ಮದ್ಯ'ರಾತ್ರಿ ಅವಧಿ ವಿಸ್ತರಣೆ ಪೊಲೀಸರಿಗೆ ಸವಾಲು
ಬೆಂಗಳೂರು, ಮಾ.4 : ನೈಟ್ ಲೈಫ್ ಅವಧಿ ವಿಸ್ತರಣೆ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್, 15-20 ದಿನಗಳಲ್ಲಿ ನೈಟ್ ಲೈಫ್ ಅವಧಿ ವಿಸ್ತರಣೆ ಬಗ್ಗೆ ಅಂತಿಮ ಆದೇಶ ಹೊರಬೀಳಲಿದೆ ಎಂದು ತಿಳಿಸಿದ್ದಾರೆ.
ಗೃಹ ಸಚಿವ ಕೆಜೆ ಜಾರ್ಜ್, ಕಾರ್ಪೋರೆಟ್ ಸಂಸ್ಥೆಗಳ ಬಹುದಿನಗಳ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದು, ಮೊದಲ ಹಂತದಲ್ಲಿ ಶುಕ್ರವಾರ ಮತ್ತು ಶನಿವಾರ ಮಾತ್ರ ಮಧ್ಯರಾತ್ರಿ 1 ಗಂಟೆಯವರೆಗೆ ಹೊಟೇಲ್, ಪಬ್, ಬಾರ್, ರೆಸ್ಟೋರೆಂಟ್ಗಳನ್ನು ತೆರೆದಿರಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದ್ದರು. [ನೈಟ್ ಲೈಫ್ ಅವಧಿ ವಿಸ್ತರಣೆಗೆ ಬಿಜೆಪಿ ಅಸಮಾಧಾನ]

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್, ಅಬಕಾರಿ ಮತ್ತು ಪೊಲೀಸ್ ಇಲಾಖೆ ಅಧಿಸೂಚನೆ ಹೊರಡಿಸಿದ ಬಳಿಕ, ನೈಟ್ ಲೈಫ್ ಅವಧಿ ವಿಸ್ತರಣೆ ಅನುಷ್ಠಾನಕ್ಕೆ ಬರಲಿದೆ. ರಾಜ್ಯ ಅಬಕಾರಿ ಮತ್ತು ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದ್ದು, 15-20 ದಿನಗಳಲ್ಲಿ ಈ ಕುರಿತು ಅಂತಿಮ ಆದೇಶ ಹೊರಬರುತ್ತದೆ ಎಂದರು. [ಬೆಂಗಳೂರಿನಲ್ಲಿ ಇನ್ನು ಮದ್ಯರಾತ್ರಿ]
ತಡರಾತ್ರಿ 1 ಗಂಟೆಯ ತನಕ ನೈಟ್ ಲೈಫ್ ಅವಧಿ ವಿಸ್ತರಣೆ ಆಗುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಗೆ ಸವಾಲಾಗಿದೆ. ಸಿಬ್ಬಂದಿ ಕೊರತೆ ಹಿನ್ನಲೆಯಲ್ಲಿ 2 ಸಾವಿರ ಗೃಹ ರಕ್ಷಕ ಸಿಬ್ಬಂದಿ ನಿಯೋಜಿಸಿಕೊಳ್ಳಲು ಚಿಂತನೆ ನಡೆಸಲಾಗುತ್ತಿದೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಕರವೇ ವಿರೋಧ : ತಡರಾತ್ರಿ 1ಗಂಟೆಯ ವರೆಗೆ ಬಾರ್, ಪಬ್ ಅವಧಿ ವಿಸ್ತರಿಸುವ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿಬಣ) ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರವೇ, ಇತ್ತೀಚೆಗೆ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ಮಹಾನಗರಗಳಲ್ಲಿ ಹೆಚ್ಚಾಗುತ್ತಿದೆ. ನಮ್ಮ ಸಂಸ್ಕೃತಿಗೆ ವಿರೋಧವಾದ ಇಂತಹ ನಿರ್ಧಾರವನ್ನು ಸರ್ಕಾರ ಹಿಂಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಆರಂಭಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.












Click it and Unblock the Notifications