ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು, ಅ.14 : ಪ್ರೇಮವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹನುಮಂತನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 6ನೇ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಛತ್ತೀಸ್ಗಢ ಮೂಲದ ಜಗದೀಶ್ ಪಾಂಡೆ ಎಂದು ಗುರುತಿಸಲಾಗಿದೆ. ಬಿಎಂಎಸ್ ಕಾಲೇಜಿನಲ್ಲಿ ಓದುತ್ತಿದ್ದ ಈತ ಹನುಮಂತನಗರದಲ್ಲಿರುವ ಕಾಲೇಜಿನ ಹಾಸ್ಟೆಲ್ನಲ್ಲಿದ್ದ. ಸೋಮವಾರ ರಾತ್ರಿ ಹಾಸ್ಟೆಲ್ ಕೊಠಡಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. [ಮಕ್ಕಳ ಪ್ರೇಮ ವಿವಾಹ, ಮನನೊಂದ ತಾಯಿ ಆತ್ಮಹತ್ಯೆ]

ಮಂಗಳವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಹನುಮಂತನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಜಗದೀಶ್ ಕೊಠಡಿಯಲ್ಲಿ ಡೆತ್ನೋಟ್ ಸಿಕ್ಕಿದ್ದು, ಪೋಷಕರು ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಅದರಲ್ಲಿ ಜಗದೀಶ್ ಬರೆದಿಟ್ಟಿದ್ದಾನೆ.
ಹನುಮಂತನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಜಗದೀಶ್ ಪಾಂಡೆ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ವಿಕ್ಟ್ರೋರಿಯಾ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಶವವನ್ನು ಅಲ್ಲಿಯೇ ಇಡಲಾಗಿದೆ. ಕುಟುಂಬದವರು ಬಂದ ನಂತರ ಮೃತದೇಹವನ್ನು ಹಸ್ತಾಂತರ ಮಾಡಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
ಆಸ್ತಿಗಾಗಿ ಮಗನ ಕೊಂದ ಅಪ್ಪ : ಆಸ್ತಿಗಾಗಿ ತಂದೆಯೇ ಮಗನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮಾವಿನಬಾವಿಯಲ್ಲಿ ನಡೆದಿದೆ. ಮಾವಿನಬಾವಿಯ ನಿವಾಸಿ ಶಂಕರಪ್ಪ (35) ತಂದೆಯಿಂದಲೇ ಕೊಲೆಯಾದ ವ್ಯಕ್ತಿ. ಆಸ್ತಿ ವಿಚಾರವಾಗಿ ತಂದೆ ಮಗನ ನಡುವೆ ಆಗಾಗ ಜಗಳವಾಗುತ್ತಿತ್ತು ಎಂದು ತಿಳಿದುಬಂದಿದ್ದು, ಸೋಮವಾರ ರಾತ್ರಿಯೂ ಜಗಳ ನಡೆದಿದೆ. ಆಗ ತಂದೆ ಮಚ್ಚಿನಿಂದ ಹಲ್ಲೆ ಮಾಡಿ ಮಗನನ್ನು ಕೊಂದು ಪರಾರಿಯಾಗಿದ್ದಾನೆ.ಲಿಂಗಸಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











Click it and Unblock the Notifications