ಮೊಸಳೆ ಕಣ್ಣೀರು ಸುರಿಸುವುದನ್ನು ಬಿಟ್ಟು, ಸಂವೇದನ ಶೀಲರಾಗಿ
ಬೆಂಗಳೂರು, ಆ.21: ನಂಜನಗೂಡಿನ ವೈದ್ಯಾಧಿಕಾರಿ ಡಾ. ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ವರೆಗೆ ಮೇಲಾಧಿಕಾರಿಗಳ ಕಿರುಕುಳ ಮಾತ್ರ ಅವರ ಸಾವಿಗೆ ಕಾರಣ ಎಂದು ಆರೋಪಿಸಲಾಗಿತ್ತು. ಇದೀಗ ರಾಜ್ಯ ಕಾಂಗ್ರೆಸ್ ಪಕ್ಷ ಮಾಡಿರುವ ಗಂಭೀರ ಆರೋಪದಿಂದ ಇಡೀ ಆತ್ಮಹತ್ಯೆ ಪ್ರಕರಣ ತಿರುವು ಪಡೆದುಕೊಂಡಿದೆ. ಕೋವಿಡ್ ಕಾಲದ ಭ್ರಷ್ಟಾಚಾರ ಅರಿತಿದ್ದೆ ಸಾವಿಗೆ ಕಾರಣ ಎಂದು ರಾಜ್ಯ ಕಾಂಗ್ರೆಸ್ ಪಕ್ಷ ಆರೋಪಿಸಿದೆ.
ಕೊರೊನಾ ವಾರಿಯರ್ ಡಾ. ನಾಗೇಂದ್ರ ಅವರ ಸಾವಿಗೆ ಕೇವಲ ಮೇಲಾಧಿಕಾರಿಗಳ ಕಿರುಕುಳ ಕಾರಣವಲ್ಲ ಎಂದು ಕಾಂಗ್ರೆಸ್ ನಾಯಕರು ಇದೀಗ ಆರೋಪ ಮಾಡಿದ್ದಾರೆ. ಹೀಗಾಗಿ ಜೊತೆಗೆ ಹಲವು ಬೇಡಿಕೆಗಳನ್ನು ರಾಜ್ಯ ಕಾಂಗ್ರೆಸ್ ಪಕ್ಷ ರಾಜ್ಯ ಬಿಜೆಪಿ ಸರ್ಕಾರದ ಎದುರು ಇಟ್ಟಿದೆ. ಜೊತೆಗೆ ಬೃಹತ್ ಮೊತ್ತದ ಪರಿಹಾರಕ್ಕೆ ಒತ್ತಾಯ ಮಾಡಲಾಗಿದೆ.
ಡಾ. ನಾಗೇಂದ್ರ ಆತ್ಮಹತ್ಯೆಗೆ ಕಾರಣವೇನು? ಇಲ್ಲಿದೆ ಸಂಪೂರ್ಣ ವಿವರ!
ಕೊರೊನಾ ವೈರಸ್ ವೇಳೆಯ ವೈದ್ಯಕೀಯ ಸಲಕರಣೆಗಳಲ್ಲಿ ಸುಮಾರು ಎರಡೂವರೆ ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್ ಪಕ್ಷದ ನಾಯಕರು ಆರೋಪ ಮಾಡಿದ್ದರು. ಜೊತೆಗೆ ಕೋವಿಡ್ ಕಾಲದ ಖರೀದಿ ಬಗ್ಗೆ ಲೆಕ್ಕಕೊಡಿ ಅಭಿಯಾನವನ್ನೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರಂಭಿಸಿದ್ದರು.
ಸರ್ಕಾರವೇ ಹೊಣೆ
ನಂಜನಗೂಡು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಅವರ ಸಾವಿಗೆ ಸಂತಾಪ ಸೂಚಿಸಿ 50 ಲಕ್ಷ ಪರಿಹಾರ ಘೋಷಿಸಿ ಸರ್ಕಾರ ಕೈತೊಳೆದುಕೊಳ್ಳುವ ಯತ್ನ ಮಾಡುತ್ತಿದೆ. ಆದರೆ ಈ ಸಾವಿನ ಸಂಪೂರ್ಣ ಹೊಣೆಯನ್ನು ನೇರವಾಗಿ ಸರ್ಕಾರವೇ ಹೊರಬೇಕು. ಜನಮೆಚ್ಚುಗೆ ಪಡೆದಿದ್ದ ವೈದ್ಯಾಧಿಕಾರಿ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.
ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇವೆ. ಇಡೀ ರಾಜ್ಯ ಇಂದು ಕೊರೊನಾ ಸೋಂಕು ಹೆಚ್ಚಳದಿಂದ ನಲುಗಿ ಹೋಗಿದೆ. ಸೋಂಕಿತರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರಕುತ್ತಿಲ್ಲ. ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿಯ ಕೊರತೆ ಜೊತೆಗೆ ಔಷಧದ ಕೊರತೆಯೂ ಕಾಡುತ್ತಿದೆ. ಸರ್ಕಾರ ಇಷ್ಟೆಲ್ಲಾ ಅವ್ಯವಸ್ಥೆ ಇದ್ದರೂ ಕಣ್ಣು ಮುಚ್ಚಿ ಕುಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಖಾಲಿ ಹುದ್ದೆಗಳ ಭರ್ತಿ ಮಾಡಿ
ಸಾವಿರಾರು ಹುದ್ದೆಗಳು ಖಾಲಿ ಇದ್ದರೂ ಭರ್ತಿ ಮಾಡದ ಕಾರಣ, ಇರುವ ವೈದ್ಯರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಇದರಿಂದ ರೋಗಿಗಳಿಗೆ ಮತ್ತು ವೈದ್ಯಕೀಯ ಸಿಬ್ಬಂದಿಗೆ ಇಬ್ಬರಿಗೂ ಅಪಾಯ ಆಗುತ್ತದೆ ಎಂದಿರುವ ಖಂಡ್ರೆ, ಕೂಡಲೇ ಅಂದರೆ 15 ದಿನಗಳ ಒಳಗಾಗಿ ಪಾರದರ್ಶಕವಾಗಿ ಆನ್ ಲೈನ್ ಮೂಲಕ ಅರ್ಹತೆಯ ಆಧಾರದ ಮೇಲೆ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಡಾ. ನಾಗೇಂದ್ರ ಆತ್ಮಹತ್ಯೆ: ಮೊಂಬತ್ತಿ ಹಚ್ಚಿ ಪ್ರತಿಭಟನೆ
ಸರ್ಕಾರದ ಕಡೆಗಣನೆ
ಕಳೆದ ಏಪ್ರಿಲ್ ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸಭೆಯಲ್ಲೇ ಖಾಲಿ ವೈದ್ಯರ ಹುದ್ದೆ ಭರ್ತಿಗೆ ತಾವು ಸಲಹೆ ಮಾಡಿದ್ದರೂ, ಸರ್ಕಾರ ಕಡೆಗಣಿಸಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗಲು ಮತ್ತು ಮರಣ ಪ್ರಮಾಣ ಸಂಖ್ಯೆ ಅಧಿಕವಾಗಲು ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ಆರೋಪಿಸಿದ್ದಾರೆ.
ಭ್ರಷ್ಟಾಚಾರ ಅರಿತಿದ್ದೆ ಡಾ. ನಾಗೇಂದ್ರ ಜೀವಕ್ಕೆ ಮುಳುವಾಯಿತಾ?
ಹೃದಯಹೀನ ಸರ್ಕಾರ
ಈ ಸರ್ಕಾರಕ್ಕೆ ಕಿವಿ, ಕಣ್ಣು, ಹೃದಯ ಸಂವೇದನೆ ಯಾವುದೂ ಇಲ್ಲ. ಮಂಜೂರಾಗಿರುವ ಹುದ್ದೆಗಳ ಭರ್ತಿಗೂ ಮೀನಾ ಮೇಷ ಎಣಿಸುತ್ತಿದೆ. ಇದರ ಪರಿಣಾಮವಾಗಿ ಹಲವು ಆಸ್ಪತ್ರೆಗಳಲ್ಲಿ ವೈದ್ಯರಿಂದ ಚಿಕಿತ್ಸೆ ಸಿಗದೆ ರೋಗಿಗಳೂ ಪರಿತಪಿಸುತ್ತಿದ್ದಾರೆ. ಇತ್ತ ವೈದ್ಯರೂ ಒತ್ತಡ ತಾಳಲಾರದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಡಾ. ನಾಗೇಂದ್ರ ಅವರ ಪ್ರಕರಣ ಸಹ ಇಂಥ ಒಂದು ಪ್ರಕರಣ ಎಂದು ಹೇಳಿದ್ದಾರೆ.
ಸರ್ಕಾರ ಕೂಡಲೆ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು. ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮೊಸಳೆ ಕಣ್ಣೀರು ಸುರಿಸುವುದನ್ನು ಬಿಟ್ಟು, ಸಂವೇದನಶೀಲರಾಗಿ ವರ್ತಿಸಬೇಕು. ತಮ್ಮ ಹೊಣೆಗಾರಿಕೆಯನ್ನು ನಿಭಾಯಿಸಬೇಕು. ಉಪಚಾರದ ಮಾತಿನಿಂದ ಸಮಸ್ಯೆ ಪರಿಹಾರವಾಗುವುದಿಲ್ಲ ಎಂಬುದನ್ನು ತಿಳಿಯಬೇಕು. ಮುಂದೆ ಇಂಥ ಘಟನೆ ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಆಗ್ರಹಿಸಿದ್ದಾರೆ.