'65 ವರ್ಷ ಸುಭದ್ರ ಆಡಳಿತ ನೀಡಿದ ಕಾಂಗ್ರೆಸ್ಸಿಗೆ ಮತ ನೀಡಿ'
ಬೆಂಗಳೂರು, ಏಪ್ರಿಲ್ 10 : 65 ವರ್ಷಗಳ ಕಾಲ ಸುಭದ್ರ ಆಡಳಿತ ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ನಗರದ ಬೊಮ್ಮನಹಳ್ಳಿ ಹಾಗೂ ಪದ್ಮನಾಭನಗರ ವಿಧಾನಸಭಾಕ್ಷೇತ್ರದಲ್ಲಿ ಇಂದು ಬಿರುಸಿನ ಪ್ರಚಾರ ಕೈಗೊಂಡರು. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ರಾಮಲಿಂಗಾರೆಡ್ಡಿ ಅವರು ಸಾಥ್ ನೀಡಿದರೆ, ಪದ್ಮನಾಭ ನಗರ ಕ್ಷೇತ್ರದಲ್ಲಿ ನಡೆದ ಪಾದಯಾತ್ರೆಯಲ್ಲಿ ಮಾಜಿ ಶಾಸಕ ಎಂ ಶ್ರೀನಿವಾಸ್ ಜೊತೆಯಾದರು.
'ಬಿಜೆಪಿ ಧರ್ಮ ಮತ್ತು ಜಾತಿ ಆಧಾರದ ಮೇಲೆ ದೇಶವನ್ನು ಒಡೆಯುತ್ತಿದೆ'
ಪ್ರಧಾನಿ ನರೇಂದ್ರ ಮೋದಿ ಅವರು 65 ವರ್ಷಗಳಿಂದ ಕಾಂಗ್ರೆಸ್ ದೇಶಕ್ಕೆ ಏನೂ ಕೊಡಗೆ ನೀಡಿಲ್ಲ ಎನ್ನುವ ಸುಳ್ಳು ಮಾಹಿತಿಯನ್ನು ನೀಡುತ್ತಿದ್ದಾರೆ. ಈ ಮೂಲಕ ಜನರ ದಾರಿ ತಪ್ಪಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. 65 ವರ್ಷಗಳ ಆಡಳಿತಾವಧಿಯಲ್ಲಿ ಕಾಂಗ್ರೆಸ್ ನೀಡಿದ ಕೊಡುಗೆಯಲ್ಲಿ ಶೇಕಡಾ 10 ರಷ್ಟನ್ನೂ ಮೋದಿ ಆಡಳಿತದಲ್ಲಿ ನೀಡಿಲ್ಲ ಎಂದರು. ಕಾಂಗ್ರೆಸ್ ಪಕ್ಷ ಬೆಂಗಳೂರು ಅಭಿವೃದ್ದಿಗೆ ಸಾಕಷ್ಟು ಕೊಡುಗೆಯನ್ನು ನೀಡಿದೆ.
ಬೆಂಗಳೂರು ಇಂದು ವಿಶ್ವದಲ್ಲಿ ತನ್ನದೇ ಆದ ವಿಶಿಷ್ಟ ಛಾಪನ್ನು ಹೊಂದಲು ಕಾರಣ ಕಾಂಗ್ರೆಸ್. ಅಲ್ಲದೆ, ನಿರುದ್ಯೋಗ ನಿವಾರಣೆ, ಬಡತನ ನಿವಾರಣೆ, ರೈತರ ಅಭಿವೃದ್ದಿಗೆ ಸಾಕಷ್ಟು ಯೋಜನೆಗಳನ್ನು ಕಾಂಗ್ರೆಸ್ ಪಕ್ಷ ತಂದಿದೆ. ಆದರೆ ಈ ಯಾವುದೇ ಕೊಡುಗೆಯನ್ನು ನೀಡದ ಮೋದಿ ಕೇವಲ ಧರ್ಮದ ಆಧಾರದ ಮೇಲೆ ಹಾಗೂ ಸೈನಿಕರನ್ನು ಮುಂದಿಟ್ಟುಕೊಂಡು ಮತಯಾಚಿಸುತ್ತಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಜನರು ಮೋದಿ ವಿರುದ್ದ ಮತ ನೀಡಲಿದ್ದಾರೆ ಎಂದರು.
ಕೋಮುವಾದಿ ಶಕ್ತಿಗಳನ್ನು ತಿರಸ್ಕರಿಸಿ: ಬಿ ಕೆ ಹರಿಪ್ರಸಾದ್
ಮಾಜಿ ಗೃಹಮಂತ್ರಿ ರಾಮಲಿಂಗಾ ರೆಡ್ಡಿ ಮಾತನಾಡಿ, ಅನುಭವಿ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖರಾಗಿರುವ ಹರಿಪ್ರಸಾದ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಈ ಅಭ್ಯರ್ಥಿ ಆಯ್ಕೆಯಾದಲ್ಲಿ ನಗರದ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.
ಮಾಜಿ ಶಾಸಕ ಎಂ ಶ್ರೀನಿವಾಸ್ ಮಾತನಾಡಿ, ಬಿ ಕೆ ಹರಿಪ್ರಸಾದ್ ಅವರಂತಹ ಮುತ್ಸದ್ದಿ ಕಣದಲ್ಲಿರುವುದರಿಂದ ನಾನು ಪ್ರಚಾರಕ್ಕೆ ಬಂದಿದ್ದೇನೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ದಿ ನಡೆಯಲಿದೆ ಎಂದರು.
ಸಂಜೆ ಪದ್ಮನಾಭ ನಗರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಅಭ್ಯರ್ಥಿ ಬಿ ಕೆ ಹರಿಪ್ರಸಾದ್ ಪಾದಯಾತ್ರೆಯನ್ನು ಮಾಡಿದರು. ಪಾದಯಾತ್ರೆಯ ಮೂಲಕ 3 ಕಿಮಿಗೂ ಹೆಚ್ಚು ಪ್ರಚಾರ ನಡೆಸಿದರು. ಈ ಸಂಧರ್ಭದಲ್ಲಿ ಸಾವಿರಾರು ಕಾರ್ಯಕರ್ತರು ಅವರಿಗೆ ಸಾಥ್ ನೀಡಿದರು.