊಂದಿದ ಮನೆಯವರಿಂದ ಮರಣ ಹೊಂದಿರುವ ಬಗ್ಗೆ ಖಾತರಿಪಡಿಸಿಕೊಂಡು ಪತ್ರ ಸಂಗ್ರಹಿಸುವುದು, ಮರಣ ಪ್ರಮಾಣ ಪತ್ರವನ್ನು ಸಂಗ್ರಹಿಸುವುದು ಹಾಗೂ ಬೂತ್ ಮಟ್ಟದ ಅಧಿಕಾರಿಗಳು ಮನೆಗೆ ಭೇಟಿ ನೀಡಿ ಮೃತಪಟ್ಟಿರುವ ಬಗ್ಗೆ ಖಾತರಿಪಡಿಸಿಕೊಂಡು ನಮೂನೆ 7ನ್ನು ನೀಡಿ ಮತದಾರರ ಪಟ್ಟಿಯಿಂದ ತೆಗೆಯುವ ಕಾರ್ಯವನ್ನು ಕೇಂದ್ರದ ತಂಡ ಶ್ಲಾಘಿಸಿತು.
ಕೇಂದ್ರ ಚುನಾವಣಾ ಆಯೋಗದ ಆಯೋಗದ ಅಧೀನ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್, ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್.ರಾಮಚಂದ್ರನ್, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ. ಹರೀಶ್ ಕುಮಾರ್, ಕೆ.ಎ ದಯಾನಂದ ಸೇರಿದಂತೆ ಚುನಾವಣಾ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications